newsics.com/ನ್ಯೂಸಿಕ್ಸ್
ಬೆಂಗಳೂರು: ನೂತನ ಸಚಿವ ಸಂಪುಟಕ್ಕೆ ಮೊದಲ ಹಂತದಲ್ಲಿ ಸೇರ್ಪಡೆ ಆಗುವ ಸಚಿವರ ಹೆಸರು ಅಂತಿಮಗೊಳಿಸಲು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಹಾಗೂ ನಿಯೋಜಿತ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಹಂಗಾಮಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ದೆಹಲಿಗೆ ತೆರಳುವ ಸಾಧ್ಯತೆಯಿದೆ.
ಬುಧವಾರ ನಡೆಯುವ ಪ್ರಮಾಣ ವಚನ ಸಮಾರಂಭದಲ್ಲಿ ಎಷ್ಟು ಮಂದಿ ಸಂಪುಟ ಸೇರಬೇಕು ಎಂಬ ಬಗ್ಗೆ ಚರ್ಚಿಸಲು ಉಭಯ ನಾಯಕರಿಗೂ ದೆಹಲಿಗೆ ಬುಲಾವ್ ಬರಲಿದೆ ಎನ್ನಲಾಗಿದೆ. ವಾಸ್ತವವಾಗಿ ಶಾಸಕಾಂಗ ಪಕ್ಷದ ಸಭೆಗಾಗಿ ನಗರಕ್ಕೆ ಆಗಮಿಸಿದ್ದ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್, ರಾಜ್ಯ ಉಸ್ತುವಾರಿ ರಣದೀಪ್ಸಿಂಗ್ ಸುರ್ಜೇವಾಲಾ ಅವರೊಂದಿಗೆ ರಾಜ್ಯ ನಾಯಕರು ಈ ಬಗ್ಗೆ ಚರ್ಚೆ ನಡೆಸಬೇಕಿತ್ತು. ಆದರೆ, ತುರ್ತು ಕಾರ್ಯ ನಿಮಿತ್ತ ಈ ನಾಯಕರು ತೆರಳಿದ್ದರಿಂದ ಈ ಸಭೆ ಸೋಮವಾರ ದೆಹಲಿಯಲ್ಲಿ ನಡೆಯುವ ಸಾಧ್ಯತೆಯಿದೆ.
ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸುರ್ಜೇವಾಲಾ ಹಾಗೂ ವೇಣುಗೋಪಾಲ್ ಚರ್ಚೆ ನಡೆಸಲಿದ್ದಾರೆ. ನಂತರ ಈ ಸಭೆಯ ತೀರ್ಮಾನವನ್ನು ರಾಹುಲ್ ಗಾಂಧಿ ಅವರಿಗೆ ತಿಳಿಸಿ, ಒಪ್ಪಿಗೆ ಪಡೆಯಲಿದ್ದಾರೆ ಎಂದು ತಿಳಿದುಬಂದಿದೆ.
ಲೋಕ ಭವನದಲ್ಲಿ ಸ್ಥಳಾವಕಾಶದ ಕೊರತೆ ಇರುವುದರಿಂದ ವಿಧಾನಸಭೆ ಹಾಗೂ ವಿಧಾನ ಪರಿಷತ್ ಸದಸ್ಯರು ಹಾಗೂ ಅಧಿಕಾರಿಗಳು ಸೇರಿ 500 ಜನಕ್ಕೆ ಮಾತ್ರ ಅವಕಾಶ ನೀಡಲಾಗಿದೆ. ಇಷ್ಟು ಕಡಿಮೆ ಸಂಖ್ಯೆಯಲ್ಲಿ ಆಮಂತ್ರಿತರಿಗೆ ಅವಕಾಶ ನೀಡಿರುವುದರಿಂದ 9 ಮಂದಿ ಸಚಿವರು ಪ್ರಮಾಣ ವಚನ ಮಾಡಿದರೆ ಅವರ ಬೆಂಬಲಿಗರು ಆಗಮಿಸಿ ಗೊಂದಲ ನಿರ್ಮಾಣವಾಗಬಹುದು ಎಂಬ ಶಂಕೆಯಿದೆ.
ಮೊದಲು ಡಿಕೆಶಿ ಮಾತ್ರ ಪ್ರಮಾಣ ವಚನ ಸ್ವೀಕರಿಸುತ್ತಾರೆಯೇ ಅಥವಾ ಹಲವು ಸಚಿವರು ಸೇರುತ್ತಾರೆಯೇ ಎಂಬ ಗೊಂದಲ ಮೂಡಿದ್ದು, ಹೈಕಮಾಂಡ್ ತೀರ್ಮಾನವೇ ಅಂತಿಮವಾಗಲಿದೆ.