Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ಬೆಂಗಳೂರು: ದ್ವಿತೀಯ ಪಿಯುಸಿ ಪ್ರಿಪರೇಟರಿ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ಬೆನ್ನಲ್ಲೇ ಶಿಕ್ಷಣ ಇಲಾಖೆ ಕಠಿಣ ಕ್ರಮಕ್ಕೆ ಮುಂದಾಗಿದೆ. ಇಂತಹ ಪರೀಕ್ಷಾ ಅಕ್ರಮಗಳನ್ನು ತಡೆಯುವ ಉದ್ದೇಶದಿಂದ ಇನ್ಮುಂದೆ ಪದವಿ ಪೂರ್ವ ಕಾಲೇಜುಗಳ ಆವರಣದಲ್ಲಿ ಮೊಬೈಲ್ ಫೋನ್ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲು ಇಲಾಖೆ ಚಿಂತನೆ ನಡೆಸುತ್ತಿದೆ.
ಜನವರಿ 27ರಿಂದ ಆರಂಭಗೊಳ್ಳಲಿರುವ ಎರಡನೇ ಪ್ರಿಪರೇಟರಿ ಪರೀಕ್ಷೆಗೆ ಮುನ್ನವೇ ಈ ನಿರ್ಧಾರವನ್ನು ಜಾರಿಗೆ ತರಲು ಶಿಕ್ಷಣ ಇಲಾಖೆ ಸಿದ್ಧತೆ ನಡೆಸಿದೆ. ಪರೀಕ್ಷೆಗಳ ಪಾವಿತ್ರ್ಯ ಕಾಪಾಡುವ ಸಲುವಾಗಿ ವಿದ್ಯಾರ್ಥಿಗಳು ಮಾತ್ರವಲ್ಲದೆ ಉಪನ್ಯಾಸಕರಿಗೂ ಕಾಲೇಜು ಆವರಣದಲ್ಲಿ ಮೊಬೈಲ್ ಬಳಕೆಗೆ ಅವಕಾಶ ಇರದಂತೆ ನಿರ್ಬಂಧ ಹೇರಲು ಚರ್ಚೆ ನಡೆಯುತ್ತಿದೆ.
ಶಿಕ್ಷಣ ಇಲಾಖೆ ಉನ್ನತ ಮೂಲಗಳ ಮಾಹಿತಿ ಪ್ರಕಾರ, ಕಾಲೇಜು ಆವರಣ ಪ್ರವೇಶಿಸುವ ಪ್ರತಿಯೊಬ್ಬರೂ ತಮ್ಮ ಮೊಬೈಲ್ ಫೋನ್ಗಳನ್ನು ಸ್ವಿಚ್ ಆಫ್ ಮಾಡಬೇಕಾಗುತ್ತದೆ. ಉಪನ್ಯಾಸಕರು ತಮ್ಮ ಮೊಬೈಲ್ಗಳನ್ನು ಪ್ರಾಂಶುಪಾಲರಿಗೆ ಹಸ್ತಾಂತರಿಸಬೇಕಾಗಿದ್ದು, ವಿದ್ಯಾರ್ಥಿಗಳಿಗೆ ಸಂಪೂರ್ಣವಾಗಿ ಮೊಬೈಲ್ ನಿಷೇಧ ಜಾರಿಗೊಳಿಸಲಾಗುವುದು. ಈ ಸಂಬಂಧ ಈಗಾಗಲೇ ಶಿಕ್ಷಣ ಇಲಾಖೆ ಮಟ್ಟದಲ್ಲಿ ಹಲವು ಸುತ್ತಿನ ಸಭೆಗಳು ನಡೆದಿವೆ.
ಪಿಯುಸಿ ಪ್ರಿಪರೇಟರಿ ಪರೀಕ್ಷೆಗಳನ್ನು ಪಾರದರ್ಶಕವಾಗಿ ನಡೆಸಲು ಕಟ್ಟುನಿಟ್ಟಿನ ಕ್ರಮ
ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳು ಮರುಕಳಿಸದಂತೆ ತಡೆಯಲು ಈ ಕ್ರಮ ಅಗತ್ಯ ಎಂದು ಇಲಾಖೆ ಅಭಿಪ್ರಾಯಪಟ್ಟಿದೆ. ಈಗಾಗಲೇ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವರನ್ನು ಪೊಲೀಸರು ಬಂಧಿಸಿರುವುದು ಶಿಕ್ಷಣ ಇಲಾಖೆಯನ್ನು ಇನ್ನಷ್ಟು ಎಚ್ಚರಗೊಳಿಸಿದೆ. ಪರೀಕ್ಷಾ ವ್ಯವಸ್ಥೆಯಲ್ಲಿ ಯಾವುದೇ ರೀತಿಯ ಅಕ್ರಮಗಳಿಗೆ ಅವಕಾಶ ಕೊಡದಂತೆ ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೊಳಿಸುವುದೇ ಈ ನಿರ್ಧಾರದ ಮೂಲ ಉದ್ದೇಶವಾಗಿದೆ.
ಒಟ್ಟಿನಲ್ಲಿ, ದ್ವಿತೀಯ ಪಿಯುಸಿ ಪ್ರಿಪರೇಟರಿ ಪರೀಕ್ಷೆಗಳನ್ನು ಪಾರದರ್ಶಕವಾಗಿ ಹಾಗೂ ನ್ಯಾಯಸಮ್ಮತವಾಗಿ ನಡೆಸುವ ನಿಟ್ಟಿನಲ್ಲಿ ಶಿಕ್ಷಣ ಇಲಾಖೆ ಕೈಗೊಂಡಿರುವ ಈ ಕ್ರಮವು ಮುಂದಿನ ದಿನಗಳಲ್ಲಿ ಪದವಿ ಪೂರ್ವ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆಗೆ ಕಾರಣವಾಗುವ ಸಾಧ್ಯತೆ ಇದೆ.
ಶೂ, ಸಾಕ್ಸ್ ಬದಲಿಗೆ ಮಕ್ಕಳಿಗೆ ಚಪ್ಪಲಿ ಭಾಗ್ಯ?;ಶಿಕ್ಷಣ ಇಲಾಖೆ ಮಾಡ್ತಿರೊ ಪ್ಲಾನ್ ಏನು?