Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ಬಳ್ಳಾರಿ: ನಗರದ ಸಿರುಗುಪ್ಪ ರಸ್ತೆಯ ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿ ನಿವಾಸದ ಬಳಿ ಬ್ಯಾನರ್ ಕಟ್ಟುವ ವಿಚಾರವಾಗಿ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಗುರುವಾರ ರಾತ್ರಿ ಘರ್ಷಣೆ ಉಂಟಾದ ಹಿನ್ನೆಲೆಯಲ್ಲಿ ಕಲ್ಲು ತೂರಾಟ ನಡೆದಿದ್ದು, ಪರಿಸ್ಥಿತಿ ನಿಯಂತ್ರಣಕ್ಕೆ ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಈ ವೇಳೆ ಓರ್ವ ಕಾಂಗ್ರೆಸ್ ಕಾರ್ಯಕರ್ತ ಬಲಿಯಾಗಿದ್ದಾನೆ.
ಶಾಸಕ ಜನಾರ್ದನ ರೆಡ್ಡಿ ಹಾಗೂ ಶಾಸಕ ನಾರಾ ಭರತ್ ರೆಡ್ಡಿ ಬೆಂಬಲಿಗರ ಎರಡು ಗುಂಪುಗಳ ಮಧ್ಯೆ ಈ ಗಲಾಟೆ ನಡೆದಿದೆ.
ಎರಡು ಗುಂಪಿನ ಮಧ್ಯೆ ಮಾತು ಮಾತಿಗೆ ಬೆಳೆದು ಪರಿಸ್ಥಿತಿ ವಿಕೋಪಕ್ಕೆ ತಿರುಗುತ್ತಿದ್ದಂತೆ ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿ ಜನರನ್ನು ಚದುರಿಸಲು ಯತ್ನಿಸಿದರು.
ಜ.3ರಂದು ನಗರದ ಎಸ್ಪಿ ವೃತ್ತದ ಬಳಿ ಶ್ರೀ ಮಹರ್ಷಿ ವಾಲ್ಮೀಕಿ ಅವರ ಪುತ್ಥಳಿ ಅನಾವರಣ ಕಾರ್ಯಕ್ರಮಕ್ಕೆ ಅದ್ಧೂರಿ ಸಿದ್ಧತೆ ನಡೆದಿದೆ. ಇದು ಇಬ್ಬರು ನಾಯಕರ ಬೆಂಬಲಿಗರ ಮಧ್ಯೆ ಮಾರಾಮಾರಿಗೆ ಕಾರಣವಾಗಿದೆ.
ಘಟನೆ ವಿಕೋಪಕ್ಕೆ ತಿರುಗುತ್ತಿದ್ದಂತೆ ನಿಯಂತ್ರಿಸಲು, ಜನರನ್ನು ಚದುರಿಸಲು ಪೊಲೀಸರು ಹೈರಾಣಾದರು. ಈ ವೇಳೆ ಸ್ಥಳದಲ್ಲಿದ್ದ ಪೋಲೀಸ್ಗೂ ಕಲ್ಲು ಬಡಿದು ಗಾಯಗೊಂಡ ಘಟನೆಯೂ ನಡೆದಿದೆ.
ಈ ವೇಳೆ ಶಾಸಕ ನಾರಾ ಭರತ್ ರೆಡ್ಡಿ ಅವರ ಬೆಂಬಲಿಗ ರಾಜಶೇಖರ್ ಎಂಬುವರು ಮೃತಪಟ್ಟಿದ್ದಾರೆ. ಜನಾರ್ದನ ರೆಡ್ಡಿ ಅವರ ನಿವಾಸದ ಎದುರು ಹೆಚ್ಚು ಜಮಾವಣೆ ಆಗುತ್ತಿದ್ದಂತೆ ಸ್ಥಳಕ್ಕೆ ಮಾಜಿ ಸಚಿವ ಶ್ರೀರಾಮುಲು ಅವರು ಆಗಮಿಸಿದರು. ಈ ವೇಳೆ ಮತ್ತೆ ಮಾತು ಮಾತಿಗೆ ಬೆಳೆದು, ಪರಿಸ್ಥಿತಿ ವಿಕೋಪಕ್ಕೆ ತಿರುಗಿತು. ಜನರನ್ನು ಚದುರಿಸಲು ಪೋಲೀಸರು ಹರಸಾಹಸಪಟ್ಟರು.
ಶಾಸಕ ಭರತ್ ರೆಡ್ಡಿ ಅವರ ಆಪ್ತ ಸತೀಶ್ ರೆಡ್ಡಿ ಹಾಗೂ ಆಪ್ತರ ಗುಂಪು ಹಾಗೂ ರೆಡ್ಡಿ ಅವರ ಗುಂಪಿನ ಮಧ್ಯೆ ಪರಸ್ಪರ ಕಲ್ಲು ತೂರಾಟ ನಡೆಯಿತು. ಮತ್ತೆ ಪೋಲೀಸರು ಗಾಳಿಯಲ್ಲಿ ಗುಂಡು ಹಾರಿಸಿ ಚದುರಿಸಿದರು. ರೆಡ್ಡಿ ನಿವಾಸದ ಎದುರು ಪರಿಸ್ಥಿತಿ ವಿಕೋಪಕ್ಕೆ ತಿರುಗಿದ್ದು, ಮುಂಜಾಗೃತಾ ಕ್ರಮವಾಗಿ ಹೆಚ್ಚು ಪೋಲೀಸರನ್ನು ನಿಯೋಜಿಸಲಾಗಿದೆ.
ನನ್ನ ಹತ್ಯೆಗೆ ಯತ್ನ ನಡೆದಿದೆ ಎಂದು ಜನಾರ್ದನ ರೆಡ್ಡಿ ಆರೋಪಿಸಿದರೆ, ಇದು ಬ್ಯಾನರ್ ಅಳವಡಿಸುವ ಗಲಾಟೆ ಅಲ್ಲ, ವಾಲ್ಮೀಕಿ ಪುತ್ತಳಿ ಅನಾವರಣ ಅದ್ದೂರಿ ಕಾರ್ಯಕ್ರಮ ಆಗಬಾರದು ಎಂದು ಉದ್ದೇಶ ಪೂರ್ವಕವಾಗಿ ಜನಾರ್ದನ ರೆಡ್ಡಿ ನಡೆಸಿದ ಸಂಚು ಇದು ಎಂದು ನಗರ ಶಾಸಕ ನಾರಾ ಭರತ್ ರೆಡ್ಡಿ ಆರೋಪಿಸಿದ್ದಾರೆ.