newsics.com
ಬೆಂಗಳೂರು: ಮುಡಾ ನಿವೇಶನ ಹಗರಣ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪ್ರಾಸಿಕ್ಯೂಷನ್ಗೆ ನೀಡಿದ ರಾಜ್ಯಪಾಲರ ಕ್ರಮ ಪ್ರಶ್ನಿಸಿ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ.
ಈ ಮೂಲಕ ರಾಜ್ಯಪಾಲರ ಪ್ರಾಸಿಕ್ಯೂಷನ್ ಕ್ರಮವನ್ನು ಹೈಕೋರ್ಟ್ ಎತ್ತಿಹಿಡಿದಿದೆ.
ಹೈಕೋರ್ಟ್ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಏಕಸದಸ್ಯ ಪೀಠ ಹಾಲ್ ನಂಬರ್ 17ರಲ್ಲಿ ಮಂಗಳವಾರ ಈ ಮಹತ್ವದ ತೀರ್ಪು ನೀಡಿದೆ. ಇದರಿಂದ ಸಿಎಂ ಸಿದ್ದರಾಮಯ್ಯ ಅವರಿಗೆ ಭಾರೀ ಹಿನ್ನಡೆಯಾಗಿದೆ.
ಮಂಗಳವಾರ ಮಧ್ಯಾಹ್ನ 12 ಗಂಟೆಗೆ ಹೈಕೋರ್ಟ್ನಲ್ಲಿ ಮುಡಾ ಹಗರಣ ಸಂಬಂಧ ತೀರ್ಪು ಪ್ರಕಟಿಸಿರುವ ನ್ಯಾಯಮೂರ್ತಿಗಳು, ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ನೀಡಿರುವ ರಾಜ್ಯಪಾಲರ ಪ್ರಾಸಿಕ್ಯೂಷನ್ ಆದೇಶವನ್ನು ಎತ್ತಿ ಹಿಡಿದಿದ್ದಾರೆ. ಈ ಮೂಲಕ ಸಿಎಂ ಸಿದ್ದರಾಮಯ್ಯಗೆ ಬಹುದೊಡ್ಡ ಸಂಕಷ್ಟ ಎದುರಾಗಿದೆ.
ವಿಚಾರಣೆ ವೇಳೆ ಮುಖ್ಯಮಂತ್ರಿಗಳ ಪರವಾಗಿ ಸುಪ್ರೀಂ ಕೋರ್ಟ್ನ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ, ಪ್ರೊ. ರವಿವರ್ಮಕುಮಾರ್ ಸುದೀರ್ಘ ವಾದ ಮಂಡಿಸಿದ್ದರು. ರಾಜ್ಯಪಾರ ಪರವಾಗಿ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ದೂರುದಾರರ ಪರವಾಗಿ ಹಿರಿಯ ವಕೀಲರಾದ ಕೆ.ಜಿ. ರಾಘವನ್ ಮತ್ತಿತರ ವಕೀಲರು ವಾದ ಮಂಡಿಸಿದ್ದರು.
ತೀರ್ಪು ಪ್ರಕಟಣೆ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲ ಜಿಲ್ಲೆಗಳು ಹಾಗೂ ಕಮಿಷನರೇಟ್ ವ್ಯಾಪ್ತಿಗಳಲ್ಲಿ ಹೆಚ್ಚಿನ ಭದ್ರತೆ ವಹಿಸುವಂತೆ ಎಸ್ಪಿ ಹಾಗೂ ಡಿಸಿಪಿಗಳಿಗೆ ಡಿಜಿ ಮತ್ತು ಐಜಿಪಿ ಅಲೋಕ್ ಮೋಹನ್ ಸೂಚಿಸಿದ್ದಾರೆ.
ಸಿಎಂ ಸಿದ್ಧರಾಮಯ್ಯ ವಿರುದ್ಧ ಮುಡಾ ಹಗರಣದ ಆರೋಪ ಕೇಳಿಬಂದಿತ್ತು. ಈ ಪ್ರಕರಣ ಸಂಬಂಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅನುಮತಿ ನೀಡಿದ್ದರು. ರಾಜ್ಯಪಾಲರು ಮುಡಾ ಹಗರಣ ಸಂಬಂಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿದ್ದನ್ನು ಪ್ರಶ್ನಿಸಿ ಸಿಎಂ ಸಿದ್ಧರಾಮಯ್ಯ ಅವರು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ವಾದ ಪ್ರತಿವಾದವನ್ನು ಆಲಿಸಿದ್ದ ಹೈಕೋರ್ಟ್ ಮಹತ್ವದ ತೀರ್ಪು ಪ್ರಕಟಿಸಿದೆ.
ರಾಜಕೀಯ ವಾಗ್ವಾದ, ಪ್ರತಿಭಟನೆ, ಹಲವು ರೀತಿಯ ಲೆಕ್ಕಾಚಾರಕ್ಕೆ ಕಾರಣವಾಗಿದ್ದ ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳವಾರ(ಸೆ.24) ತೀರ್ಪು ಪ್ರಕಟವಾಗಿದ್ದು, ಮುಖ್ಯಮಂತ್ರಿಗಳ ಅರ್ಜಿ ಕುರಿತಾಗಿ ಘಟಾನುಘಟಿ ವಕೀಲರು ಸುದೀರ್ಘ ವಾದ -ಪ್ರತಿವಾದ ಮಂಡಿಸಿದ್ದರು.