newsics.com/ನ್ಯೂಸಿಕ್ಸ್
ಬೆಂಗಳೂರು : ರಾಜ್ಯ ರಾಜಕೀಯದಲ್ಲಿ ಭಾರಿ ಸಂಚಲನ ಮೂಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆ ಮತ್ತು ನಾಯಕತ್ವ ಬದಲಾವಣೆ ಬೆನ್ನಲ್ಲೇ, ಕರ್ನಾಟಕ ಸರ್ಕಾರದ ಇಡೀ ಸಚಿವ ಸಂಪುಟವೇ ಪುನಾರಚನೆಯಾಗುವ ಮುನ್ಸೂಚನೆಗಳು ಲಭ್ಯವಾಗಿವೆ. ಮುಖ್ಯಮಂತ್ರಿಗಳು ಬದಲಾದರೆ ಇಡೀ ಸಂಪುಟವೂ ಕರಗಿ ಹೋಗಲಿದ್ದು, ನೂತನ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಸಂಪೂರ್ಣ ಹೊಸ ತಂಡ ಅಸ್ತಿತ್ವಕ್ಕೆ ಬರಲಿದೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.
ಹಾಲಿ ಸಚಿವ ಸಂಪುಟದಲ್ಲಿರುವ ಎಲ್ಲಾ 32 ಸಚಿವ ಸ್ಥಾನಗಳೂ ಈ ಬದಲಾವಣೆಯ ಪ್ರಕ್ರಿಯೆಗೆ ಒಳಪಡಲಿವೆ. ಹಾಲಿ ಸಚಿವರ ಪೈಕಿ ಹಲವರನ್ನು ಕೈಬಿಟ್ಟು, ಅವರ ಜಾಗದಲ್ಲಿ ಹೊಸ ಮುಖಗಳಿಗೆ ಆದ್ಯತೆ ನೀಡಲು ಹೈಕಮಾಂಡ್ ಗಂಭೀರ ಚಿಂತನೆ ನಡೆಸಿದೆ ಎನ್ನಲಾಗಿದೆ. ಆಡಳಿತಕ್ಕೆ ಹೊಸ ಚೈತನ್ಯ ನೀಡುವ ಉದ್ದೇಶದಿಂದ ಹಾಗೂ ಮುಂಬರುವ ಚುನಾವಣೆಗಳನ್ನು ದೃಷ್ಟಿಯಲ್ಲಿಟ್ಟುಕೊಂಡು ಈ ಬಾರಿ ಸಂಪೂರ್ಣ ಸರ್ಜರಿಗೆ ಕಾಂಗ್ರೆಸ್ ನಾಯಕತ್ವ ಮುಂದಾಗಿದೆ.
ಸಿದ್ದರಾಮಯ್ಯ ರಾಜಕೀಯ ಹಿರಿತನ ಹಾಗೂ ಗೌರವಕ್ಕೆ ಯಾವುದೇ ಧಕ್ಕೆ ಬಾರದಂತೆ ನೋಡಿಕೊಳ್ಳಲು ಹೈಕಮಾಂಡ್ ಹಲವು ಪ್ರಮುಖ ಭರವಸೆಗಳನ್ನು ನೀಡಿದೆ ಎಂಬ ಮಾಹಿತಿ ಲಭ್ಯವಾಗಿದೆ. ಹೊಸದಾಗಿ ಸೃಷ್ಟಿಸಲು ಉದ್ದೇಶಿಸಿರುವ 4 ಡಿಸಿಎಂ ಹುದ್ದೆಗಳಲ್ಲಿ, ಒಬಿಸಿ (OBC) ಕೋಟಾದ ಅಡಿಯಲ್ಲಿ ಸಿದ್ದರಾಮಯ್ಯ ಅವರ ಪುತ್ರ ಡಾ. ಯತೀಂದ್ರ ಸಿದ್ದರಾಮಯ್ಯ ಅವರಿಗೆ ಸ್ಥಾನ ನೀಡಲು ಗಂಭೀರ ಚಿಂತನೆ ನಡೆದಿದೆ.
ಪ್ರಸ್ತುತ ಪಕ್ಷದಲ್ಲಿ ಕಾರ್ಯಾಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿರುವ ಕೆಲ ಪ್ರಮುಖ ನಾಯಕರಿಗೆ ಮುಂಬರುವ ನೂತನ ಸಚಿವ ಸಂಪುಟದಲ್ಲಿ ಸಚಿವ ಸ್ಥಾನ ನೀಡುವ ಮೂಲಕ ಬಡ್ತಿ ನೀಡಲು ಹೈಕಮಾಂಡ್ ಉತ್ಸುಕವಾಗಿದೆ. ಇದರೊಂದಿಗೆ, ಈಗಾಗಲೇ ಅವಧಿ ಮುಗಿದಿರುವ ವಿವಿಧ ನಿಗಮ-ಮಂಡಳಿಗಳ ಅಧ್ಯಕ್ಷ ಸ್ಥಾನಗಳನ್ನೂ ಸಹ ಬದಲಾಯಿಸಲಾಗುತ್ತಿದ್ದು, ಮೊದಲ ಬಾರಿಗೆ ಅಥವಾ ಹೊಸದಾಗಿ ಆಯ್ಕೆಯಾಗಿರುವ ಶಾಸಕರಿಗೆ ಈ ನಿಗಮ-ಮಂಡಳಿಗಳಲ್ಲಿ ಅವಕಾಶ ಕಲ್ಪಿಸಿಕೊಡಲು ಸಿದ್ಧತೆ ನಡೆದಿದೆ.
ಇನ್ನುಳಿದಂತೆ ದಲಿತ ಕೋಟಾದಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಅಥವಾ ಡಾ. ಜಿ. ಪರಮೇಶ್ವರ್, ಮುಸ್ಲಿಂ ಕೋಟಾದಲ್ಲಿ ಸಚಿವ ಜಮೀರ್ ಅಹ್ಮದ್ ಖಾನ್ ಅಥವಾ ಸ್ಪೀಕರ್ ಯು.ಟಿ. ಖಾದರ್, ಲಿಂಗಾಯತ ಕೋಟಾದಡಿ ಸಚಿವರಾದ ಈಶ್ವರ ಖಂಡ್ರೆ ಅಥವಾ ಎಂ.ಬಿ. ಪಾಟೀಲ್ ಹಾಗೂ ಅಲ್ಪಸಂಖ್ಯಾತ ಕೋಟಾದಲ್ಲಿ ಕೆ.ಜೆ. ಜಾರ್ಜ್ ಅವರ ಹೆಸರುಗಳು ರೇಸ್ನಲ್ಲಿವೆ ಎಂದು ಹೇಳಲಾಗುತ್ತಿದೆ.
ಮುಂದಿನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಅಧಿಕಾರ ವಹಿಸಿಕೊಳ್ಳುವುದು ಬಹುತೇಕ ನಿಶ್ಚಿತವಾಗಿರುವುದರಿಂದ, ಅವರು ಸದ್ಯ ಹೊಂದಿರುವ ಕೆಪಿಸಿಸಿ (KPCC) ಅಧ್ಯಕ್ಷ ಸ್ಥಾನಕ್ಕೆ ಹೊಸಬರನ್ನು ನೇಮಿಸಬೇಕಾಗುತ್ತದೆ. ಮೊದಲಿನಿಂದಲೂ ಈ ಹುದ್ದೆಯ ಮೇಲೆ ಕಣ್ಣಿಟ್ಟಿರುವ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಸಚಿವ ಸ್ಥಾನದ ಜೊತೆಗೆ ಕೆಪಿಸಿಸಿ ಅಧ್ಯಕ್ಷ ಪಟ್ಟವೂ ಸಿಗುವ ದಟ್ಟ ಸಾಧ್ಯತೆಗಳಿವೆ. ಈ ನಡುವೆ ಶಾಸಕ ವಿಶ್ವಾಸ್ ವಸಂತ್ ವೈದ್ಯ ಅವರು ಸತೀಶ್ ಜಾರಕಿಹೊಳಿ ಪರ ಬ್ಯಾಟಿಂಗ್ ಮಾಡಿದ್ದು, ಅವರಿಗೆ ಅಧ್ಯಕ್ಷ ಸ್ಥಾನ ನೀಡಿದರೆ ಪಕ್ಷ ಸಂಘಟನೆಗೆ ಮತ್ತಷ್ಟು ಅನುಕೂಲವಾಗಲಿದೆ ಎಂದಿದ್ದಾರೆ.
ಮತ್ತೊಂದೆಡೆ, ಸಚಿವರಾದ ಜಮೀರ್ ಅಹ್ಮದ್ ಮತ್ತು ಸತೀಶ್ ಜಾರಕಿಹೊಳಿ ಈಗಾಗಲೇ ಪ್ರತ್ಯೇಕವಾಗಿ ಸಭೆ ನಡೆಸಿರುವುದು ಕುತೂಹಲ ಮೂಡಿಸಿದೆ. ಒಟ್ಟಾರೆ ಹೊಸ ಸಂಪುಟದಲ್ಲಿ ಹಾಲಿ ಕಾರ್ಯಾಧ್ಯಕ್ಷರಿಗೆ ಹಾಗೂ ಹೊಸ ಶಾಸಕರಿಗೆ ಸಚಿವ ಸ್ಥಾನ ಮತ್ತು ನಿಗಮ ಮಂಡಳಿಗಳಲ್ಲಿ ಹೆಚ್ಚಿನ ಅವಕಾಶ ನೀಡಲು ಹೈಕಮಾಂಡ್ ಮುಂದಾಗಿದ್ದು, ಇಂದಿನ ರಾಜಕೀಯ ಬೆಳವಣಿಗೆಗಳ ಮೇಲೆ ಎಲ್ಲವೂ ನಿರ್ಧಾರವಾಗಲಿದೆ.
Governor Thawar Chand Gehlot ಬೆಂಗಳೂರು ತೊರೆದ ರಾಜ್ಯಪಾಲರು! ಸಿದ್ದರಾಮಯ್ಯ ಇಂದು ರಾಜೀನಾಮೆ ಡೌಟ್