newsics.com
ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧಿಸಿ ಜೈಲು ಸೇರಿರುವ ದರ್ಶನ್ ಪರಪ್ಪನ ಅಗ್ರಹಾರದ ಕಂಬಿ ಹಿಂದೆ ದಿನದೂಡ್ತಿದ್ದಾರೆ. ದರ್ಶನ್ನನ್ನು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡುವ ಬಗ್ಗೆ ಸಲ್ಲಿಕೆ ಆಗಿರುವ ಅರ್ಜಿ ವಿಚಾರಣೆ ನಡೆದಿದೆ.
ಆದರೆ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿರುವ ನಟ ದರ್ಶನ್ಗೆ ಹಾಸಿಗೆ, ತಲೆದಿಂಬು, ಹೊದಿಕೆ ಸೇರಿದಂತೆ ಕನಿಷ್ಠ ಸೌಲಭ್ಯ ನೀಡುತ್ತಿಲ್ಲ. ದರ್ಶನ್ ಶೂ ಹಾಕಿಕೊಂಡಿದ್ದರೆ ಅದನ್ನು ಜೈಲಾಧಿಕಾರಿಗಳು ಬಿಚ್ಚಿಸುತ್ತಾರೆ. ಊಟದ ತಟ್ಟೆಯನ್ನು ಎಸೆದು ಹೋಗುತ್ತಾರೆ ಎಂದು ನಟನ ಪರ ವಕೀಲರು ಮಂಗಳವಾರ ನ್ಯಾಯಾಲಯದ ಮುಂದೆ ಆರೋಪಿಸಿದ್ದಾರೆ.
ವಿಚಾರಣೆ ವೇಳೆ ದರ್ಶನ್ ಪರ ವಕೀಲರು, ವಿಚಾರಣಾಧೀನ ಕೈದಿಗೆ ನೀಡಬಹುದಾದ ಹಾಸಿಗೆ, ತಲೆದಿಂಬು, ಹೊದಿಕೆ ಸೇರಿ ಇತರೆ ಕನಿಷ್ಠ ಸೌಲಭ್ಯಗಳನ್ನು ಕಲ್ಪಿಸುವಂತೆ ಕೇಳುತ್ತಿದ್ದೇವೆ. ಕಾನೂನು ಪ್ರಕಾರ ಏನು ಕೊಡಬೇಕೋ ಅದನ್ನು ಕೊಡಲಿ. ಯಾವ ಕಾನೂನಿನ ಅಡಿ ಈ ಸೌಲಭ್ಯ ಕೊಡಲಾಗುವುದಿಲ್ಲವೆಂದು ಜೈಲು ಅಧಿಕಾರಿಗಳು ಸ್ಪಷ್ಟನೆ ನೀಡಬೇಕು ಎಂದು ಆಗ್ರಹಿಸಿದರು. ಅಲ್ಲದೆ, ಆರೋಪಿಗೆ ಜೈಲಿನಲ್ಲಿ ಸೆಲೆಬ್ರಿಟಿ ಸ್ಥಾನಮಾನ ನೀಡಬಾರದು ಎಂದು ಸುಪ್ರೀಂ ಕೋರ್ಟ್ ಹೇಳಿದೆಯೇ ಹೊರತು ವಿಚಾರಣಾಧೀನ ಕೈದಿಗೆ ಕನಿಷ್ಠ ಸೌಲಭ್ಯಗಳನ್ನು ನೀಡಬಾರದು ಎಂದು ಹೇಳಿಲ್ಲ. ಹಾಸಿಗೆ, ಹೊದಿಕೆ, ತಲೆದಿಂಬು, ಸ್ವೆಟರ್ ನೀಡುವುದಿಲ್ಲ ಎಂದರೆ ಹೇಗೆ ಎಂದು ಪ್ರಶ್ನಿಸಿದರು.
ಈ ವೇಳೆ ಜಡ್ಜ್ ನೀವು ಮನವಿ ಸಲ್ಲಿಸಿದ್ದೀರಾ ಎಂದು ಪ್ರಶ್ನೆ ಮಾಡಿದ್ರು. ದರ್ಶನ್ ಪರ ವಕೀಲರು ಮೌಖಿಕವಾಗಿ ಮಾಡಿರುವ ನಮ್ಮ ಮನವಿ ಬಗ್ಗೆ ಜೈಲು ಅಧಿಕಾರಿಗಳು ಉದಾಸೀನತೆ ತೋರುತ್ತಿದ್ದಾರೆ ಎಂದು ಹೇಳಿದ್ದಾರೆ.