newsics.com / ನ್ಯೂಸಿಕ್ಸ್
ಬೆಂಗಳೂರು: ಗ್ಯಾರಂಟಿ ಯೋಜನೆಗಳನ್ನು ದುರುಪಯೋಗ ಮಾಡಿಕೊಳ್ಳುತ್ತಿರುವವರ ವಿರುದ್ಧ ಮತ್ತು ಅನರ್ಹ ಫಲಾನುಭವಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಎಂದು ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಶುಕ್ರವಾರ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಆದರೆ ಅರ್ಹ ಫಲಾನುಭವಿಗಳು ಯಾವುದೇ ತೊಂದರೆ ಅನುಭವಿಸಬಾರದು ಎಂದು ಸಿಎಂ ಸ್ಪಷ್ಟಪಡಿಸಿದ್ದಾರೆ.
ಗ್ಯಾರಂಟಿಗಳ ದುರ್ಬಳಕೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ಅಧಿಕಾರಿಗಳೊಂದಿಗೆ ವಿಸ್ತೃತ ಸಭೆ ನಡೆಸಿದರು. ಐದು ಚುನಾವಣಾ ಪೂರ್ವ ಗ್ಯಾರಂಟಿಗಳನ್ನು ಪರಿಚಯಿಸಿದ ನಂತರ, ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಈ ವರ್ಷದ ಫೆಬ್ರವರಿವರೆಗೆ ರಾಜ್ಯ ಬಜೆಟ್ ಪ್ರಕಾರ 1,21,598 ಕೋಟಿ ರೂ. ಗಳನ್ನು ಖರ್ಚು ಮಾಡಿದೆ.
ಡಿಕೆ ಶಿವಕುಮಾರ್ ಸಿಎಂ ಆದ ಬಳಿಕ ಗ್ಯಾರಂಟಿ ಯೋಜನೆಗಳಿಗೆ ಸಂಬಂಧಿಸಿದಂತೆ ನಡೆದ ಪರಿಶೀಲನಾ ಸಭೆಯಲ್ಲಿ ಹಲವು ಫಲಾನುಭವಿಗಳು ಬ್ಯಾಂಕ್ ಸಾಲ ಪಡೆದಿರುವುದು ಬೆಳಕಿಗೆ ಬಂದಿದೆ.
ಗೃಹ ಲಕ್ಷ್ಮಿ ನೆರವು ಜಮಾ ಆದ ತಕ್ಷಣ, ಅವರ ಸಾಲದ ಖಾತೆಗಳಿಗೆ ಮೊತ್ತವು ಸ್ವಯಂಚಾಲಿತವಾಗಿ ಸರಿಹೊಂದಿಸುತ್ತದೆ ಎಂದು ಮುಖ್ಯಮಂತ್ರಿ ಕಚೇರಿ ಹೊರಡಿಸಿದ ಹೇಳಿಕೆ ತಿಳಿಸಿದೆ. ಹೀಗಾಗಿ ಕೆಲ ಫಲಾನುಭವಿಗಳು ಬ್ಯಾಂಕ್ ಖಾತೆ ಬದಲಾಯಿಸಿಕೊಂಡಿದ್ದಾರೆ.
ಅಂತಹ ಫಲಾನುಭವಿಗಳಿಗೆ ಯಾವುದೇ ತೊಂದರೆಯಾಗಬಾರದು ಎಂದು ಶಿವಕುಮಾರ್ ಅಧಿಕಾರಿಗಳಿಗೆ ಸೂಚಿಸಿದರು.
ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಲಾಭ ಪಡೆಯುತ್ತಿರುವ ಒಬ್ಬನೇ ಒಬ್ಬ ಅರ್ಹ ಫಲಾನುಭವಿಗೂ ತೊಂದರೆಯಾಗಬಾರದು. ಆದರೆ, ಯೋಜನೆಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿರುವ ಅನರ್ಹರಿಗೆ ಮಾತ್ರ ತಕ್ಷಣವೇ ಬ್ರೇಕ್ ಹಾಕಬೇಕು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಹೀಗಾಗಿ ಕಟ್ಟು ನಿಟ್ಟಿನ ಕ್ರಮಕೈಗೊಳ್ಳಲು ತೀರ್ಮಾನಿಸಲಾಗಿದೆ
ಗೃಹಲಕ್ಷ್ಮೀ ಮತ್ತು ಗೃಹಜ್ಯೋತಿ ಯೋಜನೆಗೆ ಮರು ಪರಿಶೀಲನೆ ಅರ್ಜಿ ಹಾಕಬೇಕು. ಮರು ಪರಿಶೀಲನೆ ಅರ್ಜಿ ಸಲ್ಲಿಕೆ ಬಳಿಕ ಮನೆ ಮನೆಗೆ ತೆರಳಿ ಅಧಿಕಾರಿಗಳಿಂದ ಸರ್ವೆ ಮಾಡಿಸುವ ಚಿಂತನೆ ನಡೆಸಿದ್ದು, ಒಟ್ಟು 10 ಅಂಶಗಳ ಮೂಲಕ ಮಾಹಿತಿ ಪಡೆಯಲು ಸರ್ಕಾರ ಮುಂದಾಗಿದೆ. ಯಜಮಾನಿ ಹೆಸರು, ಪಡಿತರ ಚೀಟಿ ಸಂಖ್ಯೆ, ಮಂಜೂರಾತಿ ಪತ್ರ ಸಂಖ್ಯೆ, ಬ್ಯಾಂಕ್ ಖಾತೆ, ಮನೆ ವಿಳಾಸ, ಮತದಾರರ ಗುರುತಿನ ಚೀಟಿ ಸಂಖ್ಯೆ, ಆಧಾರ್ ಸಂಖ್ಯೆ, ಪತಿಯ ಮಾಹಿತಿ, ಯಾವ ಕ್ಯಾಟಗರಿ, ಮೊಬೈಲ್ ಸಂಖ್ಯೆ ಹೀಗೆ 10 ಅಂಶಗಳ ಮೂಲಕ ಮಾಹಿತಿ ಪಡೆಯಲು ಮುಂದಾಗಿದೆ.
ಗೃಹ ಜ್ಯೋತಿಯನ್ನು ಜಾರಿಗೆ ತಂದಾಗ, ದೊಡ್ಡ ಪ್ರಮಾಣದ ದುರ್ಬಳಕೆಯಾಗದಂತೆ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಲಾಗಿದೆ. ಇತರ ಯೋಜನೆಗಳ ಅನುಷ್ಠಾನದಲ್ಲೂ ಇದೇ ಎಚ್ಚರಿಕೆ ವಹಿಸಿದ್ದರೆ ದುರ್ಬಳಕೆ ಪ್ರಮಾಣ ಕಡಿಮೆಯಾಗುತ್ತಿತ್ತು. ಮರಣ ಹೊಂದಿದ ಫಲಾನುಭವಿಗಳಿಗೂ ಗೃಹ ಲಕ್ಷ್ಮಿ ಪಾವತಿಯನ್ನು ಜಮಾ ಮಾಡಲಾಗುತ್ತಿದೆ. ಆದ್ದರಿಂದ ಇಂತಹ ದುರ್ಬಳಕೆಯನ್ನು ನಿಲ್ಲಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಫಲಾನುಭವಿಗಳ ಖಾತೆಗೆ ಗೃಹ ಲಕ್ಷ್ಮಿ ಹಣ ಜಮಾ ಆದ ಕೂಡಲೇ ಅವರ ಮೊಬೈಲ್ ಫೋನ್ಗೆ ಧ್ವನಿ ಸಂದೇಶದ ಮೂಲಕ ದೃಢೀಕರಣವನ್ನು ಕಳುಹಿಸಬೇಕು ಎಂದು ಸಿಎಂ ಅಧಿಕಾರಿಗಳಿಗೆ ಸೂಚಿಸಿದರು.
ಏರ್ಟೆಲ್ ಬ್ಯಾಂಕ್ ಮೂಲಕ ತೆರೆದಿರುವ ಯುಪಿಐ ಖಾತೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿರುವ ಪ್ರಕರಣಗಳು ಪತ್ತೆಯಾಗಿವೆ ಎಂದು ಅಧಿಕಾರಿಗಳು ಮುಖ್ಯಮಂತ್ರಿಗಳಿಗೆ ಮಾಹಿತಿ ನೀಡಿದರು.
ಯೋಜನೆಗಳಿಗೆ ಲಿಂಕ್ ಮಾಡಲಾದ ಬ್ಯಾಂಕ್ ಖಾತೆಗಳು ಕರ್ನಾಟಕದೊಳಗೆ ಇರಬೇಕು ಎಂದು ನಿರ್ಧರಿಸಲಾಗಿದೆ. ಬೇರೆ ರಾಜ್ಯಗಳ ಖಾತೆಗಳಿಗೆ ಹಣ ವರ್ಗಾವಣೆಯಾಗುತ್ತಿರುವುದು ಕಂಡುಬಂದಿದ್ದು, ಇಂತಹ ವ್ಯವಹಾರಗಳನ್ನು ನಿಲ್ಲಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.