newsics.com
ಬೆಂಗಳೂರು: ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದ್ದ ಕೋವಿಡ್ ಹಗರಣಕ್ಕೆ ಸಂಬಂಧಪಟ್ಟಂತೆ ಪಿಪಿಇ ಕಿಟ್ ಹಾಗೂ ಇತರೆ ಸಾಮಾಗ್ರಿ ಖರೀದಿಯಲ್ಲಿ ಅಕ್ರಮ ನಡೆದಿರುವುದು ದೃಢಪಟ್ಟಿದೆ ಎಂದು ನ್ಯಾಯಮೂರ್ತಿ ಜಾನ್ ಮೈಕೆಲ್ ಡಿ’ಕುನ್ಹಾ ಆಯೋಗ ಹೇಳಿದೆ.
ಹೌದು, ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೋವಿಡ್ ಗೆ ಸಂಬಂಧಿಸಿದಂತೆ ಪಿಪಿಇ ಕಿಟ್ ಹಾಗೂ ಇತರೆ ಸಾಮಗ್ರಿಗಳ ಖರೀದಿಯಲ್ಲಿ ಅಕ್ರಮ ನಡೆದಿರುವುದು ದೃಢವಾಗಿದೆ ಎಂದು ನ್ಯಾಯಮೂರ್ತಿ ಜಾನ್ ಮೈಕೆಲ್ ಡಿ ಕುನ್ಹಾ ಆಯೋಗ ತಿಳಿಸಿದೆ.
ಈ ಹಿನ್ನೆಲೆಯಲ್ಲಿ ಅಂದಿನ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಆರೋಗ್ಯ ಸಚಿವರಾಗಿದ್ದ ಬಿ.ಶ್ರೀರಾಮುಲು ವಿರುದ್ಧ ಪ್ರಾಸಿಕ್ಯೂಷನ್ ಗೆ ಆಯೋಗ ಶಿಫಾರಸು ಮಾಡಿದೆ.
ಅಂದಿನ ಬಿಜೆಪಿ ಸರ್ಕಾರ ಚೀನಾ ಕಂಪನಿಯಿಂದ ಪಿಪಿಇ ಕಿಟ್ ಖರೀದಿ ಮಾಡಿತ್ತು. ಪಿಪಿಇ ಕಿಟ್ ಖರೀದಿ ವೇಳೆ ದರದಲ್ಲಿ ಭಾರಿ ವ್ಯತ್ಯಾಸ ಕಂಡುಬಂದಿದೆ. ದರ ವ್ಯತ್ಯಾಸದಿಂದ ಪಿಪಿಇ ಕಿಟ್ ಪೂರೈಕೆದಾರರಿಗೆ 14.21 ಕೋಟಿ ರೂ ಲಾಭವಾಗಿದೆ. ಪೂರೈಕೆದಾರರಿಗೆ ಲಾಭ ಮಾಡಿಕೊಡುವ ದುರುದ್ದೇಶದಿಂದ ಅಕ್ರಮವೆಸಗಲಾಗಿದೆ ಎಂದು ವರದಿ ತಿಳಿಸಿದೆ.
ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಜಾನ್ ಮೈಕೆಲ್ ಡಿ ಕುನ್ಹಾ ನೇತೃತ್ವದಲ್ಲಿ 2023ರ ಆ.25ರಂದು ತನಿಖಾ ಆಯೋಗ ರಚನೆಯಾಗಿದ್ದು, ಈಗಾಗಲೇ ಆಯೋಗ ಮಧ್ಯಂತರ ವರದಿ ಸಲ್ಲಿಸಿದೆ. ಒಟ್ಟು 769ಕೋಟಿ ರೂ ಅವ್ಯವಹಾರ ನಡೆದಿದೆ ಎಂದು ತಿಳಿಸಿದೆ. ಮಾಜಿ ಸಿಎಂ ಯಡಿಯೂರಪ್ಪ ಹಾಗೂ ಶ್ರೀರಾಮುಲು ವಿರುದ್ಧ ಪ್ರಾಸಿಕ್ಯೂಷನ್ ಗೆ ಶಿಫಾರಸು ಮಾಡಿದ್ದು, ಇಬ್ಬರು ನಾಯಕರಿಗೆ ಸಂಕಷ್ಟ ಎದುರಾಗಿದೆ.