Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ಬೆಂಗಳೂರು: ರಾಜ್ಯದ ವಿವಿಧ ಸರ್ಕಾರಿ ಶಾಲೆಗಳಲ್ಲಿ ಪ್ರಾರಂಭಿಸಿರುವ ಪೂರ್ವ ಪ್ರಾಥಮಿಕ ತರಗತಿಗಳ (ಎಲ್ಕೆಜಿ-ಯುಕೆಜಿ) ಮಕ್ಕಳಿಗೂ ಡಿ.1ರಿಂದ ಬೆಳಗ್ಗೆ ಹಾಲು, ಮಧ್ಯಾಹ್ನ ಬಿಸಿಯೂಟ ಮತ್ತು ಮೊಟ್ಟೆ, ಬಾಳೆಹಣ್ಣು ವಿತರಿಸಲು ಅನುಮತಿ ನೀಡಿ ಶಿಕ್ಷಣ ಇಲಾಖೆಗೆ ರಾಜ್ಯ ಸರ್ಕಾರ ಆದೇಶಿಸಿದೆ.
ಕೆಪಿಎಸ್, ಪಿಎಂಶ್ರೀ, ಮ್ಯಾಗ್ನೇಟ್ ಶಾಲೆಗಳು, ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯಿಂದ ಪ್ರಾರಂಭಿಸಲಾಗಿರುವ ಶಾಲೆಗಳು ಸೇರಿ 2018ರಿಂದ ಪ್ರಾರಂಭವಾಗಿರುವ ಎಲ್ಲ ಪೂರ್ವ ಪ್ರಾಥಮಿಕ ಶಾಲೆಗಳಲ್ಲಿ ಎಲ್ಕೆಜಿ-ಯುಕೆಜಿ ತರಗತಿ ಮಕ್ಕಳಿಗೂ ಕ್ಷೀರಭಾಗ್ಯ ಯೋಜನೆಯಡಿ ಪ್ರತಿ ದಿನ ರಾಗಿ ಮಾಲ್ಟ್ ಮಿಶ್ರಿತ ಹಾಲು, ಪಿಎಂ ಪೋಷಣ್ ಶಕ್ತಿ ನಿರ್ಮಾಣ್ ಯೋಜನೆಯಡಿ ಬಿಸಿಯೂಟ ಮತ್ತು ಪೂರಕ ಪೌಷ್ಟಿಕ ಆಹಾರ ಪೂರೈಕೆ ಯೋಜನೆಯಡಿ ವಾರದಲ್ಲಿ ಆರು ದಿನ ಮೊಟ್ಟೆ/ಬಾಳೆಹಣ್ಣು ವಿತರಿಸಲು ಶಿಕ್ಷಣ ಇಲಾಖೆ ಆಯುಕ್ತರಿಗೆ ಸೂಚಿಸಿದೆ.
ವಿದ್ಯಾರ್ಥಿಗಳ ಮಧ್ಯಾಹ್ನದ ಊಟಕ್ಕೆ ಆಗುವ ವೆಚ್ಚದಲ್ಲಿನ ಶೇಕಡಾ 60ರಷ್ಟು ಹಣವನ್ನು ಕೇಂದ್ರ ಸರ್ಕಾರ ನೀಡಲಿದೆ. ಉಳಿದ ಶೇಕಡಾ 40ರಷ್ಟು ಹಣವನ್ನು ರಾಜ್ಯ ಸರ್ಕಾರ ಭರಿಸಲಿದೆ. ಆದರೆ, ಕ್ಷೀರ ಭಾಗ್ಯ ಯೋಜನೆ, ಮೊಟ್ಟೆ ಮತ್ತು ಬಾಳೆಹಣ್ಣುಗಳ ಸಂಪೂರ್ಣ ವೆಚ್ಚವನ್ನು ರಾಜ್ಯ ಸರ್ಕಾರವೇ ಹೊರಲಿದೆ. ಪ್ರತಿ ವಿದ್ಯಾರ್ಥಿಗೆ ನೀಡಲಾಗುವ ಆಹಾರ ತಯಾರಿಸುವ ವೆಚ್ಚ 6.78 ರೂ. ಆಗಿದ್ದು, ಇದರಲ್ಲಿಂದು ಕೇಂದ್ರ ಸರ್ಕಾರ 4.07 ರೂ. ಮತ್ತು ರಾಜ್ಯ ಸರ್ಕಾರ 2.71 ರೂ. ಭರಿಸಲಿವೆ. ಕರ್ನಾಟಕದಲ್ಲಿ 1,98,270ಕ್ಕೂ ಹೆಚ್ಚು ಮಕ್ಕಳು ಪೂರ್ವ ಪ್ರಾಥಮಿಕ ಶಾಲೆಗಳಲ್ಲಿ ಶಿಕ್ಷಣ ಪಡೆಯುತ್ತಿದ್ದಾರೆ.