ಪ್ರಯಾಗರಾಜ್ ಕುಂಭಮೇಳದಲ್ಲಿ ರುದ್ರಾಕ್ಷಿ ಮಾಲೆ ಮಾರಾಟ ಮಾಡುತ್ತಿದ್ದ ವೇಳೆ ವೈರಲ್ ಆಗಿ ದೇಶದಾದ್ಯಂತ ಗಮನ ಸೆಳೆದಿದ್ದ ಯುವತಿಗೆ ಕೇರಳ ಹೈಕೋರ್ಟ್ ಮಹತ್ವದ ರಕ್ಷಣೆ ನೀಡಿದೆ. ತನ್ನ ಜೀವಕ್ಕೆ ಅಪಾಯವಿದೆ ಎಂದು ನ್ಯಾಯಾಲಯದ ಮೊರೆ ಹೋದ ಯುವತಿಯ ಮನವಿಯನ್ನು ಪರಿಗಣಿಸಿದ ಹೈಕೋರ್ಟ್, ಪೊಲೀಸ್ ಭದ್ರತೆ ಒದಗಿಸುವಂತೆ ಆದೇಶಿಸಿದೆ.
ಯುವತಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ, “ಅರ್ಜಿದಾರಳ ಜೀವ ರಕ್ಷಣೆಗೆ ಪೊಲೀಸ್ ಭದ್ರತೆ ಅಗತ್ಯವಿದೆ ಎಂಬುದು ಪ್ರಾಥಮಿಕವಾಗಿ ಕಂಡುಬಂದಿದೆ” ಎಂದು ಅಭಿಪ್ರಾಯಪಟ್ಟಿದೆ. ಈ ಹಿನ್ನೆಲೆಯಲ್ಲಿ ಎರ್ನಾಕುಳಂ ಸೆಂಟ್ರಲ್ ಪೊಲೀಸ್ ಠಾಣೆಯ ಅಧಿಕಾರಿಗೆ ಯುವತಿಗೆ ಸಮರ್ಪಕ ರಕ್ಷಣೆ ನೀಡುವಂತೆ ನಿರ್ದೇಶನ ನೀಡಲಾಗಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಹಾಗೂ ಪೊಲೀಸ್ ಅಧಿಕಾರಿಗಳಿಗೆ ನೋಟಿಸ್ ಜಾರಿಗೊಳಿಸಿರುವ ಹೈಕೋರ್ಟ್, ಮುಂದಿನ ವಿಚಾರಣೆಯನ್ನು ಜುಲೈ 10ಕ್ಕೆ ನಿಗದಿಪಡಿಸಿದೆ.
ಇದಕ್ಕೂ ಮುನ್ನ ಇದೇ ಪ್ರಕರಣದಲ್ಲಿ ಯುವತಿಯ ಪತಿ ಮೊಹಮ್ಮದ್ ಫರ್ಮಾನ್ ಅವರಿಗೆ ಕೇರಳ ಹೈಕೋರ್ಟ್ ಒಂದು ತಿಂಗಳ ಟ್ರಾನ್ಸಿಟ್ ಬೇಲ್ ನೀಡಿತ್ತು. ಮಧ್ಯಪ್ರದೇಶದಲ್ಲಿ ದಾಖಲಾಗಿರುವ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಗಡ ಜಾಮೀನು ಕೋರಿ ನ್ಯಾಯಾಲಯವನ್ನು ಸಂಪರ್ಕಿಸಲು ಅವಕಾಶ ಕಲ್ಪಿಸುವ ಉದ್ದೇಶದಿಂದ ಈ ಪರಿಹಾರ ನೀಡಲಾಗಿತ್ತು.
ಯುವತಿಯ ತಂದೆಯ ದೂರಿನ ಮೇರೆಗೆ ಮಧ್ಯಪ್ರದೇಶ ಪೊಲೀಸರು ಫರ್ಮಾನ್ ವಿರುದ್ಧ ಅಪಹರಣ ಸೇರಿದಂತೆ ವಿವಿಧ ಆರೋಪಗಳಡಿ ಪ್ರಕರಣ ದಾಖಲಿಸಿದ್ದಾರೆ. ಘಟನೆ ನಡೆದ ಸಂದರ್ಭದಲ್ಲಿ ಯುವತಿ ಅಪ್ರಾಪ್ತೆಯಾಗಿದ್ದಳು ಎಂದು ಕುಟುಂಬದವರು ಆರೋಪಿಸಿದ್ದಾರೆ. ಪ್ರಕರಣದಲ್ಲಿ ಭಾರತೀಯ ನ್ಯಾಯ ಸಂಹಿತೆ (BNS), ಬಾಲ್ಯ ವಿವಾಹ ನಿಷೇಧ ಕಾಯ್ದೆ ಹಾಗೂ ಎಸ್ಸಿ/ಎಸ್ಟಿ ದೌರ್ಜನ್ಯ ತಡೆ ಕಾಯ್ದೆಯ ಅಡಿಯಲ್ಲಿ ಆರೋಪಗಳನ್ನು ಸೇರಿಸಲಾಗಿದೆ.
ಕುಂಭಮೇಳದ ವೇಳೆ ರುದ್ರಾಕ್ಷಿ ಮಾಲೆ ಮಾರಾಟ ಮಾಡುತ್ತಿದ್ದ ಯುವತಿಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ ಆಕೆ ದೇಶಾದ್ಯಂತ ಜನಪ್ರಿಯಳಾಗಿದ್ದರು. ಬಳಿಕ ಕೇರಳದಲ್ಲಿ ಸಿಪಿಐ(ಎಂ) ನಾಯಕರ ಸಮ್ಮುಖದಲ್ಲಿ ಮೊಹಮ್ಮದ್ ಫರ್ಮಾನ್ ಅವರನ್ನು ವಿವಾಹವಾಗಿದ್ದರು. ಆದರೆ ಈ ಮದುವೆಗೆ ಕುಟುಂಬದವರು ವಿರೋಧ ವ್ಯಕ್ತಪಡಿಸಿದ್ದು, ಯುವತಿ ಅಪ್ರಾಪ್ತ ವಯಸ್ಸಿನವಳು ಎಂದು ಆರೋಪಿಸಿ ಪ್ರಕರಣ ದಾಖಲಿಸಿದ್ದರು.
ಈ ನಡುವೆ ಯುವತಿ ತನ್ನ ಪತಿಯೊಂದಿಗೆ ಬದುಕಲು ಬಯಸಿರುವುದಾಗಿ ತಿಳಿಸಿದ್ದು, ಅವರ ಸುರಕ್ಷತೆಗಾಗಿ ಕೇರಳ ಹೈಕೋರ್ಟ್ ಪೊಲೀಸ್ ರಕ್ಷಣೆಗೆ ಆದೇಶ ನೀಡಿರುವುದು ಪ್ರಕರಣಕ್ಕೆ ಹೊಸ ತಿರುವು ನೀಡಿದೆ.