newsics.com
ಹಿಂದೂ ಧರ್ಮದಲ್ಲಿ ಚಂದ್ರಗ್ರಹಣವನ್ನು ಬಹಳ ಮುಖ್ಯವೆಂದು ಪರಿಗಣಿಸಲಾಗುತ್ತದೆ. ಇದು ಖಗೋಳ ಘಟನೆಯಾಗಿದ್ದು, ಇದು ಧಾರ್ಮಿಕ ಮಹತ್ವವನ್ನು ಸಹ ಹೊಂದಿದೆ. ಭಾದ್ರಪದ ಪೂರ್ಣಿಮೆ ಸೆಪ್ಟೆಂಬರ್ 7ರಂದು ವರ್ಷದ ಎರಡನೇ ಮತ್ತು ಕೊನೆಯ ಚಂದ್ರಗ್ರಹಣವಾಗಲಿದೆ. ಈ ಸಮಯದಲ್ಲಿ ಚಂದ್ರನು ಕೆಂಪು ಬಣ್ಣದಲ್ಲಿ ಗೋಚರಿಸುವುದರಿಂದ ಇದನ್ನು ರಕ್ತ ಚಂದ್ರ ಎಂದು ಕರೆಯಲಾಗುತ್ತದೆ. ಈ ಚಂದ್ರಗ್ರಹಣವು ಭಾರತದಲ್ಲಿ ಸಂಪೂರ್ಣವಾಗಿ ಗೋಚರಿಸುತ್ತದೆ.
ಚಂದ್ರನಿಗೆ ಭೂಮಿಯು ಅಡ್ಡಬಂದು ಸೂರ್ಯನ ಕಿರಣಗಳನ್ನು ತಡೆಗಟ್ಟುತ್ತದೆ. ಈ ಕಾರಣ, ಭೂಮಿಯ ವಾತಾವರಣದಲ್ಲಿ ಚದುರಿಸುವ ಕೆಂಪು ಬಣ್ಣವು, ಚಂದ್ರನ ಮೈಮೇಲಿಂದ ಪ್ರತಿಬಿಂಬಿಸುತ್ತದೆ. ಈ ಬೆಳಕಿನಿಂದಾಗಿ ಚಂದ್ರನು ಕೆಂಬಣ್ಣದಲ್ಲಿ ಗೋಚರಿಸುತ್ತಾನೆ.ಖಗೋಳಶಾಸ್ತ್ರಜ್ಞರು ಆಕಾಶಕಾಯಗಳ ಬೆಳಕನ್ನು ಪರಿಮಾಣ ಮಾಪನದಿಂದ ಗುರುತಿಸುತ್ತಾರೆ (ಈ ಸಂಖ್ಯೆ ಕಡಿಮೆ ಇದ್ದಷ್ಟು ಆಕಾಶಕಾಯ ಹೆಚ್ಚು ಪ್ರಕಾಶಮಾನವಾಗಿರುತ್ತದೆ).
ಸಾಮಾನ್ಯವಾಗಿ ಹುಣ್ಣಿಮೆಯ ಚಂದ್ರನ ಪರಿಮಾಣ ಸುಮಾರು ಮೈನಸ್ 13ರಷ್ಟಾಗಿರುವುದು. ಆದರೆ ಈ ಗ್ರಹಣದ ಸಮಯ ಮೈನಸ್ 1.35ರಷ್ಟು ಪರಿಮಾಣವಾಗಿರುತ್ತದೆ. ಅಂದರೆ, ಚಂದ್ರನು ಶೇ.99.9ರಷ್ಟು ಮಂದವಾಗಿ ಕಾಣಿಸುತ್ತಾನೆ.ಸೆ. 7ರಂದು, ರಾತ್ರಿ 8.50ಕ್ಕೆ ಗ್ರಹಣವು ಪ್ರಾರಂಭವಾಗುವಾಗ ಭೂಮಿಯ ಅರೆನೆರಳು ಚಂದ್ರನ ಮೇಲೆ ಬೀಳಲು ಪ್ರಾರಂಭವಾಗುತ್ತದೆ. ಭೂಮಿಯ ಅರೆನೆರಳು ಚಂದ್ರನ ಮೇಲೆ ಸ್ಪಷ್ಟವಾಗಿ ಗೋಚರಿಸುವುದಿಲ್ಲ.
ಸುಮಾರು 9.57ರಿಂದ ಭೂಮಿಯ ನೆರಳು ಚಂದ್ರನ ಮೇಲೆ ಹರಿದಾಡುತ್ತದೆ. ಗ್ರಹಣ ಮುಂದುವರಿಯುತ್ತಾ 11ಕ್ಕೆ ಚಂದ್ರನು ಸಂಪೂರ್ಣವಾಗಿ ಭೂಮಿಯ ನೆರಳಿನಲ್ಲಿ ಬಂದಿರುತ್ತಾನೆ. ಈ ಕ್ಷಣದಿಂದ ಮಧ್ಯರಾತ್ರಿ 12.22ರ ವರೆಗೆ (ಸುಮಾರು 1 ಗಂಟೆ 22 ನಿಮಿಷಗಳ ಕಾಲ) ಖಗ್ರಾಸ ಚಂದ್ರಗ್ರಹಣವನ್ನು ವೀಕ್ಷಿಸಬಹುದು. 11.41 ಗಂಟೆಗೆ ಗರಿಷ್ಠ ಗ್ರಹಣದ ಕಾಲದಲ್ಲಿ ಕೆಂಪು ಚಂದ್ರನನ್ನು ವೀಕ್ಷಿಸಬಹುದು