Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ಡಿಜಿಟಲ್ ಅರೆಸ್ಟ್ ಎಂಬ ಆನ್ಲೈನ್ ವಂಚನೆ ಪ್ರತಿನಿತ್ಯ ವರದಿಯಾಗುತ್ತಿದೆ. ಆನ್ಲೈನ್ ವಂಚಕರು ತಾವು ಪೊಲೀಸ್ ಅಧಿಕಾರಿಗಳು, ಸಿಬಿಐ ಏಜೆಂಟ್, ತೆರಿಗೆ ಅಧಿಕಾರಿಗಳೆಂಬ ಸೋಗಿನಲ್ಲಿ ಕರೆ ಮಾಡಿ ವಂಚನೆ ಮಾಡುತ್ತಾರೆ. ಸಾಕಷ್ಟು ಜನರು ಇಂತಹ ಕರೆಗಳಿಗೆ ಭಯಗೊಂಡು ತಕ್ಷಣ ವಂಚಕರು ಹೇಳಿದ್ದಷ್ಟು ಹಣ ಪಾವತಿ ಮಾಡಿದ್ದಾರೆ.
ಕರೆ ಸ್ವೀಕರಿಸಿದವರನ್ನು ಫೋನ್ ಕಟ್ ಮಾಡಲು ಬಿಡದಂತೆ ಎಂಗೇಜ್ ಮಾಡುತ್ತಾ, ವಿವಿಧ ಅಧಿಕಾರಿಗಳ ಹೆಸರಿನಲ್ಲಿ ನಾನಾ ಕರೆ ಮಾಡುತ್ತಾ. ಇವರು ಭಯಗೊಳಿಸುವುದುಂಟು. ಕರ್ನಾಟಕದಲ್ಲಿ ಪ್ರತಿನಿತ್ಯ ಇಂತಹ ಘಟನೆ ವರದಿಯಾಗುತ್ತಿದೆ. ಇದೀಗ ಕರ್ನಾಟಕದಲ್ಲೇ ಅತಿದೊಡ್ಡ ಡಿಜಿಟಲ್ ಅರೆಸ್ಟ್ ಪ್ರಕರಣ ಇದಾಗಿದ್ದು, ಬೆಂಗಳೂರು ಮಹಿಳಾ ಟೆಕ್ಕಿಯೊಬ್ಬರು ಬರೋಬ್ಬರಿ 31.83 ಕೋಟಿ ರೂ. ಕಳೆದುಕೊಂಡಿದ್ದಾರೆ.
ಇಂದಿರಾನಗರದ ನಿವಾಸಿ, 57 ವರ್ಷ ವಯಸ್ಸಿನ ಮಹಿಳಾ ಟೆಕ್ಕಿಯನ್ನು ಸೈಬರ್ ಅಪರಾಧಿಗಳು ಆರು ತಿಂಗಳಿಗೂ ಹೆಚ್ಚು ಕಾಲ ನಿರಂತರ ಕಣ್ಗಾವಲಿನಲ್ಲಿರಿಸಿದ್ದರು. ಅಲ್ಲದೆ, ಹಣ ದೋಚಿ ನಂತರ ಹಠಾತ್ತನೆ ಸಂಪರ್ಕ ಕಡಿತಗೊಳಿಸಿದ್ದರು ಎಂದು ಹಿರಿಯ ಸೈಬರ್ ಅಪರಾಧ ತನಿಖಾಧಿಕಾರಿಯೊಬ್ಬರ ಹೇಳಿಕೆ ಉಲ್ಲೇಖಿಸಿ ‘ಡೆಕ್ಕನ್ ಹೆರಾಲ್ಡ್’ ವರದಿ ಮಾಡಿದೆ.
2024 ರ ಸೆಪ್ಟೆಂಬರ್ 15 ರಂದು ಮಹಿಳೆಗೆ ಕೊರಿಯರ್ ಸೇವೆಯಾದ ಡಿಎಚ್ಎಲ್ನಿಂದ ಬಂದವನೆಂದು ಹೇಳಿಕೊಂಡ ವ್ಯಕ್ತಿಯೊಬ್ಬ ಕರೆ ಮಾಡಿದ್ದಾನೆ. ಆಕೆಯ ಹೆಸರಿನಲ್ಲಿ ಮೂರು ಕ್ರೆಡಿಟ್ ಕಾರ್ಡ್ಗಳು, ನಾಲ್ಕು ಪಾಸ್ಪೋರ್ಟ್ಗಳು ಮತ್ತು ನಿಷೇಧಿತ MDMA ಮಾದಕ ದ್ರವ್ಯಗಳನ್ನು ಒಳಗೊಂಡಿರುವ ಒಂದು ಪ್ಯಾಕೇಜ್ ಮುಂಬೈನ ಅಂಧೇರಿಯಲ್ಲಿರುವ ಡಿಎಚ್ಎಲ್ ಕೇಂದ್ರಕ್ಕೆ ಬಂದಿದೆ ಎಂದು ಹೇಳಿದ್ದಾನೆ. ಆದರೆ, ತಾನು ಬೆಂಗಳೂರಿನಲ್ಲಿ ವಾಸಿಸುತ್ತಿದ್ದು, ಕೊರಿಯರ್ ಜೊತೆ ಯಾವುದೇ ಸಂಪರ್ಕವಿಲ್ಲ ಎಂದು ಆಕೆ ಹೇಳಿದ್ದಾಳೆ. ಆಗ, ಫೋನ್ ಸಂಖ್ಯೆ ಪ್ಯಾಕೇಜ್ಗೆ ಲಿಂಕ್ ಆಗಿರುವುದರಿಂದ ಇದು ಸೈಬರ್ ಅಪರಾಧವಾಗಿರಬಹುದು ಎಂದು ಕರೆ ಮಾಡಿದವ ಹೇಳಿಕೊಂಡಿದ್ದಾನೆ. ಈ ವಿಷಯದ ಬಗ್ಗೆ ಸೈಬರ್ ಅಪರಾಧ ಸೆಲ್ಗೆ ದೂರು ನೀಡುವಂತೆ ಆಕೆಯನ್ನು ಕೇಳಿಕೊಂಡಿದ್ದಾನೆ. ಆಕೆ ಪ್ರತಿಕ್ರಿಯಿಸುವ ಮೊದಲು, ಕರೆಯನ್ನು ಸಿಬಿಐ ಅಧಿಕಾರಿಯ ಸೋಗಿನಲ್ಲಿರುವ ವ್ಯಕ್ತಿಗೆ ವರ್ಗಾಯಿಸಲಾಗಿತ್ತು.
ನಂತರ, ಮಹಿಳೆಯ ಗುರುತನ್ನು ದುರುಪಯೋಗಪಡಿಸಿಕೊಂಡ ಸೈಬರ್ ವಂಚಕರು ಆಕೆಯ ಮೇಲೆ ನಿಗಾ ಇಡುತ್ತಿದ್ದಾರೆ ಎಂದು ಹೇಳಿ, ಸ್ಥಳೀಯ ಪೊಲೀಸರನ್ನು ಸಂಪರ್ಕಿಸದಂತೆ ಅಥವಾ ಕಾನೂನು ಸಹಾಯ ಪಡೆಯದಂತೆ ಆಕೆಗೆ ಎಚ್ಚರಿಕೆ ನೀಡಿದ್ದಾರೆ. ಆಕೆಗೆ ಮಾಹಿತಿ ನೀಡಿದರೆ ಆಕೆಯ ಕುಟುಂಬವನ್ನು ಪ್ರಕರಣದಲ್ಲಿ ಸಿಲುಕಿಸುವುದಾಗಿಯೂ ಅವರು ಬೆದರಿಕೆ ಹಾಕಿದ್ದರು ಎಂದು ವರದಿ ಉಲ್ಲೇಖಿಸಿದೆ. ಹೀಗಾಗಿ ಭಯದಿಂದ ಮತ್ತು ತನ್ನ ಮಗನ ಮದುವೆ ಸಮೀಪಿಸುತ್ತಿದ್ದರಿಂದ ಹೆದರಿದ್ದ ಸಂತ್ರಸ್ತೆ ವಂಚಕರು ಹೇಳಿದ ರೀತಿಯಲ್ಲೇ ನಡೆದುಕೊಂಡಿದ್ದರು.
ಅದಾದ ನಂತರ ಕೆಲವು ದಿನಗಳ ಬಳಿಕ ಸ್ಕೈಪ್ ವಿಡಿಯೋ ಕರೆಯ ಮೂಲಕ ಸಂತ್ರಸ್ತೆಯನ್ನು ‘ಗೃಹಬಂಧನ’ಕ್ಕೆ ಒಳಪಡಿಸಲಾಯಿತು. ನಂತರ, ಸಿಬಿಐ ಅಧಿಕಾರಿ ಪ್ರದೀಪ್ ಸಿಂಗ್ ಎಂದು ಹೇಳಿಕೊಂಡ ವ್ಯಕ್ತಿಯೊಬ್ಬ ರಾಹುಲ್ ಯಾದವ್ ಎಂಬ ಇನ್ನೊಬ್ಬ ವ್ಯಕ್ತಿಗೆ ಒಂದು ವಾರದ ಕಾಲ ಆಕೆಯನ್ನು ಮೇಲ್ವಿಚಾರಣೆ ಮಾಡಲು ನಿಯೋಜಿಸಿದ. ಈ ಸಮಯದಲ್ಲಿ, ಸಂತ್ರಸ್ತೆ ವರ್ಕ್ ಫ್ರಂ ಹೋಮ್ನಲ್ಲಿದ್ದರು.
2024 ರ ಸೆಪ್ಟೆಂಬರ್ 23ರಂದು, ಆರ್ಬಿಐನ ಹಣಕಾಸು ಗುಪ್ತಚರ ಘಟಕ (ಎಫ್ಐಯು)ಕ್ಕೆ ಆಸ್ತಿಗಳನ್ನು ಘೋಷಿಸುವಂತೆ ಮಹಿಳೆಗೆ ಪ್ರದೀಪ್ ಸಿಂಗ್ ಸೂಚಿಸಿದ್ದ. ಅದರಂತೆ ಮಹಿಳೆ ನಡೆದುಕೊಂಡಿದ್ದರು. ನಂತರ ವಂಚಕರು ಹಂತಹಂತವಾಗಿ ಹಣ ವಸೂಲಿ ಮಾಡಿದ್ದರು.
ಹಿರಿಯ ಪೊಲೀಸ್ ಅಧಿಕಾರಿಯೊಬ್ಬರ ಪ್ರಕಾರ, ವಂಚಕರ ಸೂಚನೆಯಂತೆ ಮಹಿಳೆಯು ತಮ್ಮ ಸ್ಥಿರ ಠೇವಣಿಗಳನ್ನು ಹೊರತುಪಡಿಸಿ, ಉಳಿದಿದ್ದ ಉಳಿತಾಯದ ₹31.83 ಕೋಟಿ ಹಣವನ್ನು 187 ವಹಿವಾಟುಗಳಲ್ಲಿ ಸೈಬರ್ ಕಳ್ಳರ ಖಾತೆಗೆ ವರ್ಗಾಯಿಸಿದ್ದಾರೆ. 2025ರ ಫೆಬ್ರವರಿ ಒಳಗೆ ಪರಿಶೀಲನೆ ಮಾಡಿ ಹಣವನ್ನು ಹಿಂದಿರುಗಿಸುವುದಾಗಿ ನಕಲಿ ಅಧಿಕಾರಿಗಳು ಭರವಸೆ ನೀಡಿದ್ದರು ಮತ್ತು ‘ಕ್ಲಿಯರೆನ್ಸ್ ಸರ್ಟಿಫಿಕೇಟ್’ ಕೂಡ ನೀಡಿದ್ದರು.
ಹಣ ಮರಳಿ ನೀಡಲು ವಂಚಕರು ಸತತವಾಗಿ ನೆಪ ಹೇಳಲು ಆರಂಭಿಸಿದಾಗ ಸಂತ್ರಸ್ತೆಗೆ ಅನುಮಾನ ಬಂದು, 2025ರ ನವೆಂಬರ್ 14 ರಂದು ಬೆಂಗಳೂರು ಪೂರ್ವ ಸೈಬರ್ ಕ್ರೈಮ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.