newsics.com
ಅನಾರೋಗ್ಯದಿಂದ ಬಳಲುತ್ತಿದ್ದ ಕನ್ನಡದ ಖ್ಯಾತ ಸಾಹಿತಿಯಾಗಿರುವ ಎಚ್.ಎಸ್.ವೆಂಕಟೇಶ್ ಮೂರ್ತಿ ಕೆಂಗೇರಿಯ ಬಿಜಿಎಸ್ ಆಸ್ಪತ್ರೆಯಲ್ಲಿ ನಿಧನರಾಗಿದ್ದು, ಕನ್ನಡ ಸಾಹಿತ್ಯ ಲೋಕಕ್ಕೆ ಇದು ತುಂಬಲಾರದ ನಷ್ಟವಾಗಿದೆ. ಎಚ್.ಎಸ್. ವೆಂಕಟೇಶಮೂರ್ತಿ (ಎಚ್ಎಸ್ವಿ ) ಕನ್ನಡ ಸಾಹಿತ್ಯದ ಪ್ರಮುಖ ಕವಿ, ನಾಟಕಕಾರ, ವಿಮರ್ಶಕ ಮತ್ತು ಪ್ರಾಧ್ಯಾಪಕರಾಗಿ ದುಡಿದಿದ್ದಾರೆ. ಅವರು 1944ರ ಜೂನ್ 23ರಂದು ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಹೊದಿಗೆರೆ ಗ್ರಾಮದಲ್ಲಿ ಜನಿಸಿದರು. ಎಚ್ಎಸ್ವಿ ಅವರು ಬೆಂಗಳೂರು ವಿಶ್ವವಿದ್ಯಾಲಯದಿಂದ ಕನ್ನಡದಲ್ಲಿ ಎಮ್.ಎ ಪದವಿ ಪಡೆದಿದ್ದಾರೆ.
ಅವರು ಸುಮಾರು 30 ವರ್ಷಗಳ ಕಾಲ ಬೆಂಗಳೂರಿನ ಸೇಂಟ್ ಜೋಸೆಫ್ ವಾಣಿಜ್ಯ ಕಾಲೇಜಿನಲ್ಲಿ ಕನ್ನಡ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದರು. “ಕನ್ನಡದಲ್ಲಿ ಕಥನ ಕವನಗಳು” ಎಂಬ ಮಹಾಪ್ರಬಂಧಕ್ಕೆ ಪಿಎಚ್.ಡಿ ಪದವಿ ಪಡೆದಿದ್ದಾರೆ. ಅಲ್ಲದೇ 85ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು. ಇನ್ನು ಎಚ್ಎಸ್ವಿ ಅವರು ಕವಿತೆ, ನಾಟಕ, ಪ್ರಬಂಧ, ಕಾದಂಬರಿ, ಮಕ್ಕಳ ಸಾಹಿತ್ಯ, ಅನುವಾದ,ವಿಮರ್ಶೆ ಸೇರಿದಂತೆ ಹಲವು ಪ್ರಕಾರಗಳಲ್ಲಿ ಸಾಹಿತ್ಯ ಕ್ಷೇತ್ರಕ್ಕೆ ಕೊಡುಗೆ ನೀಡಿದ್ದಾರೆ. ನಿವೃತ್ತಿಯ ನಂತರ ಎಚ್ಎಸ್ವಿ ಬೆಂಗಳೂರಿನಲ್ಲಿ ವಾಸವಾಗಿದ್ದರು.
ಮಕ್ಕಳಿಗಾಗಿ ಕವಿತೆ, ನಾಟಕ, ಕಥೆಗಳನ್ನೂ ಬರೆದಿದ್ದಾರೆ. ಇವರು ಅನುವಾದಿಸಿದ ಕಾಳಿದಾಸನ ‘ಋತುಸಂಹಾರ‘ ಕಾವ್ಯಕೃತಿಯು ಕೇಂದ್ರ ಸಾಹಿತ್ಯ ಅಕಾಡೆಮಿಯ ಅನುವಾದ ಪುರಸ್ಕಾರವನ್ನು ಪಡೆದಿದೆ ಕ್ರಿಯಾಪರ್ವ‘, ‘ಎಷ್ಟೊಂದು ಮುಗಿಲು‘, ‘ನದೀತೀರದಲ್ಲಿ‘, ‘ಉತ್ತರಾಯಣ‘ ಮೊದಲಾದವು ಇವರ ಮುಖ್ಯ ಕಾವ್ಯಕೃತಿಗಳು. ‘ಅಗ್ನಿವರ್ಣ’, ‘ಚಿತ್ರಪಟ’, ‘ಉರಿಯ ಉಯ್ಯಾಲೆ‘, ‘ಮಂಥರೆ‘ ಮೊದಲಾದುವು ಇವರ ಮುಖ್ಯ ನಾಟಕಗಳು. ‘ಈ ಮುಖೇನ‘ ಇವರ ವೈಚಾರಿಕ ಪ್ರಬಂಧಗಳ ಸಂಪುಟ. ಕರ್ನಾಟಕ ಸಾಹಿತ್ಯ ಅಕಾಡೆಮಿ ಬಹುಮಾನ, ರಾಜ್ಯೋತ್ಸವ ಪ್ರಶಸ್ತಿ, ಆಕಾಶವಾಣಿ ರಾಷ್ಟ್ರೀಯ ಪ್ರಶಸ್ತಿ – ಇವು ಎಚ್ಎಸ್ವಿ ಅವರು ಪಡೆದ ಕೆಲವು ಮುಖ್ಯ ಗೌರವ ಪುರಸ್ಕಾರಗಳು.
ಎಚ್. ಎಸ್. ವೆಂಕಟೇಶ ಮೂರ್ತಿ ಮುಖ್ಯ ಕೃತಿಗಳು
ಕವನ ಸಂಕಲನಗಳು
ಸಿಂದಬಾದನ ಆತ್ಮಕಥೆ
ಕ್ರಿಯಾಪರ್ವ
ಒಣಮರದ ಗಿಳಿಗಳು
ಎಷ್ಟೊಂದು ಮುಗಿಲು
ನದೀತೀರದಲ್ಲಿ
ಉತ್ತರಾಯಣ ಮತ್ತು…
ನಾಟಕಗಳು
ಅಗ್ನಿವರ್ಣ
ಚಿತ್ರಪಟ
ಉರಿಯ ಉಯ್ಯಾಲೆ
ಮಂಥರೆ
ಕಂಸಾಯಣ
ಮಕ್ಕಳ ಕೃತಿಗಳು
ಹಕ್ಕಿಸಾಲು
ಅಳಿಲು ರಾಮಾಯಣ
ಅಜ್ಜೀ ಕಥೆ ಹೇಳು
ಚಿನ್ನಾರಿ ಮುತ್ತ