newsics.com/ನ್ಯೂಸಿಕ್ಸ್
ಕರ್ನಾಟಕ ರಾಜಕಾರಣದ ಟ್ರಬಲ್ ಶೂಟರ್ ಎಂದೇ ಹೆಸರಾದ ಡಿ.ಕೆ.ಶಿವಕುಮಾರ್ ಅವರ ಬಹುದಿನಗಳ ಮುಖ್ಯಮಂತ್ರಿ ಕನಸು ಕೊನೆಗೂ ನನಸಾಗುತ್ತಿದೆ. ಇಂದು ಸಂಜೆ 4:05ಕ್ಕೆ ಲೋಕಭವನದ ಗಾಜಿನ ಮನೆಯಲ್ಲಿ ನಡೆಯಲಿರುವ ಸರಳ ಸಮಾರಂಭದಲ್ಲಿ ಅವರು ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅವರು ನೂತನ ಸಿಎಂಗೆ ಪ್ರತಿಜ್ಞಾವಿಧಿ ಬೋಧಿಸಲಿದ್ದಾರೆ. ಹೈಕಮಾಂಡ್ ಸೂಚನೆಯಂತೆ ಆಡಂಬರವಿಲ್ಲದೆ, ಅತ್ಯಂತ ಶಿಸ್ತುಬದ್ಧವಾಗಿ ಈ ಐತಿಹಾಸಿಕ ಸಮಾರಂಭ ನೆರವೇರಲಿದ್ದು, ಬೆಂಗಳೂರಿನಾದ್ಯಂತ ನಿಯೋಜಿತ ಸಿಎಂ ಅವರ ಬೃಹತ್ ಕಟೌಟ್ ಹಾಗೂ ಬ್ಯಾನರ್ಗಳು ರಾರಾಜಿಸುತ್ತಿವೆ.
ಈ ಬಾರಿಯ ಪದಗ್ರಹಣ ಕಾರ್ಯಕ್ರಮಕ್ಕೆ ವಿಶೇಷವಾಗಿ ವಾಸ್ತು ಸ್ಪರ್ಶ ನೀಡಲಾಗಿದೆ. ಈ ಹಿಂದೆ ಲೋಕಭವನದಲ್ಲಿ ನಡೆಯುತ್ತಿದ್ದ ಕಲಾಪಗಳ ವೇದಿಕೆ ಪಶ್ಚಿಮಾಭಿಮುಖವಾಗಿ ಇರುತ್ತಿತ್ತು. ಆದರೆ, ಈ ಬಾರಿ ಜ್ಯೋತಿಷಿ ಆರಾಧ್ಯ ಅವರ ಸಲಹೆಯ ಮೇರೆಗೆ ವೇದಿಕೆಯನ್ನು ಪೂರ್ವಾಭಿಮುಖವಾಗಿ ಅತ್ಯಂತ ಆಕರ್ಷಕವಾಗಿ ಸಿದ್ಧಪಡಿಸಲಾಗಿದೆ. ಇಡೀ ಕಾರ್ಯಕ್ರಮದ ಜವಾಬ್ದಾರಿಯನ್ನು ಸಂಸದ ಡಿ.ಕೆ.ಸುರೇಶ್ ಹೊತ್ತುಕೊಂಡಿದ್ದು, ಪ್ರತಿಯೊಂದು ಸಿದ್ಧತೆಯನ್ನು ಸೂಕ್ಷ್ಮವಾಗಿ ಪರಿಶೀಲಿಸುತ್ತಿದ್ದಾರೆ.
ಮುಂಜಾಗ್ರತಾ ಕ್ರಮವಾಗಿ ವಸಂತನಗರದ ಶಾಂಗ್ರೀಲಾ ಹೋಟೆಲ್ ಹಾಗೂ ಕೆಪಿಸಿಸಿ ಕಚೇರಿಯ 1 ಕಿ.ಮೀ ವ್ಯಾಪ್ತಿಯಲ್ಲಿ ‘ನೋ-ಫ್ಲೈ ಝೋನ್’ ಘೋಷಿಸಲಾಗಿದೆ. ಭದ್ರತೆ ಹಾಗೂ ಟ್ರಾಫಿಕ್ ದಟ್ಟಣೆ ನಿಯಂತ್ರಿಸುವ ಸಲುವಾಗಿ ವಿಧಾನಸೌಧ, ವಿಕಾಸಸೌಧ ಮತ್ತು ಎಂ.ಎಸ್. ಬಿಲ್ಡಿಂಗ್ ಸಿಬ್ಬಂದಿಗೆ ಇಂದು ಅರ್ಧ ದಿನ ರಜೆ ಘೋಷಿಸಿ ಆದೇಶ ಹೊರಡಿಸಲಾಗಿದೆ.