newsics.com
ಮುಂಬೈ: ಮಹಾರಾಷ್ಟ್ರ ಮೈತ್ರಿಕೂಟ ಮಹಾಯುತಿಯಲ್ಲಿ ಅತಿ ಹೆಚ್ಚು ಸ್ಥಾನ ಗೆದ್ದಿರುವ ಬಿಜೆಪಿಗೆ ಸಿಎಂ ಸ್ಥಾನ ಸಿಗುವುದು ಬಹುತೇಕ ಖಚಿತವಾಗಿದೆ. ಆದರೆ, ಸಿಎಂ ಅಭ್ಯರ್ಥಿ ಯಾರಾಗಲಿದ್ದಾರೆ ಎಂಬುದು ಇನ್ನೂ ಘೋಷಣೆಯಾಗಿಲ್ಲ.
ಈ ಮಧ್ಯೆ, ಡಿಸೆಂಬರ್ 5ರಂದು ಮುಂಬೈನ ಆಜಾದ್ ಮೈದಾನದಲ್ಲಿ ಮಹಾಯುತಿ ಸರ್ಕಾರದ ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯಲಿದೆ ಎಂದು ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಮಹಾರಾಷ್ಟ್ರ ಅಧ್ಯಕ್ಷ ಚಂದ್ರಶೇಖರ ಬವಾಂಕುಲೆ ಘೋಷಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಕೂಡ ಈ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ.
ಮುಖ್ಯಮಂತ್ರಿ ಗಾದಿಗಾಗಿ ಮಹಾಯುತಿಯ ಮೂರು ಘಟಕಗಳಾದ ಬಿಜೆಪಿ, ಎನ್ಸಿಪಿ ಮತ್ತು ಶಿವಸೇನೆ ನಡುವಿನ ಜಗಳದ ನಡುವೆಯೇ ಪ್ರಮಾಣವಚನ ಸ್ವೀಕಾರದ ದಿನಾಂಕ ಘೋಷಣೆಯಾಗಿರುವುದು ಮತ್ತಷ್ಟು ಕುತೂಹಲ ಮೂಡಿಸಿದೆ.
ಮಹಾರಾಷ್ಟ್ರದ ಮುಂದಿನ ಸಂಪುಟದಲ್ಲಿ ಖಾತೆ ಹಂಚಿಕೆ ಕುರಿತು ಮೈತ್ರಿಕೂಟವು ಅಂತಿಮ ಒಪ್ಪಂದಕ್ಕೆ ಬಂದಿಲ್ಲ. ಪ್ರಮಾಣ ವಚನ ಸ್ವೀಕಾರ ಸಮಾರಂಭದ ದಿನಾಂಕ ಮತ್ತು ಸ್ಥಳವನ್ನು ನಿರ್ಧರಿಸಲಾಗಿದೆ. ಆದರೆ ಮುಂದಿನ ಮುಖ್ಯಮಂತ್ರಿಯ ಹೆಸರನ್ನು ಇನ್ನೂ ಘೋಷಿಸಲಾಗಿಲ್ಲ. ಆದರೆ, ಬಿಜೆಪಿ ನಾಯಕ ದೇವೇಂದ್ರ ಫಡ್ನವಿಸ್ ಇನ್ನೂ ಮುಖ್ಯಮಂತ್ರಿ ರೇಸ್ನಲ್ಲಿ ಮುಂಚೂಣಿಯಲ್ಲಿದ್ದಾರೆ.
ಮುಂದಿನ ಮುಖ್ಯಮಂತ್ರಿ ಕುರಿತು ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕೈಗೊಂಡ ನಿರ್ಧಾರವನ್ನು ಒಪ್ಪಿಕೊಳ್ಳುವುದಾಗಿ ನಿರ್ಗಮಿತ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ಘೋಷಿಸಿದ್ದರು. ಬಳಿಕ ಅಜಿತ್ ಪವಾರ್ ಮತ್ತು ದೇವೇಂದ್ರ ಫಡ್ನವಿಸ್ ಜತೆ ಏಕನಾಥ್ ಶಿಂಧೆ ಗುರುವಾರ ರಾತ್ರಿ ದೆಹಲಿಯಲ್ಲಿ ಅಮಿತ್ ಶಾ ಅವರನ್ನು ಭೇಟಿ ಮಾಡಿ ರಾಜ್ಯದಲ್ಲಿ ಅಧಿಕಾರ ಹಂಚಿಕೆ ಒಪ್ಪಂದದ ಕುರಿತು ಚರ್ಚಿಸಿದರು.
ಮಹಾರಾಷ್ಟ್ರದಲ್ಲಿ ಲೋಕಸಭಾ ಚುನಾವಣೆಯ ಸೋಲಿನಿಂದ ಚೇತರಿಸಿಕೊಂಡ ಬಿಜೆಪಿ 132 ಕ್ಷೇತ್ರಗಳನ್ನು ಗೆದ್ದುಕೊಂಡಿತು. ಇದು ಮಹಾಯುತಿಯ ಎಲ್ಲಾ ಮಿತ್ರಪಕ್ಷಗಳಲ್ಲಿ ಅತ್ಯಧಿಕವಾಗಿದೆ. ಏಕನಾಥ್ ಶಿಂಧೆ ಅವರ ಶಿವಸೇನೆ ಮತ್ತು ಅಜಿತ್ ಪವಾರ್ ಅವರ ಎನ್ಸಿಪಿ ಕೂಡ ಉತ್ತಮ ಪ್ರದರ್ಶನ ನೀಡಿವೆ. ಶಿವಸೇನೆ 57, ಎನ್ಸಿಪಿ 41 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ.
https://x.com/ANI/status/1862851078615904718
Birth Numbers | ನೀವು ಜನ್ಮಸಂಖ್ಯೆಗನುಗುಣವಾಗಿ ಹೀಗೆ ಮಾಡಿದರೆ ನಿಮ್ಮ ಜೀವನವೇ ಬದಲಾಗಬಹುದು!