newsics.com
ಬೆಂಗಳೂರು: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ವಿರುದ್ಧ ಅವಹೇಳನಕಾರಿ ಪದ ಬಳಿಸಿ ನಿಂದಿಸಿದ ಆರೋಪದ ತಮ್ಮ ವಿರುದ್ಧ ದಾಖಲಿಸಿದ್ದ ಎಫ್ಐಆರ್ ರದ್ದು ಕೋರಿ ಬಿಜೆಪಿ ಎಂಎಲ್ ಸಿ ಸಿಟಿ ರವಿ ಅವರು ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಶುಕ್ರವಾರ ವಜಾಗೊಳಿಸಿದೆ.
ಸಿ.ಟಿ.ರವಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ, ಆರೋಪಿಸಿದ ಪದ ಉಚ್ಚರಿಸಿದ್ದರೆ, ಅದು ಮಹಿಳೆಯ ಘನತೆಗೆ ಹಾನಿಯಾಗುತ್ತೆ. ಇದು ಶಾಸನಸಭೆಯ ವಿನಾಯಿತಿಗೆ ಒಳಪಡುವುದಿಲ್ಲ ಎಂದು ನ್ಯಾಯಮೂರ್ತಿ. ಎಂ. ನಾಗಪ್ರಸನ್ನ ಅವರಿದ್ದ ಪೀಠ ಅಭಿಪ್ರಾಯ ವ್ಯಕ್ತಪಡಿಸಿದೆ.
ಸಿಟಿ ರವಿ ಪರವಾಗಿ ವಾದ ಮಂಡಿಸಿದ ಹಿರಿಯ ವಕೀಲ ಪ್ರಭುಲಿಂಗ ನಾವದಗಿ ಅವರು, ದೂರು ದಾಖಲಿಸುವ ಮೊದಲು, ವಿಧಾನಸಭೆಯ ಸ್ಪೀಕರ್ ಈ ವಿಷಯವನ್ನು ಕೈಗೆತ್ತಿಕೊಂಡು ವಿಚಾರಣೆ ಮುಕ್ತಾಯಗೊಳಿಸಿದರು ಎಂದು ಹೇಳಿದರು.
ವಿಧಾನ ಪರಿಷತ್ನಲ್ಲಿ ಈ ಘಟನೆ ನಡೆದಿರುವುದರಿಂದ ಸಿಟಿ ರವಿ ಅವರಿಗೆ ಶಾಸಕಾಂಗ ವಿನಾಯಿತಿ ಇದೆ ಎಂದು ನಾವದಗಿ ಅವರು ನ್ಯಾಯಾಲಯಕ್ಕೆ ತಿಳಿಸಿದ್ದರು. ಇದಕ್ಕೆ ವಿರೋಧ ವ್ಯಕ್ತಪಡಿಸಿದ ಸರ್ಕಾರಿ ಅಭಿಯೋಜಕರು, ಶಾಸಕಾಂಗದೊಳಗೆ ಯಾವುದೇ ಅಪರಾಧ ನಡೆದರೆ, ಅದನ್ನು ನಿಸ್ಸಂದೇಹವಾಗಿ ತನಿಖೆ ಮಾಡಬೇಕಾಗುತ್ತದೆ ಎಂದು ವಾದಿಸಿದರು.
ವಾದ ಪ್ರತಿವಾದ ಆಲಿಸಿದ್ದ ನ್ಯಾಯಮೂರ್ತಿ ನಾಗಪ್ರಸನ್ನ ಅವರ ಪೀಠ, ಸಿಟಿ ರವಿ ಅವರ ಅರ್ಜಿಯನ್ನು ವಜಾಗೊಳಿಸಿ ಆದೇಶ ಹೊರಡಿಸಿದೆ.