newsics.com
ಕೊಪ್ಪಳ: ತೋಳವೊಂದು 5 ಮರಿಗಳಿಗೆ ಜನ್ಮ ನೀಡುವ ಮೂಲಕ ಬೂದು ತೋಳಗಳ ಸಂತತಿ ಹೆಚ್ಚಳಕ್ಕೆ ಕಾರಣವಾಗಿರುವ ಘಟನೆ ಕೊಪ್ಪಳದ ಬಂಕಾಪುರ ತೋಳ ಧಾಮದಲ್ಲಿ ನಡೆದಿದೆ. ಈ ಸಂತಸದ ಸುದ್ದಿಯನ್ನು ಸಚಿವ ಈಶ್ವರ ಖಂಡ್ರೆ ಅವರು ಹಂಚಿಕೊಂಡಿದ್ದಾರೆ.
ಈ ಸಂಬಂಧ ತೋಳದ ಮರಿಗಳ ವಿಡಿಯೋ ಬಿಡುಗಡೆ ಮಾಡಿ ಅವರು ಸಂತಸ ವ್ಯಕ್ತಪಡಿಸಿದ್ದಾರೆ. ಗಂಗಾವತಿ ಪ್ರಾದೇಶಿಕ ವಲಯದ ವ್ಯಾಪ್ತಿಯಲ್ಲಿರುವ ಸುಮಾರು 332 ಹೆಕ್ಟೇರ್ ಪ್ರದೇಶದಲ್ಲಿರುವ ಬಂಕಾಪೂರ ತೋಳ ಧಾಮದ ಸಂರಕ್ಷಣೆಗೆ ಅರಣ್ಯ ಇಲಾಖೆ ಕಾಳಜಿ ವಹಿಸಿದ್ದು, ಇದು ವನ್ಯಜೀವಿಗಳಿಗೆ ಸುರಕ್ಷಿತ ತಾಣವಾಗಿದೆ. ತೋಳಗಳ ಸಂತತಿ ಹೆಚ್ಚಳಕ್ಕೂ ಇದೆ ಕಾರಣವಾಗಿದೆ ಎಂದು ಸಚಿವರು ತಿಳಿಸಿದ್ದಾರೆ.
ಕಳೆದ ತಿಂಗಳು ಇದೇ ಕುರುಚಲು ಕಾಡಿನಲ್ಲಿ ತೋಳವೊಂದು 8 ಮರಿಗಳಿಗೆ ಜನ್ಮ ನೀಡಿತ್ತು, ಈಗ ಮತ್ತೊಂದು ತೋಳ ಐದು ಮರಿಗೆ ಜನ್ಮಕೊಟ್ಟಿದೆ. ನೈಸರ್ಗಿಕ ಗುಹೆಗಳು, ಬೆಟ್ಟ ಗುಡ್ಡಗಳನ್ನೂ ಹೊಂದಿರುವ ಈ ಧಾಮದಲ್ಲಿ, ತೋಳ, ಚಿರತೆ, ನವಿಲು, ಕತ್ತೆಕಿರುಬ, ನರಿ, ಮೊಲ, ಮುಳ್ಳುಹಂದಿ ಸೇರಿದಂತೆ ಮೊದಲಾದ ಹಲವು ವನ್ಯಜೀವಿಗಳಿವೆ. ಕಳ್ಳಬೇಟೆ ತಡೆಗೂ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ ಎಂದು ಸಚಿವರು ಹೇಳಿದ್ದಾರೆ.
ಪ್ರಸ್ತುತ ಈ ಕಾಡಿನಲ್ಲಿ ಬೂದು ತೋಳಗಳ ಸಂಖ್ಯೆ 40- 45ಕ್ಕೆ ಹೆಚ್ಚಳವಾಗಿದೆ. ನವಜಾತ ತೋಳದ ಮರಿಗಳಿಗೆ ಜನರಿಂದ ತೊಂದರೆ ಆಗದಂತೆ ಎಚ್ಚರಿಕೆ ವಹಿಸಲು ಸೂಚಿಸಲಾಗಿದ್ದು, ಗುಹೆಗಳ ಬಳಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.