newsics.com/ನ್ಯೂಸಿಕ್ಸ್
ಬೆಂಗಳೂರು: ಮಂಡ್ಯ ಲೋಕಸಭಾ ಕ್ಷೇತ್ರ ತ್ಯಾಗ ಮಾಡಿ ಬಿಜೆಪಿ ಸೇರಿದ್ದ ಸುಮಲತಾ ಅಂಬರೀಷ್ ಅವರು ಪ್ರತಿಫಲದ ನಿರೀಕ್ಷೆಯಲ್ಲಿದ್ದು, ಕರ್ನಾಟಕ ರಾಜ್ಯಸಭಾ ಚುನಾವಣೆ ತೀವ್ರ ಕುತೂಹಲ ಮೂಡಿಸಿದೆ.
ಕರ್ನಾಟಕದಿಂದ ನಾಲ್ಕು ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದ್ದು, ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಗೆ ಕೇವಲ ಒಂದೇ ಸ್ಥಾನ ಮಾತ್ರ ದೊರೆಯಲಿದೆ. ಒಂದು ಸ್ಥಾನಕ್ಕೆ ದೋಸ್ತಿಗಳ ಮಧ್ಯೆ ಕುಸ್ತಿ ಶುರುವಾಗಿದೆ. ಮಾಜಿ ಪ್ರಧಾನಿ ಎಚ್ಡಿ ದೇವೇಗೌಡರನ್ನೆ ಮುಂದುವರೆಸಬೇಕೆಂದು ಜೆಡಿಎಸ್ ಪಟ್ಟು ಹಿಡಿದಿದೆ. ಆದರೂ ಇನ್ನೂ ಖಚಿತತೆ ಸಿಕ್ಕಿಲ್ಲ. ಇನ್ನೊಂದೆಡೆ ಬಿಜೆಪಿ ತನ್ನ ಅಭ್ಯರ್ಥಿಯನ್ನು ಆಯ್ಕೆ ಮಾಡಲು ಕಸರತ್ತು ನಡೆಸಿದೆ.
ಇದೀಗ ಆಡಳಿತಾರೂಢ ಕಾಂಗ್ರೆಸ್ ಪಾಳೆಯದಲ್ಲಿ ಮಹತ್ತರ ಬದಲಾವಣೆಯಾಗಿ ಒಕ್ಕಲಿಗ ಸಮುದಾಯಕ್ಕೆ ಸೇರಿದ ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿ ಗಾದಿ ಏರಲು ಸಜ್ಜಾಗುತ್ತಿದ್ದಂತೆಯೇ ಸುಮಲತಾ ಅಂಬರೀಷ್ ಅವರ ಹೆಸರು ಬಲವಾಗಿ ಕೇಳಿಬಂದಿದ್ದು, ಖುದ್ದು ಬಿಜೆಪಿ ವರಿಷ್ಠರೇ ಆಸಕ್ತಿ ತೋರಿದ್ದಾರೆ ಎಂದು ತಿಳಿದು ಬಂದಿದೆ.
ರಾಜ್ಯ ಬಿಜೆಪಿ ಈಗಾಗಲೇ ಮಾಜಿ ಸಿಎಂ ಡಿವಿ ಸದಾನಂದಗೌಡ ಅವರ ಹೆಸರನ್ನ ರಾಜ್ಯಸಭೆಗೆ ಶಿಫಾರಸು ಮಾಡಿದೆ. ಅತ್ತ ರಾಜ್ಯಸಭೆ ಸೀಟು ಪಡೆಯಲು ಸುಮಲತಾ ಅಂಬರೀಷ್ ಅವರು ಸಹ ಪ್ರಯತ್ನ ಮಾಡುತ್ತಿದ್ದು, ಇದೇ ವೇಳೆ ಸುಮಲತಾಗೆ ಅವರ ಬಗ್ಗೆ ಬಿಜೆಪಿ ಹೈಕಮಾಂಡ್ ವಿವರಣೆ ಕೇಳಿದ್ದಾರೆ ಎಂದು ತಿಳಿದು ಬಂದಿದೆ.
ಬಿಜೆಪಿ ಹೈಕಮಾಂಡ್ ನ ಈ ನಡೆ, ರಾಜ್ಯಸಭೆಗೆ ಸುಮಲತಾ ಅಂಬರೀಷ್ ಅಚ್ಚರಿಯ ಆಯ್ಕೆಯಾಗುತ್ತಾರಾ ಎನ್ನುವುದೇ ಕುತೂಹಲ ಮೂಡಿಸಿದೆ.