newsics.com
ಬೆಂಗಳೂರು: ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಶರಾವತಿ ನದಿಗೆ ಅಡ್ಡಲಾಗಿ ನಿರ್ಮಿಸಲಾಗಿರುವ ಅಂಬಾರಗೋಡ್ಲು-ಕಳಸವಳ್ಳಿ (ಸಿಗಂದೂರು) ಸೇತುವೆ ಲೋಕಾರ್ಪಣೆಗೆ ಕೆಲವೇ ಗಂಟೆ ಬಾಕಿ ಉಳಿದಿದ್ದು, ಕಾರ್ಯಕ್ರಮ ಮುಂದೂಡುವಂತೆ ಸಿಎಂ ಸಿದ್ದರಾಮಯ್ಯ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.
ಸೋಮವಾರ (ಜು.14) ನಡೆಯಲಿರುವ ಸಿಗಂದೂರು ಸೇತುವೆ ಲೋಕಾರ್ಪಣೆ ಕಾರ್ಯಕ್ರಮವನ್ನು ಮುಂದೂಡುವಂತೆ ಸಿಎಂ ಸಿದ್ದರಾಮಯ್ಯ ಅವರು ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಪತ್ರ ಬರೆದಿದ್ದಾರೆ.
ಕಾರ್ಯಕ್ರಮದ ಆಹ್ವಾನ ಪತ್ರಿಕೆಯಲ್ಲಿ ನನ್ನ ಹೆಸರು ಮುದ್ರಿತವಾಗಿದೆ. ಆದರೆ, ಈ ಬಗ್ಗೆ ನನಗೆ ಮೊದಲೇ ಮಾಹಿತಿ ನೀಡಿಲ್ಲ. ಇದೇ ದಿನ ಕರ್ನಾಟಕ ಸರ್ಕಾರದಿಂದ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನನ್ನ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಹೀಗಾಗಿ ನಾಳೆಯ (ಜು.14) ಕಾರ್ಯಕ್ರಮ ಮುಂದೂಡಿ, ಮತ್ತೊಂದು ದಿನ ಕಾರ್ಯಕ್ರಮ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜುಲೈ 11ರಂದೇ ಪತ್ರ ಬರೆದಿದ್ದಾರೆ.
ಸಿಎಂ ಪತ್ರದಲ್ಲೇನಿದೆ?
ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಭಾರತದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದೊಂದಿಗೆ ಜುಲೈ 14, 2025 ರಂದು ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ನೆಹರು ಮೈದಾನದಲ್ಲಿ ಸಿಗಂದೂರು ಸೇತುವೆ ಲೋಕಾರ್ಪಣೆ ಕಾರ್ಯಕ್ರಮವನ್ನು ಆಯೋಜಿಸುತ್ತಿರುವುದು ನನ್ನ ಗಮನಕ್ಕೆ ಬಂದಿದೆ. ನನ್ನ ಹೆಸರನ್ನು ಆಹ್ವಾನ ಪತ್ರಿಕೆಯಲ್ಲಿ ಮುದ್ರಿಸಲಾಗಿದೆ. ಆದರೆ, ಈ ಕಾರ್ಯಕ್ರಮದ ಬಗ್ಗೆ ನನಗೆ ಮುಂಚಿತವಾಗಿ ತಿಳಿಸಿಲ್ಲ. ಅದೇ ದಿನ ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನಲ್ಲಿ ನನ್ನ ಅಧ್ಯಕ್ಷತೆಯಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನಾ ಕಾರ್ಯಕ್ರಮವನ್ನು ಈಗಾಗಲೇ ನಿಗದಿಪಡಿಸಲಾಗಿದೆ.
ರಾಜ್ಯ ಮಟ್ಟದ ಕಾರ್ಯಕ್ರಮಗಳನ್ನು ನಿಗದಿಪಡಿಸುವ ಮೊದಲು ಹೆದ್ದಾರಿ ಸಚಿವಾಲಯವು, ರಾಜ್ಯ ಸರ್ಕಾರದೊಂದಿಗೆ ಸಮಾಲೋಚಿಸಿದ್ದರೆ ಹೆಚ್ಚು ಸೂಕ್ತವಾಗುತ್ತಿತ್ತು. ಆದ್ದರಿಂದ, ಅಂತಹ ಕಾರ್ಯಕ್ರಮಗಳನ್ನು ಆಯೋಜಿಸುವಾಗ ರಾಜ್ಯ ಸರ್ಕಾರದೊಂದಿಗೆ ಸಮನ್ವಯ ಸಾಧಿಸಲು ಇಲಾಖೆಗೆ ಸೂಚಿಸಬೇಕೆಂದು ನಾನು ವಿನಂತಿಸುತ್ತೇನೆ. ಅಲ್ಲದೆ, ಈ ಕಾರ್ಯಕ್ರಮವನ್ನು ಮುಂದೂಡಲು ಮತ್ತು ನಿಮಗೆ ಅನುಕೂಲಕರವಾದ ಒಂದೆರಡು ದಿನಾಂಕಗಳನ್ನು ನನಗೆ ಒದಗಿಸುವಂತೆ ನಾನು ವಿನಂತಿಸುತ್ತೇನೆ. ಇದರಿಂದ ನಾನು ಈ ಮಹತ್ವದ ರಾಜ್ಯ ಮಟ್ಟದ ಕಾರ್ಯಕ್ರಮದಲ್ಲಿ ನಿಮ್ಮೊಂದಿಗೆ ಭಾಗಿಯಾಗಲು ಸಾಧ್ಯವಾಗುತ್ತದೆ ಎಂದು ಕೋರಿದ್ದಾರೆ.
ಸತೀಶ್ ಜಾರಕಿಹೊಳಿ ಭಾಗಿ
ಸರ್ಕಾರದ ಪರವಾಗಿ ಸಿಗಂದೂರು ಸೇತುವೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಭಾಗಿಯಾಗಲಿದ್ದಾರೆ.

Central approves gold mining in KGF ಕೆಜಿಎಫ್ನಲ್ಲಿ ಚಿನ್ನದ ಗಣಿಗಾರಿಕೆಗೆ ಕೇಂದ್ರ ಸರ್ಕಾರ ಸಮ್ಮತಿ
Flight crash ಟೇಕಾಫ್ ಆದ ಕೆಲವೇ ಕ್ಷಣಗಳಲ್ಲಿ ಹೊತ್ತಿ ಉರಿದ ವಿಮಾನ, ಹಲವರ ಸಾವು, ವಿಡಿಯೋ ನೋಡಿ