newsics.com
ನವದೆಹಲಿ: ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ವಿಚಾರವಾಗಿ ದೇಶಾದ್ಯಂತ ವ್ಯಾಪಕ ಸುದ್ದಿಗೆ ಗ್ರಾಸವಾಗಿದ್ದ ಕೋಲ್ಕತಾದ RG Kar ಆಸ್ಪತ್ರೆಯ ಮಾಜಿ ಪ್ರಾಂಶುಪಾಲ ಸಂದೀಪ್ ಘೋಷ್ ರನ್ನು CBI ಅಧಿಕಾರಿಗಳು ಸೋಮವಾರ ಬಂಧಿಸಿದ್ದಾರೆ.
ಈ ಮೂಲಕ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರ ಸಂಕಷ್ಟ ಇನ್ನಷ್ಟು ಹೆಚ್ಚಾಗಿದೆ.
ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ನಡೆದ ಹಣಕಾಸು ಅವ್ಯವಹಾರದ ಆರೋಪದ ಮೇರೆಗೆ ಸಂದೀಪ್ ಘೋಷ್ರನ್ನು ಸಿಬಿಐ ಬಂಧಿಸಿದೆ. ಸಿಬಿಐ ಇತ್ತೀಚೆಗೆ ಘೋಷ್ ಅವರ ಅಧಿಕಾರಾವಧಿಯಲ್ಲಿ ಅಕ್ರಮಗಳ ವಿರುದ್ಧ ಎಫ್ಐಆರ್ ದಾಖಲಿಸಿತ್ತು.
ಕೋಲ್ಕತ್ತಾ ಹೈಕೋರ್ಟ್ನ ಆದೇಶದ ಮೇರೆಗೆ ಸಂದೀಪ್ ಘೋಷ್ ಮತ್ತು ಮೂರು ಖಾಸಗಿ ಕಂಪನಿಗಳ ವಿರುದ್ಧ ಸಿಬಿಐ ಎಫ್ಐಆರ್ ದಾಖಲಿಸಿದೆ. ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಆಗಸ್ಟ್ 25 ರಂದು ಸಿಬಿಐ ಘೋಷ್ ಅವರ ನಿವಾಸದ ಮೇಲೆ ದಾಳಿ ನಡೆಸಿತ್ತು ಮತ್ತು ದಿನವಿಡೀ ಶೋಧ ನಡೆಸಿತು.
ಆಗಸ್ಟ್ 9 ರಂದು ಆಸ್ಪತ್ರೆಯ ಸೆಮಿನಾರ್ ಹಾಲ್ನಲ್ಲಿ ಟ್ರೈನಿ ವೈದ್ಯೆಯ ಮೇಲೆ ಅತ್ಯಾಚಾರವೆಸಗಿ ಹತ್ಯೆಗೈದ ಪ್ರಕರಣದ ಬಗ್ಗೆಯೂ ಸಿಬಿಐ ತನಿಖೆ ನಡೆಸುತ್ತಿದೆ.
ಜಾರಿ ನಿರ್ದೇಶನಾಲಯವು ಘೋಷ್ ಅವರ ಅಧಿಕಾರಾವಧಿಯಲ್ಲಿ ಹಣಕಾಸು ಅಕ್ರಮಗಳ ಆರೋಪದ ಮೇಲೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ತನಿಖೆ ನಡೆಸುತ್ತಿದೆ. ಘೋಷ್ ವಿರುದ್ಧದ ಆರೋಪದ ಹಿನ್ನೆಲೆಯಲ್ಲಿ ಭಾರತೀಯ ವೈದ್ಯಕೀಯ ಸಂಘ ಇತ್ತೀಚೆಗೆ ಅವರ ಸದಸ್ಯತ್ವವನ್ನು ರದ್ದುಗೊಳಿಸಿತ್ತು.ಘೋಷ್ ಬಂಧನ ಬೆನ್ನಲ್ಲೇ ಮಮತಾ ಬ್ಯಾನರ್ಜಿ ರಾಜೀನಾಮೆ ಆಗ್ರಹಿಸಿ ಪಶ್ಚಿಮ ಬಂಗಾಳ ಸೇರಿದಂತೆ ದೇಶಾದ್ಯಂತ ಪ್ರತಿಭಟನೆ ನಡೆದಿದೆ. ಇದೀಗ ಸಂದೀಪ್ ಘೋಷ್ ಬಂಧನ ಮಮತಾ ಸರ್ಕಾರಕ್ಕೆ ತೀವ್ರ ಹಿನ್ನಡೆ ತಂದಿದೆ. ಇತ್ತ ಮಮತಾ ಬ್ಯಾನರ್ಜಿ ನೇತತ್ವದ ಟಿಎಂಸಿ ಕೂಡ ಕೆಲ ಪ್ರತಿಭಟನೆ ನಡೆಸಿದೆ. ಇದರ ನಡುವೆ ಪ್ರಧಾನಿ ಮೋದಿಗೆ ಪತ್ರ ಬರೆದು ಅತ್ಯಾಚಾರ ಪ್ರಕರಣಗಳ ತ್ವರಿತ ವಿಚಾರಣೆಗೆ ಆಗ್ರಹಿಸಿದ್ದರು.
ಆಗಸ್ಟ್ 9 ರಂದು ರಾತ್ರಿ ಶಿಫ್ಟ್ನಲ್ಲಿದ್ದ ವೈದ್ಯೆ ಮೇಲೆ ಅತ್ಯಾಚಾರ ಎಸಗಿ ಹತ್ಯೆ ಮಾಡಲಾಗಿತ್ತು. ಆದರ ಈ ಘಟನೆ ಕುರಿತು ಎಫ್ಐಆರ್ ದಾಖಲಿಸಲು ಪಶ್ಚಿಮ ಬಂಗಾಳ ಪೊಲೀಸರು ಹಿಂದೇಟು ಹಾಕಿದ್ದರು. ವೈದ್ಯೆ ಪೋಷಕರ ಆಕ್ರಂದನ, ಇತರ ವೈದ್ಯರ ಪ್ರತಿಭಟನೆ ತೀವ್ರಗೊಳ್ಳುತ್ತಿದ್ದಂತೆ ಎಫ್ಐಆರ್ ದಾಖಲಾಗಿತ್ತು. ಬಳಿಕ ಮಮತಾ ಸರ್ಕಾರ ಎಸ್ಐಟಿ ತಂಡ ರಚಿಸಿ ತನಿಖೆಗೆ ಆದೇಶಿಸಿತ್ತು. ಆದರೆ ಕೋಲ್ಕತಾ ಹೈಕೋರ್ಟ್ ಘಟನೆ ಕುರಿತು ತೀವ್ರ ಆತಂಕ ವ್ಯಕ್ತಪಡಿಸಿತ್ತು.
https://www.newsics.com/2024/09/02/best-low-calorie-vegetables-to-lose-weight/