newsics.com/ನ್ಯೂಸಿಕ್ಸ್
ಬೆಂಗಳೂರು: ಡಿಕೆ ಶಿವಕುಮಾರ್ ಅವರೇ ಮುಂದಿನ 2 ವರ್ಷಗಳ ಕಾಲ ಶಾಸಕಾಂಗ ಪಕ್ಷದ ನಾಯಕ ಎಂದು ಸ್ವತಃ ಹಂಗಾಮಿ ಸಿಎಂ ಸಿದ್ದರಾಮಯ್ಯ ಅವರು ಘೋಷಣೆ ಮಾಡಿದರು.
ಈ ಮೂಲಕ ಅಧಿಕೃತವಾಗಿ ಡಿಕೆ ಶಿವಕುಮಾರ್ ಸಿಎಂ ಹುದ್ದೆಗೆ ಅರ್ಹತೆ ಪಡೆದುಕೊಂಡಿದ್ದಾರೆ. ಶೀಘ್ರದಲ್ಲಿಯೇ ಪಕ್ಷದಿಂದ ನೂತನ ಸಿಎಂ ಕುರಿತು ಅಧಿಕೃತ ಘೋಷಣೆ ಬರಲಿದೆ.
ಹೈಕಮಾಂಡ್ ಸೂಚನೆ ಮೀರೆಗೆ ಸಿಎಂ ಸ್ಥಾನಕ್ಕೆ ಗುರುವಾರ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ್ದರು. ಈ ಹಿನ್ನೆಲೆ ಶನಿವಾರ ವಿಧಾನಸೌಧದಲ್ಲಿ ಸಂಜೆ 5 ಗಂಟೆಗೆ ಶಾಸಕಾಂಗ ಪಕ್ಷದ ಸಭೆ ನಡೆಸಿ ನೂತನ ನಾಯಕನ ಆಯ್ಕೆ ನಡೆಯಿತು.
ರಾಜ್ಯದ ಎಲ್ಲಾ ಕಾಂಗ್ರೆಸ್ ಶಾಸಕರು ಆಗಮಿಸಿ ಔಪಚಾರಿಕವಾಗಿ ತಮ್ಮ ಅಭಿಪ್ರಾಯ ತಿಳಿಸಿದರು. ಪಕ್ಷದ ಕಡೆಯಿಂದ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ಎಐಸಿಸಿ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಉಪಸ್ಥಿತರಿದ್ದರು.
ಸಭೆಯ ಆರಂಭದಲ್ಲಿ ಸಿದ್ದರಾಮಯ್ಯ ಅವರು ನಮ್ಮ ಶಾಸಕಾಂಗ ಪಕ್ಷದ ನಾಯಕ ಡಿಕೆ ಶಿವಕುಮಾರ್ ಎಂದು ಒಂದು ಸಾಲಿನ ನಿರ್ಣಯ ಮಂಡಿಸಿದರು. ಔಪಚಾರಿಕವಾಗಿ ಡಾ ಜಿ ಪರಮೇಶ್ವರ್ ಅವರು ಅನುಮೋದನೆ ನೀಡಿದರು. ಈ ಮೂಲಕ ಎಲ್ಲ ಶಾಸಕರ ಒಪ್ಪಿಗೆ ಸಿಕ್ಕಂತಾಗಿದೆ.
ವಿಧಾನಸೌಧದಲ್ಲಿ ದೇವರ ಪೂಜೆ
ಶಾಸಕಾಂಗ ಪಕ್ಷದ ಸಭೆಗೂ ಮುನ್ನ ಡಿಕೆ ಶಿವಕುಮಾರ್ ಅವರು ಬೆಂಗಳೂರಿನ ಅಜ್ಜಯ್ಯನ ಪೀಠಕ್ಕೆ ತೆರಳಿ ನಮಸ್ಕರಿಸಿ ಬಂದರು. ಆ ಬಳಿಕವೂ ವಿಧಾನಸೌಧಕ್ಕೆ ಆಗಮಿಸಿ ಕೊಠಡಿಯೊಂದರಲ್ಲಿ ಒಬ್ಬರೇ ದೇವರ ಪ್ರಾರ್ಥನೆ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.