newsics.com
ಮಹಾಕುಂಭ ಮೇಳದಲ್ಲಿ ಮೌನಿ ಅಮಾವಾಸ್ಯೆಯಂದು ಕಾಲ್ತುಳಿತ ಸಂಭವಿಸಿದ ನಂತರ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದ್ದು, ಕೋಟ್ಯಂತರ ಜನರು ಪುಣ್ಯಸ್ನಾನ ಮಾಡುತ್ತಿದ್ದಾರೆ.
ಉತ್ತರಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಬೆಳಗ್ಗೆ ಸಂಭವಿಸಿದ ಕಾಲ್ತುಳಿತ ದುರಂತದ ಬಳಿಕ ಪರಿಸ್ಥಿತಿಯನ್ನು ಮತ್ತೆ ನಿಯಂತ್ರಣಕ್ಕೆ ತರಲಾಗಿದ್ದು, ತ್ರಿವೇಣಿ ಸಂಗಮದಲ್ಲಿ ಅಮೃತ ಸ್ನಾನಕ್ಕೆ ಮತ್ತೆ ಅವಕಾಶ ಕಲ್ಪಿಸಲಾಗಿದೆ.
ಇಂದು ಮೌನಿ ಅಮವಾಸ್ಯೆ ಹಿನ್ನೆಲೆಯಲ್ಲಿ ಮಹಾಕುಂಭಮೇಳಕ್ಕೆ ಕೋಟ್ಯಂತರ ಭಕ್ತರು ಶಾಹಿ ಸ್ನಾನಕ್ಕೆ ಹರಿದು ಬಂದಿದ್ದಾರೆ. ಮೌನಿ ಅಮವಾಸ್ಯೆ ಹಿನ್ನೆಲೆಯಲ್ಲಿ ಸಾವಿರಾರು ಸಾದು-ಸಂತರು ತ್ರಿವೇಣಿ ಸಂಗಮದಲ್ಲಿ ಪವಿತ್ರ ಅಮೃತ ಸ್ನಾನ ಮಾಡಿದರು. ಈ ವೇಳೆ ಹೆಲಿಕಾಪ್ಟರ್ ಮೂಲಕ ಸಾದು-ಸಂತರ ಮೇಲೆ ಪುಷ್ಪಮಳೆಗರೆಯಲಾಯಿತು.
ಸಾದು-ಸಂತರಿಂದ ಅಮೃತ ಸ್ನಾನದ ಬಳಿಕ ಭಕ್ತರಿಗೆ, ಸಾರ್ವಜನಿಕರಿಗೆ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಅವಕಾಶ ಮಾಡಿಕೊಡಲಾಗಿದ್ದು, ಲಕ್ಷಾಂತರ ಭಕ್ತರು ತ್ರುವೇಣಿ ಸಂಗಮದಲ್ಲಿ ಮಿಂದೆದ್ದು ಪುನೀತರಾಗಿದ್ದಾರೆ. ಮೌನಿ ಅಮವಾಸ್ಯೆಯ ದಿನದಂದು ತ್ರಿವೇಣಿ ಸಂಗಮದಲ್ಲಿ ಅಮೃತ ಸ್ನಾನ ಮಾಡಿದರೆ ಸಕಲ ಪಾಪಗಳು ಪರಿಹಾರವಾಗಲಿದೆ. ಪುಣ್ಯ ಪ್ರಾಪ್ತಿಯಾಗುತ್ತದೆ ಎಂಬ ನಂಭಿಕೆಯಿದೆ.