newsics.com
ನವದೆಹಲಿ: ಮೈಸೂರಿನ ಮುಡಾ ನಿವೇಶನ ಹಂಚಿಕೆ ಹಗರಣದಲ್ಲಿ ಕರ್ನಾಟಕ ಸಿಎಂ ಸಿದ್ದರಾಮಯ್ಯಗೆ (CM Siddaramaiah) ಸಂಕಷ್ಟ ಎದುರಾಗಿದೆ.
ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಶನ್ಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ (Thawar Chand Gehlot) ಅನುಮತಿ ನೀಡಿದ್ದಾರೆ. ಇದಕ್ಕೆ ಕಾಂಗ್ರೆಸ್ ಕೆಂಡಾಮಂಡಲವಾಗಿದ್ದು, ರಾಜ್ಯಪಾಲರ ವಿರುದ್ಧ ಕಿಡಿಕಾರುತ್ತಿದೆ.
ಈ ಮಧ್ಯೆ, ಮುಡಾ ಹಗರಣ ರಾಷ್ಟ್ರಮಟ್ಟದಲ್ಲೂ ಚರ್ಚೆಯಾಗುತ್ತಿದ್ದು, ಕಾಂಗ್ರೆಸ್ಗೆ ಮುಜುಗರ ಎದುರಾಗಿದೆ. ಅತ್ತ ಕಾಂಗ್ರೆಸ್ ನೇತೃತ್ವದ I.N.D.I.A. ಒಕ್ಕೂಟದ ಮಿತ್ರಪಕ್ಷ, ಮಮತಾ ಬ್ಯಾನರ್ಜಿ (Mamata Banerjee) ನೇತೃತ್ವದ ಟಿಎಂಸಿ (TMC) ಕೂಡ ಕಾಂಗ್ರೆಸ್ಗೆ ಸವಾಲು ಹಾಕಿದೆ.
ರಾಹುಲ್ ಗಾಂಧಿ ಅವರು ಕರ್ನಾಟಕ ಸಿಎಂ ಸಿದ್ದರಾಮಯ್ಯ ಅವರ ರಾಜೀನಾಮೆ ಪಡೆಯುತ್ತಾರೆಯೇ ಎಂದು ಟಿಎಂಸಿ ನಾಯಕರು ಪ್ರಶ್ನಿಸಿದ್ದಾರೆ.
ಪಶ್ಚಿಮ ಬಂಗಾಳದಲ್ಲಿ ನಡೆದ ವೈದ್ಯೆ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಮೇಲೆ ಕಾಂಗ್ರೆಸ್ ಕಿಡಿಕಾರಿತ್ತು. ಸಂತ್ರಸ್ತೆಗೆ ನ್ಯಾಯ ಒದಗಿಸುವ ಬದಲು ಆರೋಪಿಯನ್ನು ರಕ್ಷಿಸುವ ಪ್ರಯತ್ನವು ಆಸ್ಪತ್ರೆ ಮತ್ತು ಸ್ಥಳೀಯ ಆಡಳಿತದ ಮೇಲೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕುತ್ತದೆ ಎಂದು ಖುದ್ದು ರಾಹುಲ್ ಗಾಂಧಿ ಅವರೇ ಟ್ವೀಟ್ ಮಾಡಿದ್ದರು.
ಇದೀಗ ರಾಹುಲ್ ಗಾಂಧಿ ವಿರುದ್ಧ ಟಿಎಂಸಿ ನಾಯಕರು ಕಿಡಿಕಾರಿದ್ದಾರೆ. ಕರ್ನಾಟಕ ಸಿಎಂ ಸಿದ್ದರಾಮಯ್ಯ ಅವರ ಮೇಲೆ ಬಂದಿರುವ ಮುಡಾ ಆರೋಪ ಪ್ರಸ್ತಾಪಿಸಿ ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಾರ್ಟಿಗೆ ಟಿಎಂಸಿ ಟಾಂಗ್ ಕೊಟ್ಟಿದೆ.
ರಾಹುಲ್ ಗಾಂಧಿ ವಿರುದ್ಧ ಟಿಎಂಸಿ ನಾಯಕ, ರಾಜ್ಯಸಭಾ ಮಾಜಿ ಸದಸ್ಯ ಕುನಾಲ್ ಘೋಷ್ ಕಿಡಿಕಾರಿದ್ದಾರೆ. ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಕಾನೂನು ಕ್ರಮ ಜರುಗಿಸಲು ಅನುಮತಿ ನೀಡಿರುವ ಕುರಿತು ಸುದ್ದಿ ಲೇಖನದ ಕ್ಲಿಪ್ ಅನ್ನು ಅವರು ಪೋಸ್ಟ್ ಮಾಡಿದ್ದಾರೆ.
ಹಾಗಾದರೆ, @ರಾಹುಲ್ ಗಾಂಧಿ ಜೀ, ನೀವು ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೇಳುತ್ತೀರಾ? ಇದೊಂದು ಘೋರ ಭ್ರಷ್ಟಾಚಾರದ ಆರೋಪ. ಪಶ್ಚಿಮ ಬಂಗಾಳದ ಘಟನೆಯ ಬಗ್ಗೆ ಸರಿಯಾದ ಮಾಹಿತಿಯಿಲ್ಲದೆ, ಮಮತಾ ಬ್ಯಾನರ್ಜಿ ಅವರು ತೆಗೆದುಕೊಂಡ ಕ್ರಮಗಳನ್ನು ತಿಳಿಯದೆ, ನೀವು ಸಾಮಾಜಿಕ ಮಾಧ್ಯಮದಲ್ಲಿ ಕಮೆಂಟ್ ಮಾಡಿದ್ದೀರಿ. ಈಗ ನಿಮ್ಮ ಸಿಎಂ ಬಗ್ಗೆ ನೀವು ಕ್ರಮ ಕೈಗೊಳ್ಳುತ್ತೀರಾ? ಎಂದು ಖಾರವಾಗಿ ಪ್ರಶ್ನಿಸಿದ್ದಾರೆ.
ಲೋಕಸಭೆ ಚುನಾವಣೆ ಬಳಿಕ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ ಹಾಗೂ ಕಾಂಗ್ರೆಸ್ ನಡುವೆ ಅಂತರ ಕಾಣಿಸುತ್ತಿದೆ. ಪಶ್ಚಿಮ ಬಂಗಾಳ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ಹೇಳಿಕೆಯು ಎರಡು ಪಕ್ಷಗಳ ನಡುವಿನ ಘರ್ಷಣೆಗೆ ಮತ್ತಷ್ಟು ತುಪ್ಪ ಸುರಿದಿದೆ.
ಬಿಜೆಪಿಗೆ ಬಹುಮತ ಕೊರತೆ ಹಿನ್ನೆಲೆ: ಮೋದಿ ಕೈಕಟ್ಟಿದ ಮಿತ್ರಪಕ್ಷಗಳು, ಒಂದೇ ತಿಂಗಳಲ್ಲಿ ಸರ್ಕಾರದ 4 ನಿರ್ಧಾರ ಬದಲು!
ವಿವಿಧ ಮಾಧ್ಯಮಗಳಿಂದ ಕೋಲ್ಕತಾ ಅತ್ಯಾಚಾರ ಸಂತ್ರಸ್ತೆಯ ಗುರುತು ತೆಗೆಯಲು ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಸೂಚನೆ
22ನೇ ವಯಸ್ಸಿಗೆ ಯುಪಿಎಸ್ಸಿ ಪಾಸ್ ಮಾಡಿರುವ ಭಾರತದ ಕಿರಿಯ ಐಎಎಸ್ ಅಧಿಕಾರಿ ಸ್ಮಿತಾ ಸಬರ್ವಾಲ್