newsics.com
ಬೆಂಗಳೂರು: ಮೈಸೂರು ದಸರಾ ಆನೆಗಳ ಮುಂದೆ ಪೋಟೋ, ರೀಲ್ಸ್ ಮಾಡುವುದನ್ನು ನಿಷೇಧಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಈ ಸಂಬಂಧ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅಪರ ಮುಖ್ಯ ಕಾರ್ಯದರ್ಶಿ, ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಇಲಾಖೆಗೆ, ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ಪತ್ರ ಬರೆದು ಸೂಚಿಸಿದ್ದಾರೆ.
ಮೈಸೂರು ದಸರಾ ಮಹೋತ್ಸವದ ಪ್ರಧಾನ ಆಕರ್ಷಣೆಯಾದ ಜಂಬೂಸವಾರಿಯಲ್ಲಿ ಪಾಲ್ಗೊಳ್ಳಲು ಕಾಡಿನಿಂದ ನಾಡಿಗೆ ಬಂದು ಪ್ರಸ್ತುತ ಅರಮನೆಯ ಆವರಣದಲ್ಲಿ ಬೀಡುಬಿಟ್ಟಿರುವ ಸಾಕಾನೆಗಳ ಬಳಿ ಫೋಟೋಶೂಟ್ ಮತ್ತು ರೀಲ್ಸ್ ಮಾಡಲು ಅಧಿಕಾರಿಗಳೇ ಅವಕಾಶ ನೀಡಿದ್ದು, ಇದರಿಂದ ಆನೆಗಳು ವಿಚಲಿತವಾಗಿ ಅನುಚಿತವಾಗಿ ವರ್ತಿಸುತ್ತಿವೆ. ಕಳೆದ ಕೆಲವು ದಿನಗಳ ಹಿಂದೆ ಕಾಂಜನ್ ಮತ್ತು ಧನಂಜಯ ಆನೆಗಳ ನಡುವೆ ಕಾದಾಟ ಆಗಲು ಇದೂ ಒಂದು ಕಾರಣವಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಆದ್ದರಿಂದ ತಕ್ಷಣದಿಂದ ಆನೆಗಳ ಜತೆ ಸೆಲ್ಫಿ, ರೀಲ್ಸ್ ಮಾಡುವುದನ್ನು ನಿಷೇಧಿಸುವಂತೆ ಸೂಚಿಸಿದ್ದಾರೆ.
ಕೆಲವರು ಆನೆಯ ದಂತ ಹಿಡಿದು, ಮತ್ತೆ ಕೆಲವರು ಸೊಂಡಿಲು ತಬ್ಬಿಕೊಂಡು ಫೋಟೋ ತೆಗೆಸಿಕೊಂಡಿರುವ ಚಿತ್ರಗಳು ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿದ್ದು, ಇದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಶಿಬಿರದಿಂದ ತಂದ ಆನೆಗಳನ್ನು ಸುರಕ್ಷಿತವಾಗಿ ಶಿಬಿರಕ್ಕೆ ಬಿಡುವವರೆಗೆ ಯಾವುದೇ ಅನಾಹುತ ಆಗದಂತೆ ಇಲಾಖೆ ಎಚ್ಚರ ವಹಿಸಬೇಕಾಗುತ್ತದೆ. ಈ ಹಿನ್ನೆಲೆಯಲ್ಲಿ ರೀಲ್ಸ್ ಮಾಡಲು ಅವಕಾಶ ನೀಡಿ ನಿರ್ಲಕ್ಷ್ಯ ತೋರಿರುವ ಅಧಿಕಾರಿ / ಸಿಬ್ಬಂದಿಗೆ ಸ್ಪಷ್ಟ ಸೂಚನೆ ನೀಡಿ, ಇನ್ನು ಮುಂದೆ ಈ ರೀತಿ ಆಗದಂತೆ ಎಚ್ಚರ ವಹಿಸಲು ಆದೇಶಿಸಿದ್ದಾರೆ.
ಯುವಕನೊಂದಿಗೆ ಹಾವನ್ನೂ ಜೀವಂತ ಸುಟ್ಟ ಗ್ರಾಮಸ್ಥರು! ಕಾರಣವೇನು ಗೊತ್ತಾ?