Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ರಾಜ್ಯ ರಾಜಕಾರಣದಲ್ಲಿ ನಾಯಕತ್ವ ಬದಲಾವಣೆಯ ಚರ್ಚೆಗಳು ತೀವ್ರಗೊಂಡಿದೆ. ಈ ನಡುವೆ ಶನಿವಾರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಅತ್ಯಂತ ಮಹತ್ವದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಪಾಲ್ಗೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ದೆಹಲಿಗೆ ತೆರಳಲಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸಭೆಯಿಂದ ದೂರ ಉಳಿಯುತ್ತಿರುವುದು ಅಚ್ಚರಿಗೆ ಕಾರಣವಾಗಿದೆ.
ಸಿದ್ದರಾಮಯ್ಯ ಅವರು ಏಕಾಂಗಿಯಾಗಿ ದೆಹಲಿಗೆ ತೆರಳುತ್ತಿರುವುದರಿಂದ ಅಧಿಕಾರ ಹಂಚಿಕೆಯ ಪ್ರಹಸನ ತಾರ್ಕಿಕ ಅಂತ್ಯ ಕಾಣಬಹುದು ಎಂಬ ನಿರೀಕ್ಷೆಗಳು ಗರಿಗೆದರಿವೆ. ಕಳೆದ ವಾರ ಡಿ.ಕೆ.ಶಿವಕುಮಾರ್ ದೆಹಲಿಗೆ ತೆರಳಿದ್ದರು. ಆದರೆ ಆ ಸಂದರ್ಭದಲ್ಲಿ ಈ ರಾಷ್ಟ್ರೀಯ ಮಟ್ಟದ ಯಾವ ನಾಯಕರನ್ನೂ ಭೇಟಿ ಮಾಡದೆ ಬರಿ ಕೈಯಲ್ಲಿ ವಾಪಸ್ ಬಂದಿದ್ದರು.
ರಾಜ್ಯದ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ಈ ಬಾರಿ ಕಾರ್ಯಕಾರಿ ಸಮಿತಿ ಸಭೆಗೆ ಆಹ್ವಾನ ಬಂದಿಲ್ಲದಿರುವುದು ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ತಮಗೆ ಆಹ್ವಾನ ಬಾರದಿರುವ ಕುರಿತು ಗುರುವಾರ ಪರೋಕ್ಷವಾಗಿ ಅಸಮಾಧಾನ ಹೊರಹಾಕಿದ್ದ ಡಿ.ಕೆ. ಶಿವಕುಮಾರ್, ಮುಖ್ಯಮಂತ್ರಿಗಳಿಗೆ ಆಹ್ವಾನ ಬಂದಿರುವುದು ನನಗೆ ತಿಳಿದಿದೆ. ಆದರೆ ನನಗೆ ಆಹ್ವಾನ ಬಂದಿಲ್ಲ. ಪಕ್ಷ ಕರೆದರೆ ನಾನು ಎಲ್ಲಿಗೆ ಬೇಕಿದ್ದರೂ ಹೋಗಲು ಸಿದ್ಧ ಎಂದು ಹೇಳಿದ್ದರು.
ಈ ಹಿಂದೆ ಸುದ್ದಿಗಾರರೊಂದಿಗೆ ಮಾತನಾಡಿದ್ದ ಸಿಎಂ ಸಿದ್ದರಾಮಯ್ಯ, ನಾನು ಕಾರ್ಯಕಾರಿ ಸಮಿತಿ ಸಭೆಯ ಸದಸ್ಯನಲ್ಲ, ಒಂದು ವೇಳೆ ಹೈಕಮಾಂಡ್ನಿಂದ ಆಹ್ವಾನ ಬಂದರೆ ಖಂಡಿತ ಹೋಗುತ್ತೇನೆ ಎಂದು ಹೇಳಿದ್ದರು. ಇದೀಗ ಹೈಕಮಾಂಡ್ನಿಂದ ಅಧಿಕೃತ ಆಹ್ವಾನ ಬಂದಿರುವ ಹಿನ್ನೆಲೆಯಲ್ಲಿ ಅವರು ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ.
https://www.newsics.com/2025/12/27/vishnu-statue-destroyed-by-bulldozer-in-cambodia/