newsics.com
ಬೆಂಗಳೂರು: ‘ಬಿಜೆಪಿ ಅವರಿಗಿಂತ ಕರಿಯ ಕುಮಾರಸ್ವಾಮಿ ಖತರ್ನಾಕ್..’ ಎಂದು ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದ್ದು ವಿವಾದಕ್ಕೆ ಕಾರಣವಾಗಿದೆ. ಈ ಹಿನ್ನೆಲೆ ಜನಾಂಗೀಯ ದ್ವೇಷಿ ಜಮೀರ್ ಅಹ್ಮದ್ ಖಾನ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಜೆಡಿಎಸ್ ಒತ್ತಾಯ ಮಾಡಿದೆ.
ಹೌದು, ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ವಿರುದ್ಧ ಸಚಿವ ಜಮೀರ್ ಅಹ್ಮದ್ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ. ಭಾಷಣದ ಮಧ್ಯೆ “ಕರಿಯ ಕುಮಾರಸ್ವಾಮಿ” ಎಂದು ಟೀಕಿಸಿದ್ದಾರೆ. ಈ ಮೂಲಕ ಕಪ್ಪು ವರ್ಣದ ಜನಾಂಗೀಯ ನಿಂದನೆ ಮಾಡಿದ್ದಾರೆ.
ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಿಪಿ ಯೋಗೇಶ್ವರ ಪರವಾಗಿ ಜಮೀರ್ ಅಹ್ಮದ್ ಪ್ರಚಾರಕ್ಕೆ ಇಳಿದಿದ್ದರು. ಪ್ರಚಾರ ಭಾಷಣದಲ್ಲಿ ಹೆಚ್ಡಿ ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ಮಾಡುವ ಭರದಲ್ಲಿ “ಬಿಜೆಪಿಯವರಿಗಿಂತ ಕಾಲಾ ಕುಮಾರಸ್ವಾಮಿ (ಕರಿಯ ಕುಮಾರಸ್ವಾಮಿ) ಹೆಚ್ಚು ಖತರ್ನಾಕ್” ಎಂದು ಉರ್ದುವಿನಲ್ಲಿ ಹೇಳಿದ್ದಾರೆ. ಹೀಗಾಗಿ, ಕಪ್ಪು ವರ್ಣದವರ ವಿರುದ್ಧ ಜಮೀರ್ ಜನಾಂಗೀಯ ನಿಂದನೆ ಮಾಡಿದ್ದಾರೆ ಎನ್ನುವ ಆರೋಪಗಳು ಕೇಳಿ ಬಂದಿದ್ದು, ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಲಾಗುತ್ತಿದೆ.

ಈ ಬಗ್ಗೆ ಟ್ವೀಟ್ ಮಾಡಿರುವ ಜೆಡಿಎಸ್, ‘ವರ್ಣನಿಂದಕ, ಜನಾಂಗೀಯ ದ್ವೇಷಿ ಮಿಸ್ಟರ್ ಜಮೀರ್, ನಿನ್ನನ್ನು ರಾಜಕೀಯವಾಗಿ ಬೆಳೆಸಿದ್ದ ದೇವೇಗೌಡರ ಕುಟುಂಬವನ್ನೇ ಖರೀದಿ ಮಾಡುತ್ತೇನೆ ಎನ್ನುವ ನಿನ್ನ ಅಧಿಕಾರ ಮತ್ತು ದುಡ್ಡಿನ ದರ್ಪ ಹೆಚ್ಚು ದಿನ ಉಳಿಯಲ್ಲ.. ನಿನ್ನ ಸೊಕ್ಕಿನ ಮಾತಿಗೆ, ಕಪ್ಪು ವರ್ಣದ ಬಗ್ಗೆ ನಿನಗಿರುವ ಹೊಲಸು ಮನಸ್ಥಿತಿಗೆ ರಾಜ್ಯದ ಜನರು ತಕ್ಕ ಉತ್ತರ ನೀಡುತ್ತಾರೆ..’ ಎಂದು ಬರೆದಿದೆ.