newsics.com
ಬಾಗಲಕೋಟೆ: ವಾಲ್ಮೀಕಿ ನಿಗಮ ಹಗರಣ, ಮುಡಾ ಅಕ್ರಮ ಬೆನ್ನಲ್ಲೇ ಬಾಗಲಕೋಟೆಯಲ್ಲಿ ಪ್ರವಾಸೋದ್ಯಮ ಇಲಾಖೆಯ ಬ್ಯಾಂಕ್ ಖಾತೆಯಲ್ಲಿದ್ದ ₹2.47 ಕೋಟಿಗೂ ಹೆಚ್ಚಿನ ಹಣ ಅಕ್ರಮವಾಗಿ ವರ್ಗಾವಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ.
ಅಧಿಕಾರಿಗಳ ಗಮನಕ್ಕೆ ಬಾರದೆ ಈ ಹಣದ ವರ್ಗಾವಣೆ ಆಗಿದೆ ಎಂದು ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಅಕ್ರಮವಾಗಿ ಹಣ ವರ್ಗಾವಣೆಯಾಗಿರುವ ಮಾಹಿತಿ ಬೆಳಕಿಗೆ ಬರುತ್ತಲೇ ಬಾಗಲಕೋಟೆಯ ಐಡಿಬಿಐ ಬ್ಯಾಂಕ್(IDBI) ಮ್ಯಾನೇಜರ್ ಮತ್ತು ಸಿಬ್ಬಂದಿ ವಿರುದ್ಧ ಪ್ರವಾಸೋದ್ಯಮ ಇಲಾಖೆ(Karnataka Department of Tourism) ಅಧಿಕಾರಿ ಗೋಪಾಲ ಹಿತ್ತಲಮನಿ ಅವರು ಜು.11ರಂದು ದೂರು ದಾಖಲಿಸಿದ್ದು, ತನಿಖೆ ಆರಂಭವಾಗಿದೆ.
ಅಕ್ಟೋಬರ್ 28, 2021ರಿಂದ ಫೆ.22, 2024ರ ನಡುವೆ 21 ಬಾರಿ ಹಣವನ್ನು ಅಕ್ರಮವಾಗಿ ವರ್ಗಾವಣೆ ಮಾಡಲಾಗಿದೆ ಎನ್ನಲಾಗಿದೆ.
ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ಅಧ್ಯಕ್ಷರ ಹೆಸರಲ್ಲಿ ನಗರದ ಐಡಿಬಿಐ ಬ್ಯಾಂಕ್ ಶಾಖೆಯಲ್ಲಿರುವ ಮೂರು ಖಾತೆಗಳಲ್ಲಿ ಈ ಅಕ್ರಮ ನಡೆದಿದೆ. ಮೂರು ಖಾತೆಯಿಂದ ಬೇರೆ ಬೇರೆ ಖಾತೆಗಳಿಗೆ ಅಧಿಕಾರಿಗಳ ಗಮನಕ್ಕೆ ಬಾರದೆ ಹಣವನ್ನು ವರ್ಗಾವಣೆ ಮಾಡಲಾಗಿದೆ ಎಂದು ದೂರಲಾಗಿದೆ.
ಪ್ರವಾಸೋದ್ಯಮದ ಇಲಾಖೆ ಅಧಿಕಾರಿಯೊಬ್ಬರು ಜುಲೈ ಮೊದಲ ವಾರ ಐಡಿಬಿಐ ಬ್ಯಾಂಕ್ಗೆ ಹೋಗಿ ಸ್ಟೇಟ್ಮೆಂಟ್ ತಂದಾಗ ₹1.63 ಕೋಟಿ ಹಣ ಇತ್ತು. ಅನುಮಾನಗೊಂಡು ಬ್ಯಾಂಕ್ಗೆ ಇಲಾಖೆಯಿಂದ ಹಾಕಿರುವ ಚೆಕ್ಗಳನ್ನೆಲ್ಲ ಪರಿಶೀಲಿಸಿದಾಗ ವ್ಯತ್ಯಾಸ ಗಮನಕ್ಕೆ ಬಂದಿದೆ. ಅದರಂತೆ ಮೂರು ದಿನಗಳ ಹಿಂದೆ ಬ್ಯಾಂಕ್ಗೆ ಹೋಗಿ ಸ್ಟೇಟ್ಮೆಂಟ್ ತೆಗೆಸಿದಾಗ ಬ್ಯಾಂಕ್ ಅಕೌಂಟ್ನಲ್ಲಿ ಕೇವಲ ₹2,915 ಇರುವುದು ಪತ್ತೆಯಾಗಿದೆ.
ಈ ಕುರಿತು ಪ್ರತಿಕ್ರಿಯಿಸಿರುವ ಎಸ್ಪಿ ಅಮರನಾಥ ರೆಡ್ಡಿ, ಪ್ರಕರಣವನ್ನು ಪೊಲೀಸ್ ಇಲಾಖೆ ಗಂಭೀರವಾಗಿ ತೆಗೆದುಕೊಂಡಿದೆ. ಈಗಾಗಲೇ ಜಿಲ್ಲಾಧಿಕಾರಿಗಳ ಜತೆ ಸಭೆ ಮಾಡಲಾಗಿದೆ. ಬ್ಯಾಂಕ್ ಅಧಿಕಾರಿಗಳನ್ನು ಕರೆದು ಮಾತನಾಡಿದ್ದು, ತನಿಖೆಯಲ್ಲಿ ಎಲ್ಲವೂ ಬಯಲಾಗಲಿದೆ ಎಂದು ತಿಳಿಸಿದರು.
ಕಳೆದ ಮೂರು ವರ್ಷಗಳಲ್ಲಿ ಅಕ್ರಮವಾಗಿ ಹಣ ವರ್ಗಾವಣೆಯಾಗುತ್ತಿದ್ದರೂ ಪ್ರವಾಸೋದ್ಯಮ ಇಲಾಖೆಯ ಅಧಿಕಾರಿಗಳು ಈ ಕುರಿತು ಯಾವುದೇ ಪರಿಶೀಲನೆ ನಡೆಸದೇ ಹೋಗಿದ್ದು ಅಚ್ಚರಿಗೆ ಕಾರಣವಾಗಿದೆ.