newsics.com
ಕೊಪ್ಪಳ: ಇಂದು ಗವಿಸಿದ್ದೇಶ್ವರ ಜಾತ್ರಾ ಮಹೋತ್ಸವ ರಥೋತ್ಸವದೊಂದಿಗೆ ಆರಂಭವಾಗಲಿದೆ. ಜಾತ್ರೆಯೂ ಮುಂದಿನ 15 ದಿನಗಳ ಕಾಲ ಜಾತ್ರೆ ನಡೆಯಲಿದೆ. ಅಲ್ಲದೇ, ಜಾತ್ರೆ ಅಂಗವಾಗಿ ಮೂರು ದಿನಗಳ ಕಾಲ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.
ಹೌದು, ಕೊಪ್ಪಳದ ಗವಿಸಿದ್ದೇಶ್ವರ ಜಾತ್ರೆ ಮೂರು ದಿನಗಳ ಕಾಲ ಅನೇಕ ಕಾರ್ಯಕ್ರಮಗಳೊಂದಿಗೆ ನಡೆಯಲಿವೆ. ಇನ್ನು ಸುಪ್ರಸಿದ್ಧ ಗವಿಮಠದ ಜಾತ್ರೆಯನ್ನು ದಕ್ಷಿಣ ಭಾರತದ ಕುಂಭಮೇಳ ಅಂತಲೇ ಕರೆಯುತ್ತಾರೆ.
ಜನವರಿ 15 ರಂದು ಗವಿಮಠದ ಜಾತ್ರೆಯ ಅಂಗವಾಗಿ ಪ್ರತಿವರ್ಷ ಗವಿಸಿದ್ದೇಶ್ವರರ ಉತ್ಸವ ಮೂರ್ತಿಯನ್ನು ರಥದಲ್ಲಿ ಸ್ಥಾಪಿಸಿ ಮೆರವಣಿಗೆ ಮಾಡಲಾಗುತ್ತದೆ. ಧಾರವಾಡದ ಸುಪ್ರಸಿದ್ಧ ಹಿಂದುಸ್ಥಾನಿ ಗಾಯಕ ಪದ್ಮಶ್ರೀ ಪಂಡಿತ ಎಮ್ ವೆಂಕಟೇಶ್ ಕುಮಾರ್ ಚಾಲನೆ ನೀಡಲಿದ್ದಾರೆ. ತುಮಕೂರು ಸಿದ್ದಗಂಗಾ ಮಠದ ಸಿದ್ದಲಿಂಗ ಮಹಾಸ್ವಾಮೀಜಿ ಸಾನಿಧ್ಯ ವಹಿಸಲಿದ್ದಾರೆ.
ಚಲನಚಿತ್ರ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಮುಖ್ಯ ಅತಿಥಿಯಾಗಿ ಆಗಮಿಸಲಿದ್ದಾರೆ. ಇನ್ನು ಬಿಜೆಪಿ ರಾಜ್ಯ ಅಧ್ಯಕ್ಷ ವಿಜಯೇಂದ್ರ ಕೂಡಾ ಜಾತ್ರೆಯಲ್ಲಿ ಭಾಗಿಯಾಗಲಿದ್ದಾರೆ.
ಸಂಜೆ 6 ಗಂಟೆಗೆ ಮಠದ ಕೈಲಾಸ ಮಂಟಪದಲ್ಲಿ ಸಂಗೀತ ಕಾರ್ಯಕ್ರಮ ನಡೆಯಲಿದ್ದು, ಸರಿಗಮಪ ಖ್ಯಾತಿಯ ಹರ್ಷ, ಧಾರವಾಡದ ಬಸವರಾಜ್ ವಂದಲಿ, ಹುಬ್ಬಳ್ಳಿಯ ಸುಜಯಿಂದ್ರ ಕುಲಕರ್ಣಿ ತಂಡದಿಂದ ಸಂಗೀತ ಕಾರ್ಯಕ್ರಮ ನಡೆಯಲಿದೆ.
ಜನವರಿ 16 ರಂದು ಸಂಜೆ 6 ಗಂಟೆಗೆ ಮಠದ ಕೈಲಾಸ ಮಂಟಪದಲ್ಲಿ ಭಕ್ತಿ ಹಿತಚಿಂತನ ಸಭೆ ನೆಡಯಲಿದೆ. ಭಾಲ್ಕಿ ಹಿರೇಮಠ ಸಂಸ್ಥಾನದ ಗುರುಬಸವ ಪಟ್ಟದೇವರು, ವನಬಳ್ಳಾರಿಯ ಬಸವಲಿಂಗ ಮಹಾಸ್ವಾಮಿಗಳು ಕಾರ್ಯಕ್ರಮದ ಸಾನಿಧ್ಯ ವಹಿಸಲಿದ್ದಾರೆ. ಮುಖ್ಯ ಅತಿಥಿಯಾಗಿ ಫಾರೆಸ್ಟ್ ಮ್ಯಾನ್ ಆಫ್ ಇಂಡಿಯಾ ಖ್ಯಾತಿಯ ಅಸ್ಸಾಂನ ಜಾದವ್ ಪಾಯೆಂಗ್ ಆಗಮಿಸಲಿದ್ದಾರೆ.
ಜನವರಿ 17 ರಂದು ಸಮಾರೋಪ ಸಮಾರಂಭ ನಡೆಯಲಿದ್ದು, ಹೆಬ್ಬಾಳ ಬೃಹನ್ಮಠದ ನಾಗಭೂಷಣ ಶಿವಾಚಾರ್ಯ ಸ್ವಾಮೀಜಿ, ಯೋಗ ಮತ್ತು ನಿಸರ್ಗ ಚಿಕಿತ್ಸಾ ಕೇಂದ್ರ ಶಿರೂರನ ಡಾ. ಬಸವಲಿಂಗ ಮಹಾಸ್ವಾಮಿಗಳು ಸಾನಿಧ್ಯ ವಹಿಸಲಿದ್ದಾರೆ. ಕರ್ನಾಟಕ ಹೈಕೋರ್ಟ್ನ ನ್ಯಾಯಮೂರ್ತಿಗಳಾದ ವಿ.ಶ್ರೀಶಾನಂದ್ ಸಮಾರೋಪ ಭಾಷಣ ಮಾಡಲಿದ್ದಾರೆ. ಕಾರ್ಯಕ್ರಮದ ನಂತರ ಖ್ಯಾತ ಹಾಸ್ಯ ಕಲಾವಿದ ಗಂಗಾವತಿ ಪ್ರಾಣೇಶ್ ಅವರಿಂದ ಹಾಸ್ಯ ಸಂಜೆ ಕಾರ್ಯಕ್ರಮ ನಡೆಯಲಿದೆ.