newsics.com
ಭುವನೇಶ್ವರ: ಲೈಂಗಿಕ ದೌರ್ಜನ್ಯವೆಸಗಿದ ಶಿಕ್ಷಕನ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಒಡಿಶಾದ ವಿದ್ಯಾರ್ಥಿನಿಯೊಬ್ಬಳು ಕಾಲೇಜಿನಲ್ಲೇ ಮೈಗೆ ಬೆಂಕಿ ಹಚ್ಚಿಕೊಂಡು ಸಾವನ್ನಪ್ಪಿದ್ದ ಘಟನೆ ತಣ್ಣಗಾಗುವ ಮೊದಲೇ, ಒಡಿಶಾದ ಪುರಿ ಜಿಲ್ಲೆಯಲ್ಲಿ 15 ವರ್ಷದ ಹುಡುಗಿಯೊಬ್ಬಳ ಮೈಗೆ ಅಪರಿಚಿತರು ಬೆಂಕಿ ಹಚ್ಚಿ ಪರಾರಿಯಾದ ಹೃದಯವಿದ್ರಾವಕ ಘಟನೆ ಶನಿವಾರ ನಡೆದಿದೆ.
ಸಂತ್ರಸ್ತೆಯ ದೇಹದ ಶೇ.70ರಷ್ಟು ಭಾಗ ಸುಟ್ಟುಹೋಗಿದ್ದು, ಚಿಕಿತ್ಸೆಗಾಗಿ ಭುವನೇಶ್ವರದ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಆಗಿದ್ದೇನು?: ಪುರಿ ಜಿಲ್ಲೆಯ ಬಯಬರ್ ಗ್ರಾಮದ ನುಗೋಪಾಲಪುರ ಬಸ್ತಿಯ ಬಾಲಕಿ 8ನೇ ತರಗತಿ ಬಳಿಕ ಶಾಲೆ ಬಿಟ್ಟಿದ್ದಳು. ಆಕೆಯ ತಂದೆ ಸ್ಥಳೀಯ ವಾಹನ ರಿಪೇರಿ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದರು. ಬಾಲಕಿ ಶನಿವಾರ ಬೆಳಿಗ್ಗೆ 9 ಗಂಟೆ ಸುಮಾರಿಗೆ ತನ್ನ ಗೆಳತಿಯ ಮನೆಗೆ ತೆರಳುತ್ತಿದ್ದಳು. ಆಗ ಬೈಕ್ನಲ್ಲಿ ಬಂದ ಮೂವರು ಅಪರಿಚಿತ ವ್ಯಕ್ತಿಗಳು ಆಕೆಯನ್ನು ಅಡ್ಡಗಟ್ಟಿ ಬೆದರಿಸಿ ಒತ್ತಾಯದಿಂದ ಭಾರ್ಗವಿ ನದಿ ದಡಕ್ಕೆ ಕರೆದೊಯ್ದಿದ್ದಾರೆ. ಅಲ್ಲಿ ಅವಳ ದೇಹದ ಮೇಲೆ ಪೆಟ್ರೋಲ್ ಸಿಂಪಡಿಸಿ, ಬೆಂಕಿ ಹಚ್ಚಿ ಪರಾರಿಯಾಗಿದ್ದಾರೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.
ಆಕೆಯ ಮನೆಯಿಂದ ಕೇವಲ 1.5 ಕಿ.ಮೀ. ದೂರದಲ್ಲಿ ಘಟನೆ ನಡೆದಿದೆ. ಬೆಂಕಿಯನ್ನು ಗಮನಿಸಿದ ಸ್ಥಳೀಯರು ತಕ್ಷಣ ಪಿಪಿಲಿಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಲ್ಲಿಂದ ಭುವನೇಶ್ವರದ ಏಮ್ಸ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಬಾಲಕಿಯ ಬೆನ್ನು, ಹೊಟ್ಟೆ ಹಾಗೂ ಇತರ ಭಾಗಗಳು ಸುಟ್ಟಿವೆ. ಆದರೆ ಮಾತಾಡುವ ಸ್ಥಿತಿಯಲ್ಲಿದ್ದಾಳೆ. ಆಕೆಯ ಪಾಲಕರು ನೀಡಿದ ದೂರಿನನ್ವಯ ಬಾಲಂಗಾ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ.
ಪ್ರಕರಣದ ತನಿಖೆಗೆ 2 ತಂಡಗಳನ್ನು ರಚಿಸಲಾಗಿದ್ದು, ತನಿಖೆ ಈಗಾಗಲೇ ಆರಂಭವಾಗಿದೆ. ಅಪರಾಧಿಗಳಿಗೆ ಬಲೆ ಬೀಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ‘ದುಷ್ಕರ್ಮಿಗಳು 15 ವರ್ಷದ ಬಾಲಕಿಯ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಸುದ್ದಿ ಕೇಳಿ ನನಗೆ ದುಃಖ ಮತ್ತು ಆಘಾತವಾಯಿತು. ಬಾಲಕಿಯ ಚಿಕಿತ್ಸೆಯ ವೆಚ್ಚವನ್ನು ಸರ್ಕಾರ ಭರಿಸಲಿದೆ. ಅಪರಾಧಿಗಳನ್ನು ಆದಷ್ಟು ಬೇಗ ಬಂಧಿಸುವಂತೆ ಪೊಲೀಸರಿಗೆ ಸೂಚಿಸಲಾಗಿದೆ’ ಎಂದು ಒಡಿಶಾ ಉಪಮುಖ್ಯಮಂತ್ರಿ ಮತ್ತು ಮಹಿಳಾ ಹಾಗೂ ಮಕ್ಕಳ ಕಲ್ಯಾಣ ಸಚಿವೆ ಪ್ರವತಿ ಪರಿದಾ ತಿಳಿಸಿದ್ದಾರೆ. ವಿರೋಧ ಪಕ್ಷ ಬಿಜೆಡಿ ಮತ್ತು ಕಾಂಗ್ರೆಸ್ ನಿಯೋಗವು ಏಮ್ಸ್ ಆಸ್ಪತ್ರೆಗೆ ಭೇಟಿ ನೀಡಿ ಬಾಲಕಿಯ ಕುಟುಂಬಸ್ಥರು ಮತ್ತು ವೈದ್ಯರನ್ನು ಭೇಟಿ ಮಾಡಿದೆ.
ವಿಯೆಟ್ನಾಂನ ಹಾ ಲಾಂಗ್ ಕೊಲ್ಲಿಯಲ್ಲಿ ಪ್ರವಾಸಿ ದೋಣಿ ಮುಳುಗಿ 34 ಮಂದಿ ಸಾವು