newsics.com/ನ್ಯೂಸಿಕ್ಸ್
ನವದೆಹಲಿ: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಮತ್ತು ಐಪಿಎಸ್ ಅಧಿಕಾರಿ ಡಿ. ರೂಪಾ ಮೌದ್ಗಿಲ್ ಅವರ ನಡುವಿನ ಜಗಳಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಶುಕ್ರವಾರ ಮಹತ್ವದ ಸಲಹೆ ನೀಡಿದೆ.
ಇಬ್ಬರೂ ತಮ್ಮ ನಡುವಿನ ವಿವಾದವನ್ನು ಸಂಧಾನದ ಮೂಲಕ ಬಗೆಹರಿಸಿಕೊಳ್ಳುವಂತೆ ಸುಪ್ರೀಂ ಕೋರ್ಟ್ ಸೂಚಿಸಿದೆ. ಡಿ. ರೂಪಾ ತಮ್ಮ ವಿರುದ್ಧ ಮಾಡಿರುವ ಮಾನನಷ್ಟ ಮೊಕದ್ದಮೆ ವಿಚಾರಣೆಯನ್ನು ಎದುರಿಸಬೇಕು ಎಂದು ಕರ್ನಾಟಕ ಹೈಕೋರ್ಟ್ ನೀಡಿದ ಆದೇಶವನ್ನು ಪ್ರಶ್ನಿಸಿ ರೋಹಿಣಿ ಸಿಂಧೂರಿಯವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಶುಕ್ರವಾರ ನ್ಯಾಯಮೂರ್ತಿ ಸತೀಶ್ ಚಂದ್ರಶರ್ಮಾ ಮತ್ತು ನ್ಯಾಯಮೂರ್ತಿ ಸಂಜೀವ್ ಸಚ್ ದೇವ್ ಅವರಿದ್ದ ಪೀಠದಲ್ಲಿ ನಡೆದಿದೆ.
ಈ ಇಬ್ಬರು ಅಧಿಕಾರಿಗಳು ತಮ್ಮ ಕಾನೂನು ಹೋರಾಟದ ಮೂಲಕ ಪರಸ್ಪರರ ವೃತ್ತಿಜೀವನವನ್ನು ತಾವೇ ಹಾಳುಮಾಡಿಕೊಳ್ಳುತ್ತಿದ್ದಾರೆ’ ಎಂದು ನ್ಯಾಯಮೂರ್ತಿ ಶರ್ಮಾ ಮಾರ್ಮಿಕವಾಗಿ ನುಡಿದರು.
ಸುದೀರ್ಘ ಕೋರ್ಟ್ ಕಲಾಪಗಳಿಗಿಂತ ಮಧ್ಯಸ್ಥಿಕೆಯ ಮೂಲಕ ಈ ಸಮಸ್ಯೆಯನ್ನು ಬಗೆಹರಿಸಿಕೊಳ್ಳುವುದು ಸೂಕ್ತ ಎಂಬ ಅಭಿಪ್ರಾಯಕ್ಕೆ ನ್ಯಾಯಾಲಯ ಬಂದಿದೆ.
ಮಧ್ಯಸ್ಥಿಕೆ ಪ್ರಕ್ರಿಯೆ ನಡೆಯುವವರೆಗೆ ಇಬ್ಬರು ಅಧಿಕಾರಿಗಳ ನಡುವೆ ನಡೆಯುತ್ತಿರುವ ಎಲ್ಲಾ ಕ್ರಿಮಿನಲ್ ಮತ್ತು ಸಿವಿಲ್ ಪ್ರಕರಣಗಳ ವಿಚಾರಣೆಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದೆ. ಅಧಿಕಾರಿಗಳು ಈಗ ನ್ಯಾಯಮೂರ್ತಿ ಕುರಿಯನ್ ಜೋಸೆಫ್ ಅವರ ಮುಂದೆ ಹಾಜರಾಗಿ ಮಾತುಕತೆಯ ಮೂಲಕ ವಿವಾದವನ್ನು ಅಂತ್ಯಗೊಳಿಸಲು ಪ್ರಯತ್ನಿಸಬೇಕಿದೆ.