Subscribe NewsicsKannada/YouTube
newsics.com
ಮಂಗಳೂರು: ತೆಂಕುತಿಟ್ಟು ಪರಂಪರೆಯ ಖ್ಯಾತ ಯಕ್ಷಗಾನ ಭಾಗವತ, ‘ರಸರಾಗ ಚಕ್ರವರ್ತಿ’ ದಿನೇಶ್ ಅಮ್ಮಣ್ಣಾಯ ಅವರು ಗುರುವಾರ ನಿಧನರಾದರು.
ಬೆಳ್ತಂಗಡಿಯ ಕನ್ಯಾಡಿಯಲ್ಲಿ ವಾಸವಿದ್ದ ಅವರಿಗೆ 68 ವರ್ಷ ವಯಸ್ಸಾಗಿತ್ತು. ತಮ್ಮ ಕಂಚಿನ ಕಂಠ ಹಾಗೂ ವಿಶಿಷ್ಟ ರಾಗ ಸಂಯೋಜನೆಯ ಮೂಲಕ ನಾಲ್ಕು ದಶಕಗಳಿಗೂ ಹೆಚ್ಚು ಕಾಲ ಕಲಾ ಸೇವೆಯಲ್ಲಿ ತೊಡಗಿಸಿಕೊಂಡಿದ್ದರು.
ಪೌರಾಣಿಕ ಮತ್ತು ತುಳು ಪ್ರಸಂಗಗಳೆರಡರಲ್ಲೂ ತಮ್ಮ ಛಾಪು ಮೂಡಿಸಿದ್ದ ಅಮ್ಮಣ್ಣಾಯ ಅವರು, ಯಕ್ಷಗಾನ ಕ್ಷೇತ್ರದಲ್ಲಿ ಚಿರಪರಿಚಿತ ಹೆಸರು.
ಯಕ್ಷಗಾನ ಕ್ಷೇತ್ರದ ಹಿರಿಯ ಕಲಾವಿದ, ತೆಂಕುತಿಟ್ಟು ಪರಂಪರೆಯಲ್ಲಿ ತುಳು ಯಕ್ಷಗಾನವನ್ನು ಉತ್ತುಂಗಕ್ಕೇರಿಸಿದ್ದ ದಾಮೋದರ ಮಂಡೆಚ್ಚರ ಗರಡಿಯಲ್ಲಿ ದಿನೇಶ್ ಅಮ್ಮಣ್ಣಾಯ ಅವರು ಪಳಗಿ ಪ್ರಸಿದ್ಧರಾಗಿದ್ದರು.
ತಮ್ಮ ವೃತ್ತಿಜೀವನವನ್ನು ಪುತ್ತೂರು ಮೇಳದಲ್ಲಿ ಚಂಡೆ ಮತ್ತು ಮದ್ದಳೆ ವಾದಕರಾಗಿ ಆರಂಭಿಸಿ, ಹಿಮ್ಮೇಳ ವಾದನದ ಅನುಭವದೊಂದಿಗೆ ಭಾಗವತಿಕೆಯತ್ತ ಹೊರಳಿದ್ದರು.
ಭಾಗವತಿಕೆಯಲ್ಲಿ ತಮ್ಮದೇ ವಿಶಿಷ್ಟ ಶೈಲಿ ರೂಪಿಸಿಕೊಂಡು ಯಶಸ್ವಿಯಾಗಿ ಅಗ್ರ ಸ್ಥಾನಕ್ಕೇರಿದ್ದರು.
ಅಮ್ಮಣ್ಣಾಯ ಅವರು ಕೇವಲ ಪೌರಾಣಿಕ ಪ್ರಸಂಗಗಳಿಗಷ್ಟೇ ಸೀಮಿತರಾಗದೆ, ಅನೇಕ ತುಳು ಪ್ರಸಂಗಗಳಿಗೂ ಧ್ವನಿಯಾಗಿದ್ದರು. ‘ಕಾಡಮಲ್ಲಿಗೆ’, ‘ಕಚ್ಚೂರ ಮಾಲ್ದಿ’, ‘ಪಟ್ಟದ ಪದ್ಮಲೆ’ ಹಾಗೂ ‘ಮಾನಿಷಾದ’ದಂತಹ ಪ್ರಸಂಗಗಳನ್ನು ತಮ್ಮ ಗಾಯನದಿಂದ ಜನಪ್ರಿಯಗೊಳಿಸಿದ್ದರು. ‘ಸತ್ಯಹರಿಶ್ಚಂದ್ರ’ ಪ್ರಸಂಗದ ಹಾಡುಗಳಿಗೆ ಸಾಕಷ್ಟು ಅಭಿಮಾನಿಗಳೇ ಸೃಷ್ಟಿಯಾಗಿದ್ದಾರೆ.
ಅಮ್ಮಣ್ಣಾಯ ಅವರ ಅನುಪಮ ಕಲಾ ಸೇವೆಗೆ ಉಡುಪಿ ತುಳುಕೂಟವು ಪ್ರತಿಷ್ಠಿತ ‘ಸಾಮಗ ಪ್ರಶಸ್ತಿ’ ನೀಡಿ ಗೌರವಿಸಿತ್ತು. ಮಲ್ಪೆ ರಾಮದಾಸ ಸಾಮಗ, ಅಳಕೆ ರಾಮಯ್ಯ ರೈ, ಕೋಳ್ಯೂರು ರಾಮಚಂದ್ರ ರಾವ್ ಅವರಂತಹ ಮೇರು ಕಲಾವಿದರ ಒಡನಾಟದಲ್ಲಿ ತಮ್ಮ ಕಲಾ ಅನುಭವವನ್ನು ಶ್ರೀಮಂತಗೊಳಿಸಿಕೊಂಡ ಅಮ್ಮಣ್ಣಾಯರು, ಇತ್ತೀಚೆಗೆ ಎಡನೀರು ಮೇಳದಲ್ಲಿ ತಿರುಗಾಟ ಪೂರ್ಣಗೊಳಿಸಿ ವಿಶ್ರಾಂತ ಜೀವನ ನಡೆಸುತ್ತಿದ್ದರು. ಹವ್ಯಾಸಿ ಭಾಗವತರಾಗಿ ತಮ್ಮ ಕಲಾ ಸೇವೆ ಮುಂದುವರಿಸಿದ್ದರು.
https://youtu.be/DQ8W3VN_f-w?si=LpGcbIJ-sWwqBVeO
ಬೈಕ್ ಸವಾರನಿಗೆ ಕಪಾಳಮೋಕ್ಷ ಮಾಡಿದ ಟ್ರಾಫಿಕ್ ಪೊಲೀಸ್ -ವೈರಲ್ ವಿಡಿಯೋ ನೋಡಿ