newsics.com
ಬೆಳಗಾವಿ: ಬೆಳಗಾವಿಯಲ್ಲಿ ಪಂಚಮಸಾಲಿ ಸಮುದಾಯದವರು 2ಎ ಮೀಸಲಾತಿಗಾಗಿ ಒತ್ತಾಯಿಸಿ ನಡೆಸುತ್ತಿರುವ ಹೋರಾಟ ಹಿಂಸಾಚಾರಕ್ಕೆ ತಿರುಗಿದೆ. ಸುವರ್ಣಸೌಧದ ಬಳಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದೆ.
ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿಗಾಗಿ ಆಗ್ರಹಿಸಿ ಕೂಡಲಸಂಗಮ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಪಂಚಮಸಾಲಿ ಸಮುದಾಯದವರು ಪ್ರತಿಭಟನೆ ತೀವ್ರಗೊಳಿಸಿದ್ದು, ಈ ವೇಳೆ ಪ್ರತಿಭಟನಾಕಾರರ ಗುಂಪು ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದೆ.
ಬ್ಯಾರಿಕೇಡ್ ಗಳನ್ನು, ಪೊಲೀಸರನ್ನು ತಳ್ಳಿ ಸುವರ್ಣಸೌಧದತ್ತ ಮುನ್ನುಗ್ಗಲು ಯತ್ನಿಸಿದ್ದಾರೆ. ಈ ವೇಳೆ ಪೊಲೀಸರು ತಡೆಯಲು ಯತ್ನಿಸಿದ್ದಾರೆ. ಪೊಲೀಸರ ಮೇಲೆ ಪ್ರತಿಭಟನಾಕಾರರು ಕಲ್ಲು ತೂರಾಟ ನಡೆಸಿದ್ದಾರೆ.
ಪ್ರತಿಭಟನಾಕಾರರನ್ನು ನಿಯಂತ್ರಿಸಲು ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ. ಲಾಠಿ ಏಟಿಗೆ 20ಕ್ಕೂ ಹೆಚ್ಚು ಜನರು ಗಂಭೀರವಗಿ ಗಾಯಗೊಂಡಿದ್ದಾರೆ. ಲಾಠಿ ಚಾರ್ಜ್ ಮಾಡುತ್ತಿದ್ದಂತೆ ಮತ್ತೊಂದೆಡೆ ಪ್ರತಿಭಟನಾಕಾರರ ಆಕ್ರೋಶ ಮತ್ತಷ್ಟು ಹೆಚ್ಚಿದ್ದು, ಸಿಕ್ಕ ಸಿಕ್ಕ ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಪೊಲೀಸರ ವಾಹನಗಳು, ಕಾರುಗಳ ಗಾಜು ಪುಡಿಪುಡಿಯಾಗಿವೆ. ಘಟನೆಯಲ್ಲಿ ಹಲವು ಪೊಲೀಸರು ಗಾಯಗೊಂಡಿದ್ದಾರೆ. ಈ ವೇಳೆ ಬಸವಜಯ ಮೃತ್ಯುಂಜಯ ಸ್ವಾಮೀಜಿ ಹಾಗೂ ಶಾಸಕ ಯತ್ನಾಳ್, ಬೆಲ್ಲದ್ ಸೇರಿ ಹಲವು ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.