newsics.com
ನವದೆಹಲಿ: ಬೆರಿಲ್ ಚಂಡಮಾರುತ ಹಿನ್ನೆಲೆಯಲ್ಲಿ ಬಾರ್ಬ್ಡೊಸ್ನಿಂದ ತಡವಾಗಿ ಭಾರತಕ್ಕೆ ಬಂದಿಳಿದ ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾಗೆ ದೆಹಲಿಯಲ್ಲಿ ಅದ್ಧೂರಿ ಸ್ವಾಗತ ಸಿಕ್ಕಿದೆ.
ಭಾರತಕ್ಕೆ ಬಂದಿಳಿದ ಟೀಂ ಇಂಡಿಯಾ, ಖಾಸಗಿ ಹೋಟೆಲ್ಗೆ ತೆರಳಿದ ಬಳಿಕ ಪ್ರಧಾನಿ ನರೇಂದ್ರ ಮೋದಿಯವರ ಆಹ್ವಾನದ ಮೇರೆಗೆ ಅವರ ನಿವಾಸಕ್ಕೆ ಭೇಟಿ ನೀಡಿತು.
ಪ್ರಧಾನಿ ನರೇಂದ್ರ ಮೋದಿ ವಿಶ್ವಕಪ್ ಟ್ರೋಫಿ ಗೆದ್ದ ಭಾರತ ತಂಡಕ್ಕೆ ತಮ್ಮ ನಿವಾಸದಲ್ಲಿ ಔತಣಕೂಟ ಏರ್ಪಡಿಸಿದ್ದರು. ಈ ಸಂದರ್ಭದಲ್ಲಿ ಟೀಂ ಇಂಡಿಯಾ ಆಟಗಾರರನ್ನು ಪ್ರಧಾನಿ ಮೋದಿ ಅಭಿನಂದಿಸಿದ್ದಾರೆ. ಪ್ರಧಾನಿಯವರ ಜತೆ ಮಾತುಕತೆ ಮುಗಿಸಿದ ಬಳಿಕ ಇದೀಗ ಭಾರತ ಕ್ರಿಕೆಟ್ ತಂಡವು ಮುಂಬೈನತ್ತ ಪ್ರಯಾಣ ಬೆಳೆಸಿದೆ.
ಪ್ರಧಾನಿ ನರೇಂದ್ರ ಮೋದಿ ನಿವಾಸದಲ್ಲಿ ಔತಣಕೂಟದಲ್ಲಿ ಭಾಗವಹಿಸಿದ ಟೀಂ ಇಂಡಿಯಾ, ಇದೀಗ ಸಂಜೆ 5 ಗಂಟೆಯಿಂದ ನಾರಿಮನ್ ಪಾಯಿಂಟ್ನಿಂದ ಸುಮಾರು 2 ಕಿ. ಮೀ. ದೂರ ಇರುವ ವಾಂಖೇಡೆ ಕ್ರೀಡಾಂಗಣದವರೆಗೆ ಆಟಗಾರರು ತೆರೆದ ವಾಹನದಲ್ಲಿ ಮೆರವಣಿಗೆ ನಡೆಸಲಿದ್ದಾರೆ. 2 ಗಂಟೆ ಗಳ ಕಾಲ ಮೆರವಣಿಗೆ ನಡೆಯುವ ನಿರೀಕ್ಷೆಯಿದ್ದು, ಬಳಿಕ 7 ಗಂಟೆಗೆ ಕ್ರೀಡಾಂಗಣದಲ್ಲಿ ಸನ್ಮಾನ ಕಾರ್ಯಕ್ರಮ ನಡೆಯಲಿದೆ. ಬಿಸಿಸಿಐ ಘೋಷಿಸಿರುವ 125 ಕೋಟಿ ರು. ನಗದು ಬಹುಮಾನವನ್ನೂ ಇದೇ ವೇಳೆ ಹಸ್ತಾಂತರಿಸಲಾಗುತ್ತದೆ.
ಜೂನ್ 29ರಂದು ನಡೆದ ಐಸಿಸಿ ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ, ದಕ್ಷಿಣ ಆಫ್ರಿಕಾ ಎದುರು 7 ರನ್ ರೋಚಕ ಜಯ ಸಾಧಿಸಿ 17 ವರ್ಷಗಳ ಬಳಿಕ ಎರಡನೇ ಬಾರಿಗೆ ಟಿ20 ವಿಶ್ವಕಪ್ ಟ್ರೋಫಿ ಜಯಿಸುವಲ್ಲಿ ಯಶಸ್ವಿಯಾಗಿತ್ತು. ಇದಾದ ಬಳಿಕ ಜುಲೈ 1ರಂದು ದಿನ ಟೀಂ ಇಂಡಿಯಾ ತವರಿಗೆ ವಾಪಸಾಗಬೇಕಿತ್ತು. ಆದರೆ ಬಾರ್ಬಡೊಸ್ನಲ್ಲಿ ಬೆರಿಲ್ ಚಂಡಮಾರುತ ಅಪ್ಪಳಿಸಿದ್ದರಿಂದ, ಪ್ರತಿಕೂಲ ವಾತಾವರಣ ಉಂಟಾಗಿ ಭಾರತ ತಂಡ ತವರಿಗೆ ವಾಪಸ್ಸಾಗುವುದು ತಡವಾಯಿತು.
ಗುರುವಾರ ಮುಂಜಾನೆ 6 ಗಂಟೆಗೆ ರಾಷ್ಟ್ರ ರಾಜಧಾನಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾರತ ಕ್ರಿಕೆಟ್ ತಂಡವು ಬಂದಿಳಿಯಿತು. ಭಾರತ ತಂಡವು ತವರಿಗೆ ಬಂದಿಳಿಯುತ್ತಿದ್ದಂತೆಯೇ ಅಭಿಮಾನಿಗಳಿಂದ ಭರ್ಜರಿ ಸ್ವಾಗತ ಸಿಕ್ಕಿದೆ.
TEAM INDIA MEETS PM NARENDRA MODI. 🇮🇳pic.twitter.com/tCotFhi4QP
— Mufaddal Vohra (@mufaddal_vohra) July 4, 2024
ದರ್ಶನ್ಗೆ ನಾನೊಬ್ಬಳೇ ಪತ್ನಿ, ಪವಿತ್ರಾಗೌಡ ಅಲ್ಲ: ಪೊಲೀಸ್ ಆಯುಕ್ತರಿಗೆ ಪತ್ರ ಬರೆದ ವಿಜಯಲಕ್ಷ್ಮಿ
ಇನ್ಸ್ಟಾಗ್ರಾಮ್ನಲ್ಲಿ ಮುರಿದ ಹಲ್ಲಿನ ಫೋಟೋ ನೋಡಿ ಕಾಣೆಯಾಗಿದ್ದ ಸಹೋದರನನ್ನು ಪತ್ತೆ ಹಚ್ಚಿದ ಮಹಿಳೆ