newsics.com
ಕೃಷ್ಣ ಜನ್ಮಾಷ್ಟಮಿಯನ್ನು ಶ್ರೀ ಕೃಷ್ಣ ಜಯಂತಿ, ಗೋಕುಲಾಷ್ಟಮಿ, ಕೃಷ್ಣಾಷ್ಟಮಿ ಎಂಬಿತ್ಯಾದಿ ಹೆಸರುಗಳಿಂದ ಕರೆಯಲಾಗುತ್ತದೆ. ಈ ವರ್ಷ, ಶ್ರೀ ಕೃಷ್ಣನ 5252 ನೇ ಜನ್ಮ ವಾರ್ಷಿಕೋತ್ಸವವನ್ನು ಆಗಸ್ಟ್ 16 ರಂದು ಬಹಳ ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ. ಈ ದಿನದಂದು ಅನೇಕ ಶುಭ ಯೋಗಗಳು ರೂಪುಗೊಳ್ಳಲಿವೆ.
ಆದರೆ ಕಡಗೋಲು ಕೃಷ್ಣನ ನಾಡು ಉಡುಪಿಯಲ್ಲಿ ಅಷ್ಟಮಿ ಸಂಭ್ರಮ ಕಾಣಬೇಕಾದರೆ ಭಕ್ತರು ಇನ್ನೂ ಒಂದು ತಿಂಗಳು ಕಾಯಬೇಕಾಗಿದೆ. ಉಡುಪಿ ಶ್ರೀ ಕೃಷ್ಣ ಮಠದ ಜನ್ಮಾಷ್ಟಮಿ ದೇಶದಲ್ಲೇ ಪ್ರಸಿದ್ಧ. ಆದರೆ ಈ ಬಾರಿ ಉಡುಪಿಯಲ್ಲಿ ಪ್ರತ್ಯೇಕವಾಗಿ ಅಷ್ಟಮಿ ಆಚರಣೆ ನಡೆಯಲಿದೆ. ಆ ಮೂಲಕ ಇದೊಂದು ಅಪರೂಪದ ಸಂಪ್ರದಾಯವಾಗಿದೆ.
ಉಡುಪಿಯಲ್ಲಿ ಸೌರಮಾನ ಪದ್ಧತಿಯನ್ನು ಅನುಸರಿಸಲಾಗುತ್ತದೆ. ಹುಣ್ಣಿಮೆ- ಅಮಾವಾಸ್ಯೆಯ ಗಣನೆಯಲ್ಲಿ ಇತರ ಭಾಗದಲ್ಲಿ ಆಚರಣೆ ನಡೆದರೆ, ತುಳುನಾಡ ಕರಾವಳಿಯಲ್ಲಿ ಸಂಕ್ರಮಣ ವಿಶೇಷ. ಹಾಗಾಗಿ ಈ ಬಾರಿ ಅಷ್ಟಮಿ ತಿಥಿಯ ಜೊತೆ ರೋಹಿಣಿ ನಕ್ಷತ್ರ ಸನ್ನಿಹಿತವಾಗಿರುವ, ಸೆಪ್ಟೆಂಬರ್ 14ರಂದು ಅಷ್ಟಮಿ ಆಚರಿಸಲಾಗುತ್ತಿದೆ. ಇದನ್ನು ಶ್ರೀಕೃಷ್ಣ ಜಯಂತಿ ಎಂದು ಕರೆಯಲಾಗುತ್ತದೆ. ಹಾಗಾಗಿಯೇ ಕೃಷ್ಣ ಊರಿನಲ್ಲಿ ಇಂದು ಅಷ್ಟಮಿಯ ಸಂಭ್ರಮವಿಲ್ಲ.
ಇಂದು ಚಾಂದ್ರಮಾನ ಪದ್ಧತಿಯಂತೆ ಹಬ್ಬ ಆಚರಿಸುವವರಿಗೂ ಕೃಷ್ಣ ಮಠ ಅವಕಾಶ ಕಲ್ಪಿಸಿದೆ. ಸಾಂಕೇತಿಕವಾಗಿ ಇಂದು ಕೂಡ ಅರ್ಗ್ಯ ಪ್ರದಾನಕ್ಕೆ ಅವಕಾಶ ಇದೆ. ಆದರೆ ಅಷ್ಟಮಿ ವೈಭವ ಮಾತ್ರ ಇಲ್ಲ. ಬಂದ ಭಕ್ತರು ಶ್ರೀ ಕೃಷ್ಣ ದರ್ಶನ ಮಾಡಿದರು. ಆದರೆ ರಥಬೀದಿ ತುಂಬ ಕಾಣುವ ಬಾಲಕೃಷ್ಣ, ಮೊಸರು ಕುಡಿಕೆ ಸಂಭ್ರಮ, ಕೃಷ್ಣ ಉತ್ಸವ ಎಲ್ಲವೂ ಸೆಪ್ಟೆಂಬರ್ನಲ್ಲಿ ನಡೆಯಲಿದೆ.