Subscribe NewsicsKannada/YouTube
newsics.com
ಬೆಂಗಳೂರು: ಉತ್ತರ ಕರ್ನಾಟಕದ ಪ್ರಸಿದ್ಧ ಹಿರಿಯ ರಂಗ ಕಲಾವಿದ ಮತ್ತು ಚಲನಚಿತ್ರ ಹಾಸ್ಯ ನಟ ರಾಜು ತಾಳಿಕೋಟೆ ಸೋಮವಾರ ಹೃದಯಾಘಾತದಿಂದ ನಿಧನರಾದರು.
ವಿಜಯಪುರ ಜಿಲ್ಲೆಯ ಸಿಂದಗಿ ತಾಲ್ಲೂಕಿನ ಚಿಕ್ಕಸಿಂದಗಿ ಗ್ರಾಮದ ಮೂಲದವರಾಗಿದ್ದ ಅವರು, ಚಲನಚಿತ್ರದಲ್ಲಿ ಪ್ರಸಿದ್ಧರಾದ ನಂತರ ತಾಳಿಕೋಟಿಯಲ್ಲಿ ವಾಸವಾಗಿದ್ದರು.
ಭಾನುವಾರ ಹೃದಯಾಘಾತ ಉಂಟಾಗಿದ್ದು, ಮಣಿಪಾಲ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ವೈದ್ಯರ ನಿರಂತರ ಚಿಕಿತ್ಸೆ ನಂತರವೂ ಅವರು ಚಿಕಿತ್ಸೆಗೆ ಸ್ಪಂದಿಸದೆ ಸೋಮವಾರ(ಅ.13) ಸಂಜೆ ಕೊನೆಯುಸಿರೆಳೆದರು ಎಂದು ಕುಟುಂಬದ ಮೂಲಗಳು ತಿಳಿಸಿವೆ.
ರಾಜು ತಾಳಿಕೋಟಿಯವರ ನಿಧನಕ್ಕೆ ಕನ್ನಡ ಚಿತ್ರರಂಗ ಮತ್ತು ಉತ್ತರ ಕರ್ನಾಟಕದ ರಂಗಭೂಮಿ ಕಂಬನಿ ಮಿಡಿದಿದೆ.
ರಾಜು ತಾಳಿಕೋಟಿಯವರ ಮೂಲ ಹೆಸರು ರಾಜೇಸಾಬ ಮಕ್ತುಮಸಾಬ್ ತಾಳಿಕೋಟಿ ಎಂದಾಗಿತ್ತು. ಅವರು ಕೇವಲ ನಟನಾಗಿರದೆ, ತಾಳಿಕೋಟಿಯ ಪ್ರಸಿದ್ಧ ಖಾಸ್ಗತೇಶ್ವರ ನಾಟಕ ಮಂಡಳಿಯ ಮಾಲಿಕರೂ ಆಗಿದ್ದರು. ಅವರ ಜೀವನದ ಬಹುಪಾಲು ಸಮಯವನ್ನು ಅವರು ಉತ್ತರ ಕರ್ನಾಟಕದ ಹಳ್ಳಿಗಳಲ್ಲಿ ನಾಟಕಗಳ ಮೂಲಕ ಜನರನ್ನು ರಂಜಿಸುವುದರಲ್ಲಿಯೇ ಕಳೆದಿದ್ದರು.
ರಾಜು ತಾಳಿಕೋಟಿಯವರು ಉತ್ತರ ಕರ್ನಾಟಕದ ಶೈಲಿಯ ಭಾಷೆ ಮತ್ತು ಉಡುಗೆ-ತೊಡುಗೆಯೊಂದಿಗೆ ಹಾಸ್ಯ ಮತ್ತು ಬೋಧಪ್ರದ ಪಾತ್ರಗಳನ್ನು ಮಾಡುತ್ತಿದ್ದುದರಿಂದ ಅಪಾರ ಜನಪ್ರಿಯತೆ ಗಳಿಸಿದ್ದರು. ಅದರಲ್ಲೂ ವಿಶೇಷವಾಗಿ, ಕುಡುಕನ ಪಾತ್ರಗಳಲ್ಲಿ ಅವರ ಅಭಿನಯ ಅತ್ಯಂತ ಲೀಲಾಜಾಲವಾಗಿರುತ್ತಿತ್ತು.
‘ಕಲಿಯುಗದ ಕುಡುಕ’, ‘ಕುಡುಕರ ಸಾಮ್ರಾಜ್ಯ’, ಮತ್ತು ‘ಅಸಲಿ ಕುಡುಕ’ ಅವರ ಪ್ರಖ್ಯಾತ ನಾಟಕಗಳಾಗಿದ್ದು, ಈ ನಾಟಕಗಳ ಆಡಿಯೊ ಕ್ಯಾಸೆಟ್ಗಳು ಕೂಡ ಆ ಕಾಲದಲ್ಲಿ ಉತ್ತರ ಕರ್ನಾಟಕ ಭಾಗದಲ್ಲಿ ಮನೆಮಾತಾಗಿದ್ದವು.
ರಂಗಭೂಮಿಯಲ್ಲಿ ಅಪಾರ ಅನುಭವ ಪಡೆದ ನಂತರ ಅವರು ಕನ್ನಡ ಚಲನಚಿತ್ರ ರಂಗಕ್ಕೆ ಪ್ರವೇಶಿಸಿದರು. ಪ್ರಖ್ಯಾತ ನಿರ್ದೇಶಕ ಯೋಗರಾಜ್ ಭಟ್ ಅವರ ‘ಮನಸಾರೆ’ (2009) ಚಿತ್ರದ ಮೂಲಕ ಅವರು ಜನಪ್ರಿಯತೆ ಗಳಿಸಿದರು. ನಂತರ ‘ಪಂಚರಂಗಿ’, ‘ಮತ್ತೊಂದ್ ಮದುವೇನಾ..!’ ಮತ್ತು ‘ಮೈನಾ’ ಸೇರಿದಂತೆ ಹಲವು ಚಿತ್ರಗಳಲ್ಲಿ ತಮ್ಮದೇ ಆದ ವಿಶಿಷ್ಟ ಹಾಸ್ಯ ಶೈಲಿಯ ಮೂಲಕ ಪ್ರೇಕ್ಷಕರ ಗಮನ ಸೆಳೆದಿದ್ದರು.
ಇತ್ತೀಚೆಗೆ ಅಂದರೆ ಕಳೆದ ತಿಂಗಳು ಸೆ.29ರಂದು ಕನ್ನಡ ರಂಗಭೂಮಿ, ಚಲನಚಿತ್ರ ಮತ್ತು ಕಿರುತೆರೆಯ ಲೋಕದಲ್ಲಿ ವಿಶಿಷ್ಟ ಹೆಸರು ಪಡೆದ ಕಲಾವಿದ ಯಶವಂತ ಸರದೇಶಪಾಂಡೆ ನಿಧನರಾಗಿದ್ದರು.
ರಾಜ್ಯದಲ್ಲೂ ಆರೆಸ್ಸೆಸ್ ಚಟುವಟಿಕೆಗೆ ನಿರ್ಬಂಧ ಬಹುತೇಕ ಖಚಿತ: ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?
ಬ್ರೆಡ್ ತಿಂದ್ರೆ ಕ್ಯಾನ್ಸರ್ ಬರುತ್ತಾ?; ಈ ಬಗ್ಗೆ ಡಾಕ್ಟರ್ ಹೇಳಿದ್ದೇನು?