newsics.com
ಮಡಿಕೇರಿ: ಕನ್ನಡ ನಾಡಿನ ಜೀವನದಿ ಕಾವೇರಿಯ ಉಗಮ ಸ್ಥಳವಾದ ತಲಕಾವೇರಿಯಲ್ಲಿ ತುಲಾ ಸಂಕ್ರಮಣದ ವಿಶೇಷ ಶುಭ ದಿನವಾದ ಗುರುವಾರ ಬೆಳಗ್ಗೆ ಕಾವೇರಿಯ ಪವಿತ್ರ ತೀರ್ಥೋದ್ಭವವಾಗಿದೆ.
ಭಾಗಮಂಡಲದ ತಲಕಾವೇರಿಯಲ್ಲಿ ಗುರುವಾರ ಒಂದು ನಿಮಿಷ ತಡವಾಗಿ ಅಂದರೆ, ಬೆಳಗ್ಗೆ 7 ಗಂಟೆ 41 ನಿಮಿಷಕ್ಕೆ ಬ್ರಹ್ಮ ಕುಂಡಿಕೆಯಲ್ಲಿ ಕಾವೇರಿ ತಾಯಿ ದರ್ಶನ ನೀಡಿದ್ದಾಳೆ. ಸಹಸ್ರಾರು ಭಕ್ತರು ಈ ಪುಣ್ಯ ಕ್ಷಣವನ್ನು ಕಣ್ತುಂಬಿಕೊಂಡಿದ್ದಾರೆ.
ಬ್ರಹ್ಮಗಿರಿ ತಪ್ಪಲಿನ ಕಾವೇರಿ ಕ್ಷೇತ್ರದಲ್ಲಿ ಭಕ್ತರ ಹರ್ಷೋದ್ಘಾರದ ನಡುವೆ ತೀರ್ಥ ಸ್ವರೂಪಿಣಿಯಾದ ಕಾವೇರಿ ಮಾತೆಯ ತೀರ್ಥೋದ್ಭವಾಗಿದ್ದು, ಸಾವಿರಾರು ಭಕ್ತರು ಈ ಕ್ಷಣವನ್ನು ಕಣ್ತುಂಬಿಕೊಂಡಿದ್ದಾರೆ. ಪ್ರಧಾನ ಅರ್ಚಕ ಪ್ರಶಾಂತ್ ಆಚಾರ್ ನೇತೃತ್ವದಲ್ಲಿ 9 ಅರ್ಚಕ ಸಮೂಹದಿಂದ ಕಾವೇರಿ ಮಾತೆಗೆ ಸಾಂಪ್ರದಾಯಿಕ ಪೂಜೆ ನೆರವೇರಿಸಲಾಗಿದೆ.
ತೀರ್ಥೋದ್ಭವಾಗುತ್ತಿದ್ದಂತೆ ಅರ್ಚಕರು ಅಲ್ಲಿದ್ದ ಭಕ್ತರ ಮೇಲೆ ತೀರ್ಥ ಸಿಂಪಡಣೆ ಮಾಡಿದ್ದಾರೆ. ಸಾಂಪ್ರದಾಯಿಕ ಧಿರಿಸಿನಲ್ಲಿ ಕೊಡವರು ಸಹಸ್ರಾರು ಸಂಖ್ಯೆಯಲ್ಲಿ ಕಾವೇರಿ ಕ್ಷೇತ್ರದಲ್ಲಿ ಸೇರಿದ್ದು, ಕಾವೇರಿ ತೀರ್ಥೋದ್ಭವ ಕ್ಷಣವನ್ನು ಕಣ್ತುಂಬಿಕೊಂಡಿದ್ದಾರೆ.
ಈ ಬಾರಿ ಸೇರಿರುವ ಸಾವಿರಾರು ಭಕ್ತರಿಗೆ ದೇವಾಲಯದ ಅನ್ನ ಪ್ರಸಾದ ಸಭಾಭವನದಲ್ಲಿ ಕೊಡಗು ಏಕೀಕರಣ ರಂಗದ ವತಿಯಿಂದ ಉಪಾಹಾರ ವಿತರಣೆ ಮಾಡಲಾಗಿದೆ.
ಇನ್ನು ಒಂದು ತಿಂಗಳ ಕಾಲ ಕಾವೇರಿ ತುಲಾ ಸಂಕ್ರಮಣ ಜಾತ್ರೆ ನಡೆಯಲಿದ್ದು, ಸಕಲ ಸಿದ್ಧತೆಗಳು ಪೂರ್ಣಗೊಂಡಿವೆ.
ಹೋಟೆಲ್ ಬಾಲ್ಕನಿಯಿಂದ ಬಿದ್ದು ಒನ್ ಡೈರೆಕ್ಷನ್ ಮಾಜಿ ಗಾಯಕ ಲಿಯಾಮ್ ಸಾವು
ಬೆಂಗಳೂರಿನ ಲಾಡ್ಜ್ನಲ್ಲಿ ತೀರ್ಥಹಳ್ಳಿ ತಹಸೀಲ್ದಾರ್ ಶವ ಪತ್ತೆ, ಸಾವಿಗೇನು ಕಾರಣ?