newsics.com/ನ್ಯೂಸಿಕ್ಸ್
ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರದ ರಾಜಕೀಯ ಬೆಳವಣಿಗೆಗಳಲ್ಲಿ ಡಿ.ಕೆ. ಶಿವಕುಮಾರ್ ಅವರ ಪಾತ್ರ ಮತ್ತು ಅವರ ನಡೆಯ ಬಗ್ಗೆ ಸಾಕಷ್ಟು ಕುತೂಹಲವಿದೆ.
ರಾಜ್ಯದ ರಾಜಕೀಯ ಮಹತ್ವದ ತಿರುವು ಪಡೆದುಕೊಂಡಿದೆ. ಸಿದ್ದರಾಮಯ್ಯ (Siddaramaiah) ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ ಪ್ರಮುಖ ನಾಯಕತ್ವ ಬದಲಾವಣೆಯಾಗಿದೆ. ಮುಂದಿನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ (DK Shivakumar) ಅಧಿಕಾರ ವಹಿಸಿಕೊಳ್ಳುವುದು ಬಹುತೇಕ ಖಚಿತವಾಗಿದೆ.
ಸೋಮವಾರ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕರಿಸಿ ಅಧಿಕಾರ ವಹಿಸಿಕೊಳ್ಳಲಿದ್ದು, ಅದಕ್ಕೂ ಮೊದಲು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಶಾಸಕಾಂಗ ಸಭೆಯನ್ನು ನಿಗದಿಪಡಿಸಿಕೊಳ್ಳಲಾಗಿದೆ. ಆ ನಂತರ ಸೋಮವಾರ ಸಂಜೆ ಡಿಕೆ ಶಿವಕುಮಾರ್ ಅವರು ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ತಿಳಿದು ಬಂದಿದೆ.
ಡಿಕೆಶಿ ಜತೆ ಸಚಿವರ ಪ್ರಮಾಣವಚನ
ನೂತನ ಸಿಎಂ ಆಗಿ ಡಿಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಅವರ ಜತೆ ಸಂಪುಟ ಸಚಿವರಾಗಿ ಕೆಲ ಶಾಸಕರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಒಂದು ಮೂಲಗಳ ಪ್ರಕಾರ, ಡಿಕೆ ಶಿವಕುಮಾರ್ ಜತೆ ಏಳು ಮಂದಿ ಹಿರಿಯ ಮತ್ತು ಅನುಭವಿ ಶಾಸಕರು ಸಂಪುಟ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ವರದಿಯಾದರೆ, ಮತ್ತೊಂದು ಮೂಲಗಳ ಪ್ರಕಾರ 12ರಿಂದ 13 ಮಂದಿ ನೂತನ ಸಚಿವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದೂ ತಿಳಿದುಬಂದಿದೆ.
ಸಚಿವರಾಗುವವರಾರು?
ಕಾಂಗ್ರೆಸ್ ಮೂಲಗಳ ಮಾಹಿತಿ ಪ್ರಕಾರ, ಹಾಲಿ ಇದ್ದ ಸಚಿವರು ಮತ್ತೊಮ್ಮೆ ಸಂಪುಟ ಸೇರ್ಪಡೆಯಾಗುವ ವಿಶ್ವಾಸದಲ್ಲಿದ್ದು, ಆ ಪೈಕಿ ಕೃಷ್ಣ ಬೈರೇಗೌಡ, ಪ್ರಿಯಾಂಕ್ ಖರ್ಗೆ, ಸತೀಶ್ ಜಾರಕಿಹೊಳಿ, ಕೆಜೆ ಜಾರ್ಜ್, ಈಶ್ವರ್ ಖಂಡ್ರೆ, ಎಂಬಿ ಪಾಟೀಲ್, ಡಾ.ಜಿ. ಪರಮೇಶ್ವರ್, ಎಚ್ ಕೆ ಪಾಟೀಲ್, ಶಿವರಾಜ ತಂಗಡಗಿ, ಕೆ ಎಚ್ ಮುನಿಯಪ್ಪ, ಮಂಕಾಳ್ ವೈದ್ಯ, ಸಂತೋಷ್ ಲಾಡ್ ಮತ್ತು ರಾಮಲಿಂಗಾ ರೆಡ್ಡಿ ಮೊದಲ ಹಂತದಲ್ಲಿ ಸಂಪುಟ ಸಚಿವರಾಗಿ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.
ಇವರಲ್ಲದೆ ಈಗಾಗಲೇ ಡಿಕೆ ಶಿವಕುಮಾರ್ ಅವರು ಕೆಲವರ ಹೆಸರನ್ನು ತನ್ನ ಮನಸ್ಸಲ್ಲಿ ಇಟ್ಟುಕೊಂಡಿದ್ದಾರೆ, ಹೈಕಮಾಂಡ್ ಒಪ್ಪಿದರೆ 13 ಮಂದಿ ಸಂಪುಟಕ್ಕೆ ಮರು ಸೇರ್ಪಡೆಯಾಗುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ. ಹೀಗಾಗಿ ನೂತನ ಸಚಿವ ಸಂಪುಟ ರಚನೆಗೆ ಕಸರತ್ತು ನಡೆದಿದ್ದು, ಸಚಿವರಾಗಲು ಆಕಾಂಕ್ಷಿಗಳು ಇನ್ನಿಲ್ಲದ ಪ್ರಯತ್ನ ಮಾಡುತ್ತಿದ್ದಾರೆ. ಈಗಾಗಲೇ ಈ ಸಂಬಂಧ ಚಟುವಟಿಕೆ ಗರಿಗೆದರಿದೆ.
ಸ್ಪೀಕರ್ ಯಾರು?
ಬಲ್ಲ ಮೂಲಗಳ ಪ್ರಕಾರ, ಹಾಲಿ ಸ್ಪೀಕರ್ ಯುಟಿ ಖಾದರ್ ಅವರು ಸಚಿವರಾಗುವ ಸಾಧ್ಯತೆ ನಿಚ್ಚಳವಾಗಿದ್ದು, ಈ ಹಿನ್ನೆಲೆಯಲ್ಲಿ ಅವರನ್ನು ಸ್ಪೀಕರ್ ಹುದ್ದೆಯಿಂದ ಕೆಳಗಳಿಸುವುದು ಬಹುತೇಕ ಖಚಿತವಾಗಿದೆ. ಹೀಗಾಗಿ ಯುಟಿ ಖಾದರ್ ಅವರಿಂದ ತೆರವಾಗುವ ಸ್ಪೀಕರ್ ಸ್ಥಾನಕ್ಕೆ ಈಗಾಗಲೇ ಸಚಿವರಾಗಿದ್ದ ದಿನೇಶ್ ಗುಂಡೂರಾವ್, ಹೆಚ್ ಕೆ ಪಾಟೀಲ್ ಅಥವಾ ಡಾ ಜಿ ಪರಮೇಶ್ವರ್ ಅವರನ್ನು ಸ್ಪೀಕರ್ ಮಾಡುವ ಬಗ್ಗೆಯೂ ಕಾಂಗ್ರೆಸ್ನಲ್ಲಿ ಚರ್ಚೆ ನಡೆದಿದೆ ಎಂದು ವರದಿಯಾಗಿದೆ.
ಒಟ್ಟಿನಲ್ಲಿ ಈ ಎಲ್ಲ ಗೊಂದಲಗಳಿಗೆ ಸೋಮವಾರ ತೆರೆ ಬೀಳುವ ಸಾಧ್ಯತೆ ಇದೆ. ಅತ್ತ ಡಿಕೆ ಶಿವಕುಮಾರ್ ಸಿಎಂ ಆಗಿ ಅಧಿಕಾರ ವಹಿಸಿಕೊಳ್ಳುವ ಕಾರ್ಯಕ್ರಮ ನಿರ್ವಿಘ್ನವಾಗಿ ನಡೆಯಲೆಂದು ಅನೇಕ ಕಡೆಗಳಲ್ಲಿ ಅವರ ಅಭಿಮಾನಿಗಳು ದೇವರಿಗೆ ವಿಶೇಷ ಪೂಜೆ ಸಲ್ಲಿಸುತ್ತಿದ್ದಾರೆ.