newsics.com
ಬೆಂಗಳೂರು: ‘ಸ್ಮಾರ್ಟ್ ಮೀಟರ್’ ಟೆಂಡರ್ ನಲ್ಲಿ ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿದಂತೆ ಇಂಧನ ಸಚಿವ ಕೆ.ಜೆ. ಚಾರ್ಜ್ ಗೆ ವಿರುದ್ಧ ವಿಚಾರಣೆಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.
ಸ್ಮಾರ್ಟ್ ಮೀಟರ್ ಟೆಂಡರ್ ನಲ್ಲಿ ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿದಂತೆ ಇಂಧನ ಸಚಿವ ಕೆ.ಜೆ. ಚಾರ್ಜ್ ಗೆ ಹಾಗೂ ಇತರೆ ಅಧಿಕಾರಿಗಳ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿತ್ತು.
ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ”ನಮ್ಮ ಕಕ್ಷಿದಾರರು ಜನಪ್ರತಿನಿಧಿಯಾಗಿದ್ದಾರೆ. ಅವರ ವಿರುದ್ಧದ ವಿಚಾರಣೆಗೆ ಭ್ರಷ್ಟಾಚಾರ ತಡೆ ಕಾಯಿದೆ ಸೆಕ್ಷನ್ 17ಎ ಅಡಿಯಲ್ಲಿ ಸಕ್ಷಮ ಪ್ರಾಧಿಕಾರದಿಂದ ಅನುಮತಿ ಪಡೆಯಬೇಕಾಗುತ್ತದೆ. ಆದರೆ, ಅರ್ಜಿದಾರರ ವಿರುದ್ಧ ಸಕ್ಷಮ ಪ್ರಾಧಿಕಾರದಿಂದ ಅನುಮತಿ ಪಡೆಯದೆ ವಿಚಾರಣೆಗೆ ಪರಿಗಣಿಸಲಾಗಿದೆ. ಇದು ಕಾನೂನುಬಾಹಿರ” ಎಂದು ಪೀಠಕ್ಕೆ ವಿವರಿಸಿದರು.ಇದನ್ನು ಪರಿಗಣಿಸಿದ ಪೀಠ, ವಿಚಾರಣೆಗೆ ತಡೆ ನೀಡಿ ಆದೇಶಿಸಿತು.
ಶಾಸಕರಾದ ಸಿ.ಎಸ್.ಅಶ್ವತ್ ನಾರಾಯಣ್, ಎಸ್.ಆರ್.ವಿಶ್ವನಾಥ್ ಮತ್ತು ದೀರಜ್ ಮುನಿರಾಜ್ ಅವರಿಂದ ಸಚಿವ ಕೆ.ಜೆ.ಚಾರ್ಜ್ ಮತ್ತು ಬೆಸ್ಕಾಂ ಅಧಿಕಾರಿಗಳ ವಿರುದ್ಧ ದೂರು ದಾಖಲಿಸಲಾಗಿದೆ.
ಏನಿದು ಅಕ್ರಮದ ಆರೋಪ?
ಸ್ಮಾರ್ಟ್ ಮೀಟರ್ ಅಳವಡಿಕೆ ಮತ್ತು ಸೇವೆ ಒದಗಿಸುವ ಸಂಬಂಧ, 2024ರ ಸೆಪ್ಟೆಂಬರ್ 26ರಂದು ದಾವಣಗೆರೆಯ ರಾಜಶ್ರೀ ಎಲೆಕ್ಟ್ರಿಕಲ್ಸ್ ಎಂಬ ಶೆಲ್ ಕಂಪನಿಗೆ ನೇರವಾಗಿ ಟೆಂಡರ್ ನೀಡಲಾಗಿದೆ ಎಂದು ದೂರುದಾರರು ಆರೋಪಿಸಿದ್ದಾರೆ. ಈ ಪ್ರಕ್ರಿಯೆಯು ಕರ್ನಾಟಕ ಸಾರ್ವಜನಿಕ ಸಂಗ್ರಹಣೆಯಲ್ಲಿನ ಪಾರದರ್ಶಕತೆ (KTPP) ಕಾಯ್ದೆ-2000 ಮತ್ತು ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ (KERC) ನಿಯಮಗಳಿಗೆ ಸಂಪೂರ್ಣವಾಗಿ ವಿರುದ್ಧವಾಗಿದೆ. ಯಾವುದೇ ಪಾರದರ್ಶಕ ಪ್ರಕ್ರಿಯೆಯನ್ನು ಪಾಲಿಸದೆ, ಏಕಾಏಕಿ ಒಂದು ಕಂಪನಿಗೆ ಗುತ್ತಿಗೆ ನೀಡಿರುವ ಹಿಂದೆ ದೊಡ್ಡ ಮಟ್ಟದ ಭ್ರಷ್ಟಾಚಾರ ನಡೆದಿದೆ ಎಂಬುದು ದೂರುದಾರರ ಪ್ರಮುಖ ಆರೋಪವಾಗಿದೆ