newsics.com
ಬೆಂಗಳೂರು: ಕೆಲವೆಡೆ ಅಕಾಲಿಕ ಮಳೆ, ಬಿಸಿಲು ಕೂಡ ಸಮಸ್ಯೆಯಾಗಿದೆ. ಇದರಿಂದ ಬೆಳೆಯ ಮೇಲೆ ವ್ಯತಿರಿಕ್ತ ಪರಿಣಾಮ ಬೀರಿದೆ. ಬಿಸಿಲಿನ ತಾಪದ ಜತೆಗೆ ಕಳೆದ ವಾರದಿಂದ ಸುರಿದ ಅಕಾಲಿಕ ಮಳೆಗೆ ತರಕಾರಿಗಳ ದರ ಕೆ.ಜಿ.ಗೆ ₹40 ವರೆಗೂ ಏರಿಕೆಯಾಗಿದ್ದು, ಖರೀದಿಗೆ ಗ್ರಾಹಕರು ಹಿಂದೇಟು ಹಾಕುವಂತಾಗಿದೆ.
ಬೀನ್ಸ್, ಬಟಾಣಿ, ನವಿಲುಕೋಲು, ಹೂಕೋಸು, ನಿಂಬೆ, ಸೌತೆಕಾಯಿ ಸೇರಿ ಇನ್ನಿತರ ತರಕಾರಿಗಳ ಬೆಲೆ ಹೆಚ್ಚಾಗಿದೆ. ಅವರೇಕಾಯಿ ಸೀಸನ್ ಮುಗಿದಿರುವುದರಿಂದ ಇದರ ಬೆಲೆಯೂ ಏರಿಕೆಯಾಗಿದೆ. ತೆಂಗಿನಕಾಯಿ ದರ ಹೆಚ್ಚಾಗಿರುವ ಹೊತ್ತಲ್ಲೇ ಈಗ ತರಕಾರಿ ಬೆಲೆಯೂ ಹೆಚ್ಚಾಗಿದ್ದು, ಬೆಂಗಳೂರಿನ ಬಡ ಮತ್ತು ಮಧ್ಯಮ ವರ್ಗದ ಜನರಿಗೆ ಮೇಲಿಂದ ಮೇಲೆ ಬೆಲೆ ಏರಿಕೆಯ ಬಿಸಿ ತಟ್ಟುತ್ತಿದೆ.ಮಳೆಯಿಂದಾಗಿ ಈರುಳ್ಳಿ ಕೊಳೆಯುತ್ತಿದೆ. ಹೀಗಾಗಿ ರೈತರು ಬಂದಷ್ಟು ಬೆಲೆಗೆ ತಂದು ಮಾರುತ್ತಿದ್ದಾರೆ. ಯಶವಂತಪುರ ಎಪಿಎಂಸಿಯಲ್ಲಿ ರಾಜ್ಯದ ಈರುಳ್ಳಿ ಕ್ವಿಂಟಲ್ಗೆ ಗರಿಷ್ಠ ₹1400 , ಮಹಾರಾಷ್ಟ್ರದ ಈರುಳ್ಳಿ ₹1800 ಇದೆ. ಚಿಲ್ಲರೆ ಮಾರುಕಟ್ಟೆಯಲ್ಲಿ ಕೆಜಿ ₹ 35- ₹ 40 ಇದೆ. ಈ ನಡುವೆ ಸಾಧಾರಣ ಗುಣಮಟ್ಟದ ಈರುಳ್ಳಿ-ಟೊಮೆಟೊ 5 ಕೆಜಿಗೆ ₹ 100 ನಂತೆಯೂ ಮಾರಾಟವಾಗುತ್ತಿದೆ.