newsics.com
ಬೆಂಗಳೂರು: ಮಾಸಿಕ ಕನಿಷ್ಠ 10,000 ರೂ. ಗೌರವ ಧನ ಸೇರಿದಂತೆ ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಆಶಾ ಕಾರ್ಯಕರ್ತೆಯರು ಆಗಸ್ಟ್ 12 ರಿಂದ 14ರ ವರೆಗೆ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ.
ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ರಾಜ್ಯ ಕಾರ್ಯದರ್ಶಿ ಡಿ. ನಾಗಲಕ್ಷ್ಮಿ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ್ದಾರೆ.
ಕಳೆದ ಜನವರಿಯಲ್ಲಿ ಗೌರವಧನ ಹೆಚ್ಚಳ ಸಂಬಂಧ ಪ್ರತಿಭಟನೆ ನಡೆಸಿ 15,000 ರೂ. ನಿಶ್ಚಿತ ಗೌರವಧನ ನಿಗದಿಪಡಿಸಲು ಒತ್ತಾಯಿಸಲಾಗಿತ್ತು. ಆಗ ಸಿಎಂ ನೇತೃತ್ವದಲ್ಲಿ ನಡೆದ ಸಭೆಯಲ್ಲಿ 2025ರ ಏಪ್ರಿಲ್ ನಿಂದ ಪ್ರತಿ ತಿಂಗಳು ಕನಿಷ್ಠ 10 ಸಾವಿರ ರೂ. ಗೌರವ ಧನ ನೀಡುವುದಾಗಿ ಭರವಸೆ ನೀಡಿದ್ದರು. ಆದರೆ ಇದುವರೆಗೆ ಯಾವುದೇ ಆದೇಶ ಹೊರಡಿಸಿಲ್ಲ. ಹೀಗಾಗಿ ಮತ್ತೆ ಪ್ರತಿಭಟನೆ ನಡೆಸಲು ನಿರ್ಧಾರ ಕೈಗೊಂಡಿದ್ದೇವೆ ಎಂದು ಹೇಳಿದ್ದಾರೆ.
ಬಜೆಟ್ ನಲ್ಲಿ ಅಂಗನವಾಡಿ ಹಾಗೂ ಬಿಸಿಯೂಟ ಕಾರ್ಯಕರ್ತೆಯರಿಗೆ ತಿಂಗಳ ಪ್ರೋತ್ಸಾಹ ಧನ 1000 ರೂ.ಹೆಚ್ಚಳ ಮಾಡಿದಂತೆ ಆಶಾ ಕಾರ್ಯಕರ್ತೆಯರಿಗೂ ಹೆಚ್ಚಿಸುವುದು ಸೇರಿ ವಿವಿಧ ಬೇಡಿಕೆಗಳ ಈಡೇರಿಸಬೇಕೆಂದು ಒತ್ತಾಯಿಸಿ ಹೋರಾಟ ಕೈಗೊಳ್ಳಲಾಗಿದೆ.