newsics.com
ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ವಿಶೇಷ ಸೌಲಭ್ಯ ಪಡೆದ ಪ್ರಕರಣ ಸಂಬಂಧ ನಟ ದರ್ಶನ್ ಸೇರಿದಂತೆ ನಾಲ್ವರು ಆರೋಪಿಗಳ ವಿಚಾರಣೆಗೆ ನ್ಯಾಯಾಲಯವು ಪೊಲೀಸರಿಗೆ ಮಂಗಳವಾರ ಅನುಮತಿ ನೀಡಿದೆ.
ಈ ಹಿನ್ನಲೆಯಲ್ಲಿ ದರ್ಶನ್, ಅವರ ಆಪ್ತ ನಾಗರಾಜ, ಕುಖ್ಯಾತ ರೌಡಿಗಳಾದ ನಾಗರಾಜ ಅಲಿಯಾಸ್ ವಿಲ್ಸನ್ ಗಾರ್ಡನ್ ನಾಗ, ಶ್ರೀನಿವಾಸ ಅಲಿಯಾಸ್ ಕುಳ್ಳ ಸೀನ ಹಾಗೂ ಧರ್ಮನನ್ನು ಪೊಲೀಸರು ಪ್ರಶ್ನಿಸಿ ಹೇಳಿಕೆ ಪಡೆಯಲಿದ್ದಾರೆ.
ಇದೇ ಪ್ರಕರಣ ಕುರಿತು ಕಾರಾಗೃಹದ ಅಧಿಕಾರಿಗಳನ್ನೂ ಪೊಲೀಸರು ವಿಚಾರಣೆಗೊಳಪಡಿಸಿದ್ದಾರೆ ಎಂದು ತಿಳಿದುಬಂದಿದೆ.
ವಿಶೇಷ ಸೌಲಭ್ಯ ಸಂಬಂಧ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕವಾಗಿ ಎರಡು ಎಫ್ಐಆರ್ಗಳು ದಾಖಲಾಗಿದ್ದು, ಆ ಎರಡು ಪ್ರಕರಣಗಳಲ್ಲಿ ದರ್ಶನ್ ಎ1 ಆಗಿದ್ದಾರೆ.
ಜೈಲಿನೊಳಗೆ ಕೃತ್ಯ ನಡೆದಿರುವ ಕಾರಣ ವಿಚಾರಣಾಧೀನ ಹಾಗೂ ಸಜಾ ಕೈದಿಗಳ ವಿಚಾರಣೆಗೆ ನ್ಯಾಯಾಲಯದ ಪೂರ್ವಾನುಮತಿ ಅಗತ್ಯವಾಗಿದೆ. ಈ ಹಿನ್ನೆಲೆಯಲ್ಲಿ ನಗರದ ಎಸಿಎಂಎಂ ನ್ಯಾಯಾಲಯಕ್ಕೆ ಅನುಮತಿ ಕೋರಿ ಪೊಲೀಸರು ಮನವಿ ಮಾಡಿದ್ದರು. ಈ ಮನವಿಗೆ ನ್ಯಾಯಾಲಯವು ಸಮತ್ಮಿಸಿದೆ.
ರಾಜಾತಿಥ್ಯ ಪ್ರಕರಣದ ತನಿಖೆಯ ಮೇಲುಸ್ತುವಾರಿಯನ್ನು ಖುದ್ದ ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಅವರೇ ವಹಿಸಿದ್ದಾರೆ. ಈ ಸಂಬಂಧ ಮಂಗಳವಾರ ಪರಪ್ಪನ ಅಗ್ರಹಾರ ಠಾಣೆಗೆ ಭೇಟಿ ನೀಡಿದ್ದ ಆಯುಕ್ತರು, ತನಿಖೆ ಕುರಿತು ಪೊಲೀಸರ ಜತೆ ಸಮಾಲೋಚಿಸಿದ್ದಾರೆ. ತನಿಖೆಯಲ್ಲಿ ಯಾವುದೇ ಲೋಪವಾಗದಂತೆ ನೋಡಿಕೊಳ್ಳುವಂತೆ ಅಧಿಕಾರಿಗಳಿಗೆ ಆಯುಕ್ತರು ತಾಕೀತು ಮಾಡಿದ್ದಾರೆ ಎಂದು ತಿಳಿದುಬಂದಿದೆ.