newsics.com
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ನಡುವೆ ಮತ್ತೊಂದು ಮುಸುಕಿನ ಗುದ್ದಾಟ ಶುರುವಾಗಿದೆ. ಅಧಿಕಾರಿಗಳ ವರ್ಗಾವಣೆ ಸಂಬಂಧ ಇಬ್ಬರ ನಡುವೆ ಸಂಘರ್ಷಕ್ಕೆ ಕಾರಣವಾಗಿದೆ. ತಮ್ಮ ಇಲಾಖೆಯಲ್ಲಿ ಹಸ್ತಕ್ಷೇಪ ಮಾಡಿರುವುದಕ್ಕೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಆಕ್ರೋಶಗೊಂಡಿದ್ದು, ಮುಖ್ಯಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ. ಈ ಮೂಲಕ ಪರೋಕ್ಷವಾಗಿ ಸಿಎಂ ಸಿದ್ದರಾಮಯ್ಯ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಲೋಕೋಪಯೋಗಿ ಇಲಾಖೆಯಲ್ಲಿದ್ದ ಇಂಜಿನಿಯರ್ಗಳನ್ನು ಜಲಸಂಪನ್ಮೂಲ ಇಲಾಖೆಗೆ ವರ್ಗಾವಣೆ ಮಾಡಲಾಗಿತ್ತು. ಪ್ರಮುಖ ಹುದ್ದೆಗಳಿಗೆ ಅಧಿಕಾರಿಗಳು ಬದಲಾವಣೆಯಾಗಿದ್ದರು. ಸದ್ಯ ಜಲಸಂಪನ್ಮೂಲ ಖಾತೆಯನ್ನು ಹೊಂದಿರುವ ಡಿಕೆ ಶಿವಕುಮಾರ್ ಅವರ ಅನುಮತಿ ಪಡೆಯದೆ ವರ್ಗಾವಣೆ ಮಾಡಲಾಗಿದೆ ಇದು ಡಿಸಿಎಂ ಕೋಪಕ್ಕೆ ಕಾರಣವಾಗಿದೆ.
ಈ ಬಗ್ಗೆ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಡಿಕೆ ಶಿವಕುಮಾರ್ ಪತ್ರ ಬರೆದಿದ್ದು, ಕಾಂಗ್ರೆಸ್ ಸರ್ಕಾರ ರಚನೆಯಾದಾಗ ಸಂಪುಟ ಸಹೋದ್ಯೋಗಿಗಳ ನಡುವೆ ಒಂದು ಒಪ್ಪಂದವಾಗಿತ್ತು. ನನ್ನ ಇಲಾಖೆಗೆ ಸಂಬಂಧಿಸಿದ ಯಾವುದೇ ವರ್ಗಾವಣೆ ಅಥವಾ ನೇಮಕಾತಿಗಳನ್ನು ನನ್ನ ಸ್ಪಷ್ಟ ಅನುಮೋದನೆ ಇಲ್ಲದೆ ಮಾಡಬಾರದು. ಈ ವರ್ಗಾವಣೆಗಳನ್ನು ಸಂಬಂಧಪಟ್ಟ ಸಚಿವರ ಗಮನಕ್ಕೆ ತರದೆ ಮಾಡಲಾಗಿದೆ ಎಂದು ಶಿವಕುಮಾರ್ ಹೇಳಿದ್ದಾರೆ
ಹಲವು ತಿಂಗಳುಗಳುಗಳಿಂದ ಜಲಸಂಪನ್ಮೂಲ ಇಲಾಖೆಯಲ್ಲಿ ಕರ್ತವ್ಯದಲ್ಲಿದ್ದ ಐವರು ಮುಖ್ಯ ಎಂಜಿನಿಯರ್ಗಳು ಹುದ್ದೆಯ ನಿರೀಕ್ಷೆಯಲ್ಲಿದ್ದರು. ಐವರು ಎಂಜಿನಿಯರ್ಗಳನ್ನು ಖಾಲಿ ಇದ್ದ ಲೋಕೋಪಯೋಗಿ ಇಲಾಖೆಯ ಹುದ್ದೆಗಳಿಗೆ ವರ್ಗಾವಣೆ ಮಾಡಿ ಮೇ 9ರಂದು ಡಿಪಿಎಆರ್ ಅಧಿಸೂಚನೆ ಹೊರಡಿಸಿತ್ತು. ಅಧಿಸೂಚನೆ ಬೆನ್ನಲ್ಲೇ ಲೋಕೋಪಯೋಗಿ ಇಲಾಖೆಯಲ್ಲಿ ಇಂಜಿನಿಯರ್ಗಳು ಕರ್ತವ್ಯಕ್ಕೆ ಹಾಜರಾಗಿದ್ದರು.
ಆಡಳಿತಾತ್ಮಕ ಮತ್ತು ಸಾರ್ವಜನಿಕ ಹಿತದೃಷ್ಟಿಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದವರೆಗೆ ವರ್ಗಾವಣೆ ಮಾಡಲಾಗಿದೆ. ಸ್ಥಳ ನಿಯುಕ್ತಿಗೊಳಿಸಿದ ಹುದ್ದೆಯಲ್ಲಿ ಕರ್ತವ್ಯಕ್ಕೆ ವರದಿ ಮಾಡಿಕೊಂಡು, ಪ್ರಭಾರ ವರ್ಗಾವಣೆ ಪ್ರಮಾಣ ಪತ್ರವನ್ನು (ಸಿಟಿಸಿ) ಸಲ್ಲಿಸಬೇಕು ಎಂದೂ ಡಿಪಿಎಆರ್ ನಿರ್ದೇಶನ ನೀಡಿತ್ತು. ಅದರ ಅನ್ವಯ ಎಲ್ಲಾ ಐವರು ಎಂಜಿನಿಯರ್ಗಳು ಕರ್ತವ್ಯಕ್ಕೆ ವರದಿ ಮಾಡಿಕೊಂಡಿದ್ದರು.