newsics.com/ನ್ಯೂಸಿಕ್ಸ್
ನವದೆಹಲಿ: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಕ್ರೈಮ್ಯಾಕ್ಸ್ ಹಂತಕ್ಕೆ ತಲುಪಿದ್ದು, ಕಾಂಗ್ರೆಸ್ ಹೈಕಮಾಂಡ್ ಅಂಗಳದಲ್ಲಿ ಮುಖ್ಯಮಂತ್ರಿ ಕುರ್ಚಿಯ ‘ಫೈನಲ್ ಫೈಟ್’ ಆರಂಭವಾಗಿದೆ.
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ರಾಜ್ಯದಲ್ಲಿ ನಾಯಕತ್ವ ಬದಲಾವಣೆಗೆ ಸಂಬಂಧಿಸಿದಂತೆ ಮಂಗಳವಾರ ಮ್ಯಾರಥಾನ್ ಸಭೆಗಳನ್ನು ನಡೆಸಿದ್ದಾರೆ.
ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ರನ್ನು ದೆಹಲಿಗೆ ಕರೆಸಿ, ಪ್ರತ್ಯೇಕವಾಗಿ ಮಾತುಕತೆ ನಡೆಸಲಾಯ್ತು.
ಈ ವೇಳೆ ಸಿಎಂ ಸಿದ್ದರಾಮಯ್ಯಗೆ ರಾಜ್ಯಸಭೆ ಸ್ಥಾನಮಾನ ನೀಡುವ ಆಫರ್ ಮುಂದಿಟ್ಟಿದೆ ಎನ್ನಲಾಗಿದೆ. ಈ ಮೂಲಕ ಸಿಎಂ (CM) ಸ್ಥಾನದಿಂದ ಕೆಳಕ್ಕಿಳಿಯುವಂತೆ ಪರೋಕ್ಷವಾಗಿ ಸೂಚಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಸಿಎಂ ಸ್ಥಾನದಿಂದ ಸಿದ್ದರಾಮಯ್ಯ ಅವರನ್ನು ಕೆಳಕ್ಕಿಳಿಸಲು ಕಾಂಗ್ರೆಸ್ ಹೈಕಮಾಂಡ್ ಚಿಂತನೆ ನಡೆಸಿದ್ಯಾ ಎಂಬ ಪ್ರಶ್ನೆ ಇದೀಗ ಮೂಡಿದೆ. ಇಂದು ನಡೆದ ಹೈವೋಲ್ಟೇಜ್ ಮೀಟಿಂಗ್ನಲ್ಲಿ ಸಿದ್ದರಾಮಯ್ಯ ಮುಂದೆ ಪರೋಕ್ಷವಾಗಿ ಹೈಕಮಾಂಡ್ ಸೂಚನೆ ನೀಡಿದೆ ಎನ್ನಲಾಗಿದೆ. ನಿಮಗೆ ರಾಜ್ಯಸಭೆಯಲ್ಲಿ ಸ್ಥಾನ ನೀಡುತ್ತೀವಿ ಎಂಬ ಆಫರ್ ಸಿದ್ದರಾಮಯ್ಯ ಮುಂದಿಟ್ಟಿದ್ದಾರೆ.
ಇನ್ನು ಸಿದ್ದರಾಮಯ್ಯ ಪುತ್ರ, ಹಾಲಿ ವಿಧಾನ ಪರಿಷತ್ ಸದಸ್ಯ ಡಾ. ಯತೀಂದ್ರ ಸಿದ್ದರಾಮಯ್ಯರನ್ನು ಉಪ ಮುಖ್ಯಮಂತ್ರಿ ಸ್ಥಾನ ನೀಡುವುದಾಗಿ ಹೈಕಮಾಂಡ್ ಭರವಸೆ ನೀಡಿದ್ಯಂತೆ.
ಸಿಎಂ ಸ್ಥಾನದಿಂದ ಕೆಳಕ್ಕಿಳಿದು, ರಾಜ್ಯಸಭೆಗೆ ಹೋಗೋದಕ್ಕೆ ಸಿದ್ದರಾಮಯ್ಯ ಒಪ್ಪಿಲ್ಲ ಎನ್ನಲಾಗಿದೆ. ರಾಷ್ಟ್ರ ರಾಜಕೀಯಕ್ಕೆ ಹೋಗಲು ಈ ಹಿಂದೆಯೂ ಸಿದ್ದರಾಮಯ್ಯ ಮನಸ್ಸು ಮಾಡಿರಲಿಲ್ಲ. ಈಗಲೂ ಕೂಡ ಸಿದ್ದರಾಮಯ್ಯ ತಾವು ರಾಜ್ಯಸಭೆಗೆ ಹೋಗೋದಕ್ಕೆ ಸುಲಭವಾಗಿ ಒಪ್ಪಿಲ್ಲ ಎನ್ನಲಾಗಿದೆ.