newsics.com
ಬೆಂಗಳೂರು: ಭಾರೀ ಜನಸಂದಣಿ ಹಿನ್ನೆಲೆಯಲ್ಲಿ ಕಬ್ಬನ್ ಪಾರ್ಕ್ ಹಾಗೂ ಡಾ.ಬಿಆರ್ ಅಂಬೇಡ್ಕರ್ ವಿಧಾನಸೌಧ ಮೆಟ್ರೋ ನಿಲ್ದಾಣದಲ್ಲಿ ತಾತ್ಕಾಲಿಕವಾಗಿ ಮೆಟ್ರೋ ಸೇವೆ ಸ್ಥಗಿತಗೊಂಡಿದೆ.
ನಿರೀಕ್ಷೆಗೂ ಮೀರಿ ಭಾರೀ ಪ್ರಮಾಣದ ಜನಸಂದಣಿ ಸೇರಿದೆ. ಮೆಟ್ರೋ ನಿಲ್ದಾಣದಲ್ಲೂ ಕಾಲ್ತುಳಿತವಾಗುವ ಸೂಚನೆ ಸಿಕ್ಕ ಹಿನ್ನೆಲೆಯಲ್ಲಿ ಕಬ್ಬನ್ ಪಾರ್ಕ್ ಹಾಗೂ ವಿಧಾನಸೌಧ ಸ್ಟೇಷನ್ನಲ್ಲಿ ಮೆಟ್ರೋ ರೈಲು ನಿಲ್ಲಿಸದೇ ಇರಲು ಬಿಎಂಆರ್ಸಿಎಲ್ ತೀರ್ಮಾನಿಸಿದೆ.
ಈ ಬಗ್ಗೆ ಬಿಎಂಆರ್ಸಿಎಲ್ ಪ್ರಕಟಣೆ ನೀಡಿದ್ದು, ‘ಆರ್ಸಿಬಿ ತಂಡದ ಅಭಿನಂದನಾ ಕಾರ್ಯಕ್ರಮಕ್ಕಾಗಿ ಮೆಟ್ರೋ ಸೇವೆಯಲ್ಲಿ ಬದಲಾವಣೆ ಆಗಿದೆ. ವಿಧಾನಸೌಧ ಮತ್ತು ಚಿನ್ನಸ್ವಾಮಿ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ತಂಡದ ಅಭಿನಂದನಾ ಸಮಾರಂಭಕ್ಕೆ ಅಪಾರ ಜನಸಂದಣಿ ಸೇರಿದೆ.
ಕಬ್ಬನ್ ಪಾರ್ಕ್ ಮತ್ತು ಡಾ. ಬಿ.ಆರ್. ಅಂಬೇಡ್ಕರ್ ವಿಧಾನಸೌಧ ನಿಲ್ದಾಣಗಳಲ್ಲಿ ಮುಂದಿನ ಸೂಚನೆ ಬರುವವರೆಗೂ ಮೆಟ್ರೋ ರೈಲುಗಳು ನಿಲ್ಲುವುದಿಲ್ಲ ಎಂದು ಘೋಷಿಸಿದೆ. ಅದರಂತೆ ಈ ನಿಲ್ದಾಣಗಳಲ್ಲಿ ಟೋಕನ್ ಮತ್ತು ಕ್ಯೂಆರ್ ಟಿಕೆಟ್ ವಿತರಣಾ ಸೇವೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.
ಎಲ್ಲಾ ಪ್ರಯಾಣಿಕರು ಈ ತಾತ್ಕಾಲಿಕ ಬದಲಾವಣೆಗಳನ್ನು ಗಮನಿಸಿ ಸುಗಮ ಪ್ರಯಾಣಕ್ಕಾಗಿ ಮೆಟ್ರೋ ಸಿಬ್ಬಂದಿಯೊಂದಿಗೆ ಸಹಕರಿಸಬೇಕೆಂದು ಬಿಎಂಆರ್ಸಿಎಲ್ ಮನವಿ ಮಾಡಿದೆ. ಪ್ರಯಾಣಿಕರು ತಮ್ಮ ಪ್ರಯಾಣವನ್ನು ಅದಕ್ಕೆ ತಕ್ಕಂತೆ ಯೋಜಿಸಿಕೊಳ್ಳುವಂತೆ ಮತ್ತು ತಮ್ಮ ಪ್ರಯಾಣದ ಅಗತ್ಯಗಳಿಗಾಗಿ ಪರ್ಯಾಯ ಮೆಟ್ರೋ ನಿಲ್ದಾಣಗಳನ್ನು ಬಳಸುವಂತೆ ಸೂಚಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.
https://x.com/OfficialBMRCL/status/1930233623485264167