newsics.com/ನ್ಯೂಸಿಕ್ಸ್
ಕುಶಾಲನಗರ: ಕಾವೇರಿ ನದಿ ನೀರು ಹಂಚಿಕೆ ಅವೈಜ್ಞಾನಿಕವಾಗಿದ್ದು, ನದಿ ನೀರಿನ ವಾಸ್ತವ ಅಂಶವನ್ನು ಸಂಗ್ರಹಿಸಿ ಸುಪ್ರೀಂ ಕೋರ್ಟಿಗೆ ರಿಟ್ ಅರ್ಜಿ ಸಲ್ಲಿಸಲು ತಯಾರಿ ನಡೆಸಲಾಗಿದೆ ಎಂದು ಕಾವೇರಿ ನದಿ ರಕ್ಷಣಾ ಸಮಿತಿ ಅಧ್ಯಕ್ಷ ಎಚ್.ಕೆ ರಾಮು ತಿಳಿಸಿದ್ದಾರೆ.
ಕುಶಾಲನಗರದ ಪ್ರವಾಸಿ ಮಂದಿರದ ಆವರಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊಡಗು ಜಿಲ್ಲೆಗೆ ಸಮಿತಿಯ ನೇತೃತ್ವದಲ್ಲಿ ಎರಡು ದಿನಗಳಿಂದ ತಜ್ಞರ ಸಮಿತಿ ಭೇಟಿ ನೀಡಿ ಸಮಗ್ರ ಮಾಹಿತಿ ಕಲೆಹಾಕಿದೆ. ಅಲ್ಲದೆ ಮೈಸೂರು, ಮಂಡ್ಯ ಭಾಗಗಳ ಸ್ಥಿತಿಗತಿಗಳನ್ನು ಪರಿಶೀಲಿಸಿ ಅಂಕಿ ಅಂಶಗಳೊಂದಿಗೆ ಸದ್ಯದಲ್ಲಿಯೇ ಅರ್ಜಿಯನ್ನು ಕೋರ್ಟಿಗೆ ಸಲ್ಲಿಸಲಾಗುತ್ತಿದೆ ಎಂದು ತಿಳಿಸಿದರು.
ಜಿಲ್ಲೆಗೆ ಭೇಟಿ ನೀಡಿದ ನಿಯೋಗದಲ್ಲಿ ಪಾಲ್ಗೊಂಡಿದ್ದ ಆದಿಚುಂಚನಗಿರಿ ಮೈಸೂರು ಶಾಖಾ ಮಠಾಧೀಶ ಶ್ರೀ ಸೋಮನಾಥೇಶ್ವರ ಸ್ವಾಮೀಜಿ ಮಾತನಾಡಿ, ರಾಜ್ಯದಲ್ಲಿ ಕಾವೇರಿ ನದಿ ಹರಿಯುವ ಸ್ಥಳಗಳಿಗೆ ಭೇಟಿ ನೀಡಿ ಪ್ರಸಕ್ತ ಪರಿಸ್ಥಿತಿಯ ಬಗ್ಗೆ ಅವಲೋಕಿಸಿ ಕಾವೇರಿ ನದಿ ರಕ್ಷಣಾ ಸಮಿತಿ ಸುಪ್ರೀಂಕೋರ್ಟಿಗೆ ಸಮಗ್ರ ಮಾಹಿತಿ ನೀಡಲಿದೆ ಎಂದು ಹೇಳಿದರು.
ತಜ್ಞರ ಸಮಿತಿಯ ಮೂಲಕ ಕಾವೇರಿ ಜಲಾನಯನ ಪ್ರದೇಶಗಳ ರೈತರ ಸ್ಥಿತಿಗತಿ ಮತ್ತು ಅವರ ಸಮಸ್ಯೆಗಳ ಬಗ್ಗೆ ಅವಲೋಕಿಸಿ ರೈತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಂಡು ಹಿಡಿಯುವ ಯತ್ನ ನಡೆಯಲಿದೆ ಎಂದರು.
ಕೊಡಗು ಜಿಲ್ಲೆಗೆ ಭೇಟಿ ನೀಡಿದ ತಂಡ ತಲಕಾವೇರಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿ, ನಂತರ ಜಲಾನಯನ ಪ್ರದೇಶಗಳಲ್ಲಿ ಮತ್ತು ಹಾರಂಗಿ ಅಣೆಕಟ್ಟು ಪ್ರದೇಶಗಳಲ್ಲಿ ವೀಕ್ಷಣೆ ನಡೆಸಿದೆ ಎಂದು ಹೇಳಿದರು.
ತಂಡದಲ್ಲಿ ವಿಶ್ವ ಒಕ್ಕಲಿಗ ಮಹಾ ಸಂಸ್ಥಾನದ ಪೀಠಾಧ್ಯಕ್ಷ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಮಾತನಾಡಿ, ಆದಿಚುಂಚನಗಿರಿ ಮಠಾಧೀಶರಾದ ನಿರ್ಮಲಾನಂದ ಸ್ವಾಮೀಜಿ ಅವರ ಮಾರ್ಗದರ್ಶನದಲ್ಲಿ ಸಮಿತಿ ಹಿರಿಯ ನಿವೃತ್ತ ಅಧಿಕಾರಿಗಳು ತಜ್ಞರು ಹಾಗೂ ಸಂಘ ಸಂಸ್ಥೆಗಳ ಪ್ರಮುಖರು ಕಾವೇರಿ ನದಿ ಜಲಾನಯನ ಪ್ರದೇಶಗಳಲ್ಲಿ ಪ್ರವಾಸ ಮಾಡಿ ವರದಿಯನ್ನು ಕರ್ನಾಟಕ ಸರ್ಕಾರಕ್ಕೆ ಸಲ್ಲಿಸುತ್ತದೆ. ನಂತರ ಸುಪ್ರೀಂಕೋರ್ಟಿಗೆ ರಿಟ್ ಅರ್ಜಿ ಸಲ್ಲಿಸುತ್ತದೆ ಎಂದು ಮಾಹಿತಿ ನೀಡಿದರು.
ಮೇಕೆದಾಟು ಯೋಜನೆ ಕೂಡಲೇ ಜಾರಿಗೆ ಬರಬೇಕು. ತಮಿಳುನಾಡು ಸರ್ಕಾರ ಸೇರಿದಂತೆ ಕೇಂದ್ರ ಸರ್ಕಾರ ಯೋಜನೆಗೆ ಒಪ್ಪಿಗೆ ನೀಡಬೇಕು. ಕಾವೇರಿ ವ್ಯಾಜ್ಯದಲ್ಲಿ ಹಳೆಯ ತೀರ್ಮಾನಗಳನ್ನು ಒಪ್ಪಲು ಸಾಧ್ಯವಿಲ್ಲ. ಇದರಿಂದ ರಾಜ್ಯಕ್ಕೆ ರಾಜ್ಯದ ರೈತರಿಗೆ ನೀರಿನ ಕಂಟಕ ಉಂಟಾಗಿದೆ ಎಂದರು.
ಪ್ರತಿಭಟನೆಯಿಂದ, ಭಾಷಣದಿಂದ ಅಥವಾ ಟೀಕೆಗಳಿಂದ ಕಾವೇರಿ ವ್ಯಾಜ್ಯಕ್ಕೆ ಪರಿಹಾರ ಸಾಧ್ಯವಿಲ್ಲ ಎಂದ ಸ್ವಾಮೀಜಿ, ನಮ್ಮ ಸಮಸ್ಯೆಯ ಬಗ್ಗೆ ರಿಟ್ ಸಲ್ಲಿಸುವ ಮೂಲಕ ಸಮಸ್ಯೆಗೆ ಪರಿಹಾರ ಸಾಧ್ಯ ಎಂದರು.
ಆಸ್ಪತ್ರೆಯ ಲಿಫ್ಟ್ ನಲ್ಲಿ ಸಿಲುಕಿದ ಮಹಿಳಾ ಉದ್ಯೋಗಿಯ ತಲೆ : ವೈರಲ್ ವಿಡಿಯೋ ನೋಡಿ
ಬೇಸಿಗೆಯಲ್ಲಿ ಮಣ್ಣಿನ ಮಡಕೆ ನೀರು ಕುಡಿಯುತ್ತಿರಾ?; ಹಾಗಾದ್ರೆ ಈ ವಿಷಯ ಬಗ್ಗೆ ತಿಳಿದಿರಲಿ