Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ಬೆಳ್ತಂಗಡಿ: ತಾಲೂಕಿನ ಓಡಿಲ್ನಾಳ ಗ್ರಾಮದ ಸಂಬೋಳ್ಯ ಎಂಬಲ್ಲಿ ದೇವಸ್ಥಾನಕ್ಕೆ ಹೋದ ಬಾಲಕನ ಮೃತದೇಹ ಕೆರೆಯಲ್ಲಿ ಪತ್ತೆಯಾದ ಪ್ರಕರಣವು ಈಗ ಹೊಸ ತಿರುವು ಪಡೆದುಕೊಂಡಿದೆ.
ಸುಮಂತ್ (15) ಎಂಬ ಬಾಲಕ ದೇವಸ್ಥಾನಕ್ಕೆ ಹೋಗಿದ್ದ ವೇಳೆ ನಾಪತ್ತೆಯಾಗಿದ್ದನು. ನಂತರ ಅವನ ಮೃತದೇಹವು ಸ್ಥಳೀಯ ಕೆರೆಯಲ್ಲಿ ಪತ್ತೆಯಾಗಿತ್ತು. ಆರಂಭದಲ್ಲಿ ಇದನ್ನು ಅಸಹಜ ಸಾವು ಎಂದು ಭಾವಿಸಲಾಗಿತ್ತು. ಆದರೆ, ಬಾಲಕನ ತಲೆಯ ಮೇಲಿರುವ ಗಾಯಗಳು ಸಂಶಯಕ್ಕೆ ಎಡೆಮಾಡಿಕೊಟ್ಟಿವೆ.
ಧನುರ್ಮಾಸದ ಪೂಜೆಗಾಗಿ ಮುಂಜಾನೆ ಸುಮಾರು 5 ಗಂಟೆಗೆ ಮನೆ ಸಮೀಪದ ಕಳಿಯ ಗ್ರಾಮದ ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಹೋಗಿದ್ದ ಅತ್ತ ದೇವಸ್ಥಾನವನ್ನೂ ತಲುಪಿರಲಿಲ್ಲ, ಇತ್ತ ಮರಳಿ ಮನೆಗೂ ಬಂದಿರಲಿಲ್ಲ. ಆತನ ಜೊತೆ ನಿತ್ಯವೂ ಧನುಪೂಜೆಯಲ್ಲಿ ಭಾಗವಹಿಸುತ್ತಿದ್ದ ಆತನ ಗೆಳೆಯರು ಆತ ದೇವಸ್ಥಾನಕ್ಕೆ ಬಾರದೇ ಇರುವ ಹಿನ್ನೆಲೆಯಲ್ಲಿ ಮನೆಗೆ ಕರೆ ಮಾಡಿ ಕೇಳಿದಾಗ ಘಟನೆ ಬೆಳಕಿಗೆ ಬಂದಿತ್ತು. ಹೀಗಾಗಿ ಪೋಷಕರು ಬಾಲಕನಿಗಾಗಿ ಹುಡುಕಾಟ ನಡೆಸಿದಾಗ ಬುಧವಾರ ಬೆಳಗ್ಗೆ 11.30ರ ಸುಮಾರಿಗೆ ಸುಮಂತ್ ಶವ ಕೆರೆಯಲ್ಲಿ ಪತ್ತೆಯಾಗಿತ್ತು.
ನಂತರ ಮರಣೋತ್ತರ ಪರೀಕ್ಷೆಗಾಗಿ ಬಾಲಕನ ಶವವನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ತೆಗೆದುಕೊಂಡು ಹೋಗಲಾಗಿತ್ತು.
ಮರಣೋತ್ತರ ಪರೀಕ್ಷಾ ವರದಿ ಈಗ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ನೀಡಿದೆ. ವರದಿಯ ಪ್ರಕಾರ ಸುಮಂತ್ನ ತಲೆಯ ಹಿಂಭಾಗ ಕತ್ತಿ ಅಥವಾ ಬಲವಾದ ಆಯುಧದಿಂದ ಹೊಡೆದಂತಹ ಗುರುತು ಇರುವುದು ಪತ್ತೆಯಾಗಿದೆ. ಮರಣೋತ್ತರ ಪರೀಕ್ಷೆ ವರದಿಯ ನಂತರ ಪೊಲೀಸರು ತಾವು ದಾಖಲಿಸಿದ ಅಸಹಜ ಸಾವು ಪ್ರಕರಣವನ್ನು ಕೊಲೆ ಪ್ರಕರಣವೆಂದು ಬದಲಾಯಿಸಿದ್ದಾರೆ. ಮರಣೋತ್ತರ ಪರೀಕ್ಷಾ ವರದಿಯಲ್ಲಿ ಇರುವಂತೆ ಬಾಲಕ ಉಸಿರುಕಟ್ಟಿ ಸಾವನ್ನಪ್ಪಿದ್ದಾನೆ. ಆತ ಕೆರೆಗೆ ಬಿದ್ದಾಗ ಬದುಕಿದ್ದ ಎಂಬ ಮಾಹಿತಿ ಇದೆ.