ಬೆಂಗಳೂರು: ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಮತದಾನ ಮುಕ್ತಾಯಗೊಂಡ ಬೆನ್ನಲ್ಲೇ ಕಾಂಗ್ರೆಸ್ ಪಕ್ಷದಲ್ಲಿ ಅಲ್ಪಸಂಖ್ಯಾತರ ಅಸಮಾಧಾನ ಸ್ಫೋಟಗೊಂಡಿದ್ದು, ರಾಜೀನಾಮೆ ಪರ್ವ ಶುರುವಾಗಿದೆ.
ದಾವಣಗೆರೆ ದಕ್ಷಿಣ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರವಾಗಿ ಕೆಲವು ಅಲ್ಪಸಂಖ್ಯಾತ ನಾಯಕರುಗಳು ಸರಿಯಾಗಿ ಕೆಲಸ ಮಾಡಲಿಲ್ಲ. ಹೀಗಾಗಿ ಕಾಂಗ್ರೆಸ್ ಪಕ್ಷಕ್ಕೆ ಏನಾದರೂ ಹಿನ್ನಡೆಯಾದರೆ, ನಮ್ಮ ಪಕ್ಷದೊಳಗಿನ ಕೆಲವು ಅಲ್ಪಸಂಖ್ಯಾತ ನಾಯಕರುಗಳೇ ಕಾರಣ ಎಂದು ಶುಕ್ರವಾರವಷ್ಟೇ ಸ್ವಪಕ್ಷಿಯ ಶಾಸಕರುಗಳೇ ಆರೋಪಿಸಿದ್ದರು. ಇದರ ಬೆನ್ನಲ್ಲೇ, ಉಪ ಚುನಾವಣೆಯಲ್ಲಿ ಕೆಲವು ಅಲ್ಪಸಂಖ್ಯಾತ ನಾಯಕರುಗಳ ‘ಭಾಗವಹಿಸುವಿಕೆ, ಹಾಗೂ ಪ್ರಚಾರದ ಕಾರ್ಯವೈಖರಿ ಕುರಿತು ಎಐಸಿಸಿಗೆ ವರದಿ ನೀಡಲಾಗಿತ್ತು. ಇದರ ಬೆನ್ನಲ್ಲೇ, ರಾಜೀನಾಮೆ ಪರ್ವ ಆರಂಭವಗಿದೆ.
ನಸೀರ್ ಅಹ್ಮದ್ಗೂ ರಾಜೀನಾಮೆ ಸೂಚನೆ:
ಉಪ ಚುನಾವಣೆಗೆ ಟಿಕೆಟ್ ಆಕಾಂಕ್ಷಿಯಾಗಿದ್ದ ವಿಧಾನ ಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಅಧಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇನ್ನೊಂದೆಡೆ ಸಿಎಂ ರಾಜಕೀಯ ಕಾರ್ಯದರ್ಶಿಯಾಗಿರುವ ನಸೀರ್ ಅಹ್ಮದ್ ಅವರಿಗೂ ರಾಜೀನಾಮೆ ನೀಡುವಂತೆ ಹೈಕಮಾಂಡ್ ಸೂಚಿಸಿದೆ ಎನ್ನಲಾಗಿದೆ.
ಈ ಕುರಿತು ಕೆಪಿಸಿಸಿ ಅಧಕ್ಷರಿಗೆ ಪತ್ರ ಬರೆದಿರುವ ಅಬ್ದುಲ್ ಜಬ್ಬಾರ್, ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಟಿಕೆಟ್ ಅಲ್ಪಸಂಖ್ಯಾತರಿಗೆ ಸಿಗಬೇಕೆಂದು ಪ್ರಯತ್ನಿಸಿದರೂ, ಕಾರಣಾಂತರಗಳಿಂದ ಟಿಕೆಟ್ ಕೈತಪ್ಪಿತ್ತು. ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾಗಿ ಸೇವೆ ಸಲ್ಲಿಸುವುದು ತಮಗೆ ದೊರೆತ ಗೌರವ ಎಂದು ಕೆಪಿಸಿಸಿ ಅ‘್ಯಕ್ಷ ಡಿ.ಕೆ.ಶಿವಕುಮಾರ್ಗೆ ಬರೆದಿರುವ ಪತ್ರದಲ್ಲಿ ತಿಳಿಸಿದ್ದಾರೆ.
ಈ ಕುರಿತು ಮಾಧಮಗಳಿಗೆ ಪ್ರತಿಕ್ರಿಯಿಸಿರುವ ಕೆ.ಅಬ್ದುಲ್ ಜಬ್ಬಾರ್, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಮ್ ಅಹಮದ್, ಶಾಸಕ ರಿಜ್ವಾನ್ ಅರ್ಷದ್ ಅವರುಗಳೇ ಮೊದಲು ನನಗೆ ಚುನಾವಣೆಗೆ ನಿಲ್ಲುವಂತೆ ಹೇಳಿದ್ದರು. ಈಗ ಅವರೇ ಉಲ್ಟಾ ಹೊಡೆದಿದ್ದಾರೆ. ಹೆಗಲೂ ನಮ್ಮದೇ, ಗುಂಡು ನಮ್ಮದೇ ಎಂಬಂತಾಗಿದೆ. ಕಾಂಗ್ರೆಸ್ ಕಚೇರಿಯಲ್ಲಿ ಪಕ್ಷದ ಮುಖಂಡರ ವಿರುದ್ಧವೇ ಸುದ್ದಿಗೋಷ್ಠಿ ಮಾಡಬಾರದಿತ್ತು. ಈ ವಿಚಾರದಲ್ಲಿ ನನಗೆ ದುಃಖವಾಗಿದೆ ಎಂದು ಅಸಮಾಧನ ವ್ಯಕ್ತಪಡಿಸಿದರು.
ಹೈಕಮಾಂಡ್ಗೆ ವರದಿ ಬೆನ್ನಲ್ಲೇ ರಾಜೀನಾಮೆ ಪರ್ವ
ದಾವಣಗೆರೆ ಉಪಚುನಾವಣೆಯಲ್ಲಿ ನಡೆದ ಆಂತರಿಕ ಚಟುವಟಿಕೆಗಳ ಬಗ್ಗೆ ಎಐಸಿಸಿ ಉಸ್ತುವಾರಿ ಕಾರ್ಯದರ್ಶಿ ಅಭಿಷೇಕ್ ದತ್ ಹೈಕಮಾಂಡ್ಗೆ ವರದಿ ಸಲ್ಲಿಸಿದ್ದರು. ಈ ವರದಿಯಲ್ಲಿ ಅಲ್ಪಸಂಖ್ಯಾತ ನಾಯಕರ ನಡವಳಿಕೆಯ ಬಗ್ಗೆ ಅಸಮಾಧನ ವ್ಯಕ್ತಪಡಿಸಲಾಗಿತ್ತು ಎನ್ನಲಾಗಿದೆ.
ರಾಜೀನಾಮೆ ಪತ್ರದಲ್ಲಿ ಜಮೀರ್ ಹೆಸರು
ಅಬ್ದುಲ್ ಜಬ್ಬಾರ್ ತಮ್ಮ ರಾಜೀನಾಮೆ ಪತ್ರದಲ್ಲಿ ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಸಚಿವ ಜಮೀರ್ ಅಹ್ಮದ್ ಖಾನ್ ಅವರನ್ನು ದಾವಣಗೆರೆ ಉಪಚುನಾವಣೆ ಪ್ರಚಾರಕ್ಕೆ ಬರಬೇಡಿ ಎಂದು ಬಹಿರಂಗವಾಗಿ ಹೇಳುವ ಮೂಲಕ ಅಗೌರವ ತೋರಲಾಗಿದೆ. ಇದು ರಾಜ್ಯಾದ್ಯಂತ ಇರುವ ಅಲ್ಪಸಂಖ್ಯಾತ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಮುಸ್ಲಿಂ ಸಮುದಾಯದ ಮನಸ್ಸಿಗೆ ನೋವುಂಟು ಮಾಡಿದೆ ಎಮದು ಪತ್ರದಲ್ಲಿ ಹೇಳಿದ್ದಾರೆ.
ಸಿಎಂ ರಾಜಕೀಯ ಕಾರ್ಯದರ್ಶಿಯಿಂದಲೂ ರಾಜೀನಾಮೆ?:
ಅಬ್ದುಲ್ ಜಬ್ಬಾರ್ ರಾಜೀನಾಮೆ ಬೆನ್ನಲ್ಲೇ, ಹೈಕಮಾಂಡ್ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನರ್ಜೀ ಅಹ್ಮದ್ ಖಾನ್ ಅವರಿಗೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಸೂಚನೆ ನೀಡಿದೆ ಎನ್ನಲಾಗಿದೆ. ಹೈಕಮಾಂಡ್ ಸೂಚನೆ ಮೇರೆಗೆ ಶೀಘ್ರದಲ್ಲೇ ನಜೀರ್ ಅಹ್ಮದ್ ಅವರು ಸಿಎಂ ಸಿದ್ದರಾಮಯ್ಯಗೆ ರಾಜೀನಾಮೆ ಸಲ್ಲಿಸಲಿದ್ದಾರೆ ಎಂದು ತಿಳಿದುಬಂದಿದೆ.
ಅಲ್ಪಸಂಖ್ಯಾತ ಘಟಕದ ಪ್ರಮುಖ ನಾಯಕರ ರಾಜೀನಾಮೆ ಪರ್ವ ಈಗ ಸಚಿವ ಜಮೀರ್ ಅಹ್ಮದ್ ಖಾನ್ ಅವರತ್ತ ತಿರುಗಿದೆ. ದಾವಣಗೆರೆ ಉಪಚುನಾವಣೆಯ ಗೊಂದಲಗಳಿಗೆ ತಲೆದಂಡವಾಗಿ ಜಮೀರ್ ಅವರ ಸಚಿವ ಸ್ಥಾನಕ್ಕೂ ಕುತ್ತು ಬರಲಿದೆಯೇ? ಅಥವಾ ಹೈಕಮಾಂಡ್ ಅವರನ್ನು ರಕ್ಷಿಸಲಿದೆಯೇ ಎಂಬ ಪ್ರಶ್ನೆ ಈಗ ರಾಜಕೀಯ ವಲಯದಲ್ಲಿ ಚರ್ಚೆಯಾಗುತ್ತಿದೆ.