https://youtube.com/shorts/OcRzQ68lM7k?si=kBWGhvCtygy6kinF
Subscribe ನ್ಯೂಸಿಕ್ಸ್ ಕನ್ನಡ
newsics.com
ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರ ತವರು ಜಿಲ್ಲೆ ಬೆಳಗಾವಿಯಲ್ಲಿ ಅವರದೇ ಇಲಾಖೆಯ ಅಧಿಕಾರಿಯೊಬ್ಬರು ಮಹಿಳಾ ವಸತಿ ನಿಲಯದ ವಾರ್ಡನ್ ಮೇಲೆ ಲೈಂಗಿಕ ಕಿರುಕುಳ, ಮಾನಸಿಕ ಹಿಂಸೆ ಮತ್ತು ಜನಾಂಗೀಯ ನಿಂದನೆ ಮಾಡಿರುವ ಆರೋಪ ಕೇಳಿಬಂದಿದೆ.
ಈ ಸಂಬಂಧ ಮಹಿಳೆಯೊಬ್ಬರು ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ದೂರು ಸಲ್ಲಿಸಿದ್ದಾರೆ. ಮಹಾವೀರ ನಗರ ನಿವಾಸಿ ಉಮಾದೇವಿ ನಾಗರಾಜ ಮಲಾಜೂರೆ (30) ಅವರು ನೀಡಿರುವ ಪಿರ್ಯಾದಿಯಲ್ಲಿ, ಅವರು 2024ರ ಆಗಸ್ಟ್ 13ರಂದು ಹೊರಗುತ್ತಿಗೆ ಆಧಾರದ ಮೇಲೆ ಮಹಿಳಾ ವಸತಿ ನಿಲಯದಲ್ಲಿ ವಾರ್ಡನ್ ಆಗಿ ಸೇವೆಗೆ ಸೇರಿದ್ದಾಗಿ ತಿಳಿಸಿದ್ದಾರೆ. ಸೇವೆ ಸಲ್ಲಿಸುತ್ತಿದ್ದ ಅವಧಿಯಲ್ಲಿ ಇಲಾಖೆಯ ಸಹಾಯಕ ನಿರ್ದೇಶಕ ಮತ್ತು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಅವರು ತಮಗೆ ಮೇಲಿಂದ ಮೇಲೆ ಮಾನಸಿಕ ಕಿರುಕುಳ ನೀಡುತ್ತಿದ್ದರು ಎಂದು ಆರೋಪಿಸಿದ್ದಾರೆ.
ದೂರಿನ ವಿವರಗಳ ಪ್ರಕಾರ, ಆರೋಪಿತ ಅಧಿಕಾರಿ ವಸತಿ ನಿಲಯದ ಆದಾಯದಿಂದ ಪ್ರತಿ ತಿಂಗಳು ₹10,000 ನೀಡುವಂತೆ ಒತ್ತಾಯ ಮಾಡುತ್ತಿದ್ದರು. ಹಣ ನೀಡದಿದ್ದರೆ ಕಚೇರಿಯಲ್ಲಿ ಹೆಚ್ಚು ಹೊತ್ತು ಉಳಿಯುವಂತೆ ಮಾಡುತ್ತಿದ್ದರು. ಖಾಸಗಿ ವಾಹನದಲ್ಲಿ ಗೋವಾಕ್ಕೆ ಬರುವಂತೆ ಒತ್ತಾಯಿಸುವುದು, ರಾತ್ರಿ ವೇಳೆ ಮದ್ಯಪಾನ ಸ್ಥಿತಿಯಲ್ಲಿ ಕರೆ ಮಾಡುವುದು ಸೇರಿದಂತೆ ಅನೇಕ ರೀತಿಯಲ್ಲಿ ಕಿರುಕುಳ ನೀಡಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಇದೇ ವೇಳೆ ಆರೋಪಿತ ಅಧಿಕಾರಿ ತನ್ನ ಗಂಡನ ಬಗ್ಗೆ ತಪ್ಪು ಮಾಹಿತಿ ನೀಡಿ ಕುಟುಂಬದಲ್ಲಿ ಭಿನ್ನಾಭಿಪ್ರಾಯ ಉಂಟುಮಾಡಲು ಯತ್ನಿಸಿದರು. ಜೊತೆಗೆ ಜನಾಂಗೀಯವಾಗಿ ಅವಹೇಳನಕಾರಿ ಮಾತುಗಳನ್ನಾಡಿದ್ದಾರೆ ಎಂದೂ ಆರೋಪಿಸಲಾಗಿದೆ. ನಿರಂತರ ಕಿರುಕುಳದಿಂದ ಭಯಗೊಂಡು ತಾನು ಕೆಲಸಕ್ಕೆ ಹಾಜರಾಗುವುದನ್ನು ನಿಲ್ಲಿಸಿದ್ದಾಗಿ ಉಮಾದೇವಿ ತಿಳಿಸಿದ್ದಾರೆ.
ತಮಗಾದ ಅನ್ಯಾಯದ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿರುವ ಅವರು, ಸಂಬಂಧಿಸಿದ ಅಧಿಕಾರಿಯ ವಿರುದ್ಧ ಲೈಂಗಿಕ ಕಿರುಕುಳ, ಮಾನಸಿಕ ಹಿಂಸೆ ಹಾಗೂ ಜನಾಂಗೀಯ ನಿಂದನೆ ಆರೋಪದಡಿ ಪ್ರಕರಣ ದಾಖಲಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ಮನವಿ ಮಾಡಿದ್ದಾರೆ.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರ ತವರು ಜಿಲ್ಲೆಯಲ್ಲೇ ಅವರ ಇಲಾಖೆಯಲ್ಲಿ ನಡೆದಿರುವ ಈ ಘಟನೆ ಸೂಕ್ತ ತನಿಖೆ ನಡೆದು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ದಾರಿ ಮಾಡಿಕೊಡಬೇಕೆಂಬ ಒತ್ತಾಯ ಕೇಳಿಬಂದಿದೆ.