newsics.com
ಬೆಂಗಳೂರು: ವಿವಿಧ ಜಿಲ್ಲೆಗಳಲ್ಲಿ ಸಂಭವಿಸಿದ ಮಳೆ ಸಂಬಂಧಿ ಅವಘಡಗಳಿಂದ ಭಾನುವಾರ ಒಂದೇ ದಿನ ಐವರು ಮೃತಪಟ್ಟಿದ್ದಾರೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆ ಸಂಕಷ್ಟಗಳ ಸರಮಾಲೆಯನ್ನೇ ತಂದೊಡ್ಡಿದೆ.
ಕಾರವಾರದ ಪಿಕಳೆ ಆಸ್ಪತ್ರೆ ಬಳಿ ಗಾಳಿ, ಮಳೆಗೆ ಬೃಹತ್ ಮರವೊಂದು ಕಾರಿನ ಮೇಲೆಯೇ ಉರುಳಿಬಿದ್ದಿದೆ. ಗರ್ಭಿಣಿ ಸೊಸೆಯನ್ನು ಆಸ್ಪತ್ರೆಗೆ ಕರೆತಂದಿದ್ದ ಅತ್ತೆ ಮೇಲೆ ಮರ ಬಿದ್ದು ಅಸುನೀಗಿದ್ದಾರೆ. ಅತ್ತೆ ಲಕ್ಷ್ಮೀ ತನ್ನ 8 ತಿಂಗಳ ಗರ್ಭಿಣಿ ಸೊಸೆ ಸುನಿತಾರನ್ನು ಕಾರಿನಲ್ಲಿ ಆಸ್ಪತ್ರೆಗೆ ಕರೆತಂದಿದ್ದರು. ಆಸ್ಪತ್ರೆ ಬಳಿ ಚಾಲಕ ಹಾಗೂ ಸೊಸೆ ಕಾರಿನಿಂದ ಕೆಳಗೆ ಇಳಿಯುತ್ತಿದ್ದಂತೆಯೇ, ಬೃಹತ್ ಮರ ಕಾರಿನ ಮೇಲೆಯೇ ಉರುಳಿ ಬಿದ್ದಿದೆ. ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಅತ್ತೆ ಲಕ್ಷ್ಮೀ ಕಾರಿನಲ್ಲೇ ಮೃತಪಟ್ಟಿದ್ದಾರೆ.
ಮೈಸೂರು ತಾಲೂಕಿನ ಮೀನಾಕ್ಷಿಪುರ ಬಳಿಯ ಕೆಆರ್ಎಸ್ ಹಿನ್ನೀರಿನಲ್ಲಿ ಮೂವರು ವಿದ್ಯಾರ್ಥಿಗಳು ನೀರು ಪಾಲಾಗಿದ್ದಾರೆ. ಕೆಆರ್ಎಸ್ ಹಿನ್ನೀರಿನ ಪ್ರದೇಶ ಮೋಜು ಮಸ್ತಿಗೆ ಕುಖ್ಯಾತಿ ಪಡೆದಿದೆ. ಸಮುದ್ರದಂತೆಯೇ ಕಾವೇರಿ ಹಿನ್ನೀರಿನಲ್ಲಿ ಅಲೆಗಳು ಬರುವುದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಇಲ್ಲಿಗೆ ಬರುತ್ತಾರೆ. ಭಾನುವಾರ ಮೋಜು ಮಸ್ತಿಗೆಂದು ಬಂದಿದ್ದ ಮಂಡ್ಯ ನರ್ಸಿಂಗ್ ಕಾಲೇಜಿನ ಪ್ರಶಾಂತ್, ಸಿದ್ದೇಶ್, ಕೃಷ್ಣ ದಾರುಣವಾಗಿ ಸಾವಿಗೀಡಾಗಿದ್ದಾರೆ.
ಭಾರೀ ಮಳೆಗೆ ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಅಬ್ಬಿ ಜಲಪಾತ ಧುಮ್ಮಿಕ್ಕಿ ಹರಿಯುತ್ತಿದೆ. ಪ್ರವಾಸಿಗ ಬೆಂಗಳೂರು ಮೂಲದ ರಮೇಶ್ ನೀರುಪಾಲಾಗಿದ್ದಾರೆ. ಫಾಲ್ಸ್ ಮುಂದೆ ಫೋಟೊಗೆ ಪೋಸ್ ಕೊಡುವಾಗಲೇ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದಾರೆ.
ಜುಲೈ 21 ರಿಂದ 24ರ ವರೆಗೆ ಕರಾವಳಿಯ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಯಲ್ಲಿ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿದೆ. ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗಿನಲ್ಲಿ 2 ದಿನ ಆರೆಂಜ್ ಅಲರ್ಟ್ ಘೋಷಣೆ ಆಗಿದ್ದು, ಭಾರಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.
GOOD MORNING Today’s prediction ಇಂದಿನ ರಾಶಿ ಭವಿಷ್ಯ, 21-07-2025, ಸೋಮವಾರ, ನಿಮ್ಮ ಗ್ರಹಗತಿ ಇಂದು ಹೇಗಿದೆ?