Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ಚಿತ್ರದುರ್ಗ: ಮಠದ ಹಾಸ್ಟೆಲ್ನಲ್ಲಿನ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದಲ್ಲಿ ಚಿತ್ರದುರ್ಗದ ಡಾ. ಶಿವಮೂರ್ತಿ ಮುರುಘಾ ಶರಣರನ್ನು ಚಿತ್ರದುರ್ಗ ಎರಡನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ಆರೋಪ ಮುಕ್ತಗೊಳಿಸಿದೆ.
ಪ್ರಕರಣ ಸಂಬಂಧ ಸುದೀರ್ಘ ವಿಚಾರಣೆ ನಡೆಸಿದ ಎರಡನೇ ಜಿಲ್ಲಾ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಗಂಗಾಧರ್ ಚನ್ನಬಸಪ್ಪ ಹಡಪದ ಬುಧವಾರ ತೀರ್ಪು ಪ್ರಕಟಿಸಿದರು.
ಎ-1 ಆರೋಪಿಯಾಗಿದ್ದ ಶಿವಮೂರ್ತಿ ಮುರುಘಾ ಶ್ರೀಗಳು, ರಶ್ಮಿ ಹಾಗೂ ಪರಮಶಿವಯ್ಯ ಅವರನ್ನು ದೋಷ ಮುಕ್ತಗೊಳಿಸಲಾಗಿದೆ.
ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ಚಿತ್ರದುರ್ಗ ಮುರುಘಾ ಮಠದ ಡಾ.ಶಿವಮೂರ್ತಿ ಮುರುಘಾ ಶರಣರ ವಿರುದ್ಧದ ಅಪ್ರಾಪ್ತ ಬಾಲಕಿಯರ ಮೇಲಿನ ಲೈಂಗಿಕ ದೌರ್ಜನ್ಯ ಮತ್ತು ಅತ್ಯಾಚಾರದ ಆರೋಪಗಳ ಪ್ರಕರಣದ ವಿಚಾರಣೆಯನ್ನು ಪೂರೈಸಿದ ನ್ಯಾಯಾಲಯ ನ.26ರಂದು ತೀರ್ಪು ಪ್ರಕಟಿಸುವುದಾಗಿ ನ.18ರಂದು ತಿಳಿಸಿತ್ತು.
ಮುರುಘಾ ಮಠದ ಡಾ.ಶಿವಮೂರ್ತಿ ಮುರುಘಾ ಶರಣರ ಪರವಾಗಿ ನ್ಯಾಯಾಲಯದಲ್ಲಿ ಕ್ರಿಮಿನಲ್ ವಕೀಲ ಸಿ.ವಿ.ನಾಗೇಶ್ ವಾದ ಮಂಡನೆ ಮಾಡಿದ್ದರು. ಸ್ವಾಮೀಜಿ ವಿರುದ್ಧದ ಎಲ್ಲ ಆರೋಪಗಳು ಸುಳ್ಳು ಎಂದು ವಾದ ಮಂಡಿಸಿದ್ದರು.
ಪ್ರಕರಣದ ವಿವರ
ಇಬ್ಬರು ಅಪ್ರಾಪ್ತ ವಯಸ್ಸಿನ ಬಾಲಕಿಯರಲ್ಲದೆ ಇತರೆ ಮಕ್ಕಳ ಮೇಲೂ ಶಿವಮೂರ್ತಿ ಶರಣರು ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂದು ಮಠದಲ್ಲಿನ ಅಡುಗೆ ಕೆಲಸದ ಮಹಿಳೆ ದೂರಿನಲ್ಲಿ ಪ್ರಸ್ತಾಪಿಸಿದ್ದರು.
ಈ ಆಧಾರದ ಮೇಲೆ ಮೈಸೂರಿನ ನಜರಾಬಾದ್ ಪೊಲೀಸ್ ಠಾಣೆಯಲ್ಲಿ 2022ರ ಆಗಸ್ಟ್ 26ರಂದು ಎಫ್ಐಆರ್ ದಾಖಲಿಸಲಾಗಿತ್ತು. ಆ.26ಕ್ಕೆ ಈ ದೂರನ್ನು ಚಿತ್ರದುರ್ಗ ಗ್ರಾಮಾಂತರ ಪೋಲೀಸ್ ಠಾಣೆಗೆ ವರ್ಗಾಯಿಸಲಾಗಿತ್ತು.
2022 ಆಗಸ್ಟ್ 26 ರಂದು ಮುರುಘಾ ಶ್ರೀ ವಿರುದ್ಧ ಮೊದಲ ಪೋಕ್ಸೋ ಪ್ರಕರಣ ದಾಖಲಾಗಿತ್ತು. ಬಳಿಕ ಎರಡನೇ ಪೋಕ್ಸೋ ಪ್ರಕರಣ ಕೂಡ ದಾಖಲಾಗಿತ್ತು. ಈ ಪ್ರಕರಣದಲ್ಲಿ ಮುರುಘಾ ಶರಣರು ಜೈಲು ಸೇರಿದ್ದರು. ಈಗ ಮುರುಘಾ ಶ್ರೀಗಳ ವಿರುದ್ಧದ ಪೋಕ್ಸೋ ಪ್ರಕರಣದ ಮೊದಲ ಕೇಸ್ ವಿಚಾರಣೆ ಮುಕ್ತಾಯವಾಗಿದೆ.
ಈ ಸಂಬಂಧ ಚಿತ್ರದುರ್ಗ ಗ್ರಾಮಾಂತರ ಪೊಲೀಸರು ಇಬ್ಬರು ಸಂತ್ರಸ್ತೆಯರು ಇರುವ ಹಿನ್ನೆಲೆಯಲ್ಲಿ ಎರಡು ಪ್ರತ್ಯೇಕ ಆರೋಪ ಪಟ್ಟಿ ಸಲ್ಲಿಸಿದ್ದಾರೆ.
ಕೋರ್ಟ್ ಆವರಣದಲ್ಲಿ ಕಿಕ್ಕಿರಿದಿದ್ದ ಜನ
ಡಾ. ಶಿವಮೂರ್ತಿ ಮುರುಘಾ ಶರಣರ ವಿರುದ್ಧದ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ನ.26ರ ಬುಧವಾರ ತೀರ್ಪು ಪ್ರಕಟವಾಗುವ ಹಿನ್ನೆಲೆಯಲ್ಲಿ ನ್ಯಾಯಾಲಯದ ಆವರಣದಲ್ಲಿ ಜನ ಕಿಕ್ಕಿರಿದು ಜಮಾಯಿಸಿದ್ದರು. ಬೆಳಗ್ಗೆ 11 ಗಂಟೆಗೆ ನ್ಯಾಯಾಲಯದ ಕಲಾಪ ಆರಂಭವಾಗುತ್ತಿದ್ದಂತೆ ಪ್ರಕರಣ ಕೈಗೆತ್ತಿಕೊಂಡ ನ್ಯಾಯಾಧೀಶರು ಪ್ರಕರಣವನ್ನು ಮಧ್ಯಾಹ್ನ 2:45 ಗಂಟೆಗೆ ಮುಂದೂಡಿದರು.ಇದರಿಂದ ಭಕ್ತರಲ್ಲಿ ಮತ್ತಷ್ಟು ಕುತೂಹಲ ಹೆಚ್ಚಾಯಿತು. ಬೆಳಗ್ಗೆಯಿಂದಲೇ ಜಮಾಯಿಸಿದ್ದ ಭಕ್ತರ ದಂಡು ಮಧ್ಯಾಹ್ನದ ಹೊತ್ತಿಗೆ ಮತ್ತಷ್ಟು ಹೆಚ್ಚಾಯಿತು. ಮಧ್ಯಾಹ್ನ ಪ್ರಕಟವಾಗುವ ತೀರ್ಪು ಕೇಳುವ ಕುತೂಹಲದಿಂದ ನ್ಯಾಯಾಲಯದ ಬಳಿ ಭಕ್ತರ ದಂಡೇ ಸೇರಿತ್ತು. ತೀರ್ಪು ಪ್ರಕಟವಾಗುವ ಹಿನ್ನೆಲೆಯಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್ ಮಾಡಲಾಗಿತ್ತು.
Deepti Chaurasia lost her life ಜೀವ ಕಳೆದುಕೊಂಡ ಮಸಾಲಾ ಉದ್ಯಮಿ ಕಮಲ್ ಕಿಶೋರ್ ಸೊಸೆ
ಗಂಡ ಹೆಂಡತಿ ಪ್ರತ್ಯೇಕವಿದ್ದಾರೆಂದ ಮಾತ್ರಕ್ಕೆ ಮದುವೆ ಮುರಿದಿದೆ ಎಂದರ್ಥವಲ್ಲ: ಸುಪ್ರೀಂ ಅಭಿಪ್ರಾಯ